ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರ ಕಣ್ಣೋರೆಸಲು ಧಾವಿಸಿದ ಕೇಂದ್ರ ಸರ್ಕಾರ; 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಪೂರೈಕೆ
Pralhad Joshi: ಮಾರುಕಟ್ಟೆಯಲ್ಲಿ ಈರುಳ್ಳಿ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ನಿರಂತರವಾಗಿ ಸಮಯೋಚಿತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ಸಂಗ್ರಹ ಚಿತ್ರ) -
ನವದೆಹಲಿ, ಆ. 25: ಮಹಾರಾಷ್ಟ್ರದ ನಾಸಿಕ್ನಿಂದ ಕಂದಾ ಎಕ್ಸ್ಪ್ರೆಸ್ ವಿಶೇಷ ರೈಲುಗಳಲ್ಲಿ 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿ ಪೂರೈಸಲಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದ್ದಾರೆ. ಆರಂಭಿಕವಾಗಿ ಚೆನ್ನೈ, ಮಧುರೈ, ದೆಹಲಿ, ಎರ್ನಾಕುಲಂ ಮತ್ತು ಗುವಾಹಟಿ ನಗರಗಳಿಗೆ ಕಂದಾ ಎಕ್ಸ್ಪ್ರೆಸ್ ರೈಲು ಮೂಲಕ ಈರುಳ್ಳಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಇತರೆ ನಗರಗಳಿಗೂ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಬಫರ್ ದಾಸ್ತಾನಿನ ಈರುಳ್ಳಿಯನ್ನು 35 ರುಪಾಯಿ ಕೆಜಿ ದರದಲ್ಲಿ NCCF, NAFED ಮತ್ತು ಕೇಂದ್ರೀಯ ಭಂಡಾರ್ ಮೂಲಕ ಶೀಘ್ರದಲ್ಲೇ ಲಭ್ಯವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿಯನ್ನು ಕಂದಾ ಎಕ್ಸ್ಪ್ರೆಸ್ ವಿಶೇಷ ರೈಲುಗಳಲ್ಲಿ ನಾಸಿಕ್ನಿಂದ ಸಾಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕಂದಾ ಎಕ್ಸ್ಪ್ರೆಸ್ ರೈಲು ಸುಮಾರು 40 ಟ್ರಕ್ಗಳಿಗೆ ಸಮನಾದ ಸರಕನ್ನು ಸಾಗಿಸುವ ಸಾಮರ್ಥ್ಯ ಹೊಂದಿದ್ದು, ಬೃಹತ್ ಪ್ರಮಾಣದಲ್ಲಿ ಪ್ರಮುಖ ನಗರಗಳ ಮಾರುಕಟ್ಟೆಗಳಿಗೆ ಈರುಳ್ಳಿ ತಲುಪಿಸಲಾಗುತ್ತಿದೆ.
ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಮತ್ತು ಲಭ್ಯತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಬೆಂಬಲ ಬೆಲೆ ನೀಡುವ ಮೂಲಕ ಗ್ರಾಹಕರು ಮತ್ತು ರೈತರ ಹಿತಾಸಕ್ತಿ ಕಾಪಾಡಲಾಗುತ್ತಿದೆ ಎಂದು ಜೋಶಿ ಹೇಳಿದ್ದಾರೆ.
ಮಾರುಕಟ್ಟೆಯಲ್ಲಿ ಈರುಳ್ಳಿ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ನಿರಂತರವಾಗಿ ಸಮಯೋಚಿತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.