Bomb threat: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಸ್ಫೋಟದ ಬೆದರಿಕೆ
bomb threat: ಮುಂಜಾಗ್ರತಾ ಕ್ರಮವಾಗಿ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಪ್ರವೇಶಿಸುವ ಪ್ರಯಾಣಿಕರ ತಪಾಸಣೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.

ಹುಬ್ಬಳ್ಳಿ ಏರ್ಪೋರ್ಟ್

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು (Hubballi Airport) ಸ್ಫೋಟಿಸುವುದಾಗಿ (bomb threat) ಭಾನುವಾರ ಸಂಜೆ ಇ-ಮೇಲ್ ಸಂದೇಶ ಬಂದಿದ್ದು, ಕೆಲ ಕಾಲ ಆತಂಕದ ಸನ್ನಿವೇಶ ನಿರ್ಮಾಣವಾಯಿತು. ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬೆದರಿಕೆ ಸಂದೇಶ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಪ್ರವೇಶಿಸುವ ಪ್ರಯಾಣಿಕರ ತಪಾಸಣೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿವೆ. ತಿಂಗಳ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಡಲಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಸಂದೇಶ ಬಂದಿತ್ತು. ಅದಾದ ಕೆಲವು ದಿನಗಳ ನಂತರ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಬಂದಿತ್ತು. ಬೆಂಗಳೂರಿನ, ಹಾಸನದ, ಉಡುಪಿಯ ಕೆಲವು ಶಾಲೆಗಳಿಗೂ ಬೆದರಿಕೆ ಸಂದೇಶ ಬಂದಿತ್ತು. ನಂತರ ಪೊಲೀಸ್ ತನಿಖೆಯಲ್ಲಿ, ಮಹಿಳೆಯೊಬ್ಬಳು ತನ್ನ ಮಾಜಿ ಲವರ್ ಮೇಲಿನ ದ್ವೇಷದಿಂದ ಇದನ್ನು ಕಳಿಸುತ್ತಿದ್ದುದು ಪತ್ತೆಯಾಗಿದ್ದು, ಆಕೆಯನ್ನು ಬಂಧಿಸಲಾಗಿದೆ.
ನಂದಿ ಬೆಟ್ಟ, ಸ್ಕಂದಗಿರಿಗೆ ಮೂರು ದಿನ ಪ್ರವಾಸಿಗರು, ಚಾರಣಿಗರಿಗೆ ನಿರ್ಬಂಧ
ಚಿಕ್ಕಬಳ್ಳಾಪುರ: ಜಿಲ್ಲೆಯ ವಿಶ್ವವಿಖ್ಯಾತ ನಂದಿಬೆಟ್ಟ (Nandi Hills) ಮತ್ತು ಚಾರಣಿಗರ ಸ್ವರ್ಗವೆಂದೇ ಖ್ಯಾತವಾದ ಸ್ಕಂದಗಿರಿ ಬೆಟ್ಟಗಳಿಗೆ (Skandhagiri Hills) ಮೂರು ದಿನ ನಿರ್ಬಂಧ ಹೇರಲಾಗಿದೆ. 2025ರ ಜೂನ್ 30ರಿಂದ ಜುಲೈ 3ರವರೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಆದೇಶವನ್ನು ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಜಾರಿಗೊಳಿಸಿದ್ದಾರೆ.
2025ರ 14ನೇ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಭದ್ರತೆ ಮತ್ತು ವಾಹನ ದಟ್ಟಣೆಯನ್ನು ತಡೆಗಟ್ಟುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದ ಪ್ರಮುಖ ಆಡಳಿತಾತ್ಮಕ ಕಾರ್ಯಕ್ರಮವಾದ ಸಚಿವ ಸಂಪುಟಕ್ಕಾಗಿ ಜಿಲ್ಲಾಡಳಿತವು ವಿಶೇಷ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ನಂದಿಬೆಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನಗಳ ಓಡಾಟವನ್ನು ನಿಯಂತ್ರಿಸಲು ಮತ್ತು ಜನಸಂದಣಿಯನ್ನು ತಪ್ಪಿಸಲು ಈ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಧಿಕಾರಿಗಳ ಈ ಆದೇಶವು ಸ್ಥಳೀಯ ಜನರಿಗೆ ಮತ್ತು ಪ್ರವಾಸಿಗರಿಗೆ ಮುಂಚಿತವಾಗಿ ತಿಳಿಸಲಾಗಿದ್ದು, ಯಾವುದೇ ಗೊಂದಲ ತಪ್ಪಿಸಲು ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ.
ನಂದಿಬೆಟ್ಟ, ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ತನ್ನ ರಮಣೀಯ ಸೌಂದರ್ಯ, ಐತಿಹಾಸಿಕ ಹಿನ್ನೆಲೆ ಮತ್ತು ಪ್ರಕೃತಿಯ ಸೊಗಸಿನಿಂದಾಗಿ ಇದು ದೇಶ-ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ. ನಂದಿಬೆಟ್ಟದ ಜೊತೆಗೆ, ಚಿಕ್ಕಬಳ್ಳಾಪುರ ತಾಲೂಕಿನ ಮತ್ತೊಂದು ಪ್ರಮುಖ ಚಾರಣ ತಾಣವಾದ ಸ್ಕಂದಗಿರಿಯಲ್ಲೂ ಪ್ರವೇಶ ನಿರ್ಬಂಧವನ್ನು ವಿಧಿಸಲಾಗಿದೆ. ಸ್ಕಂದಗಿರಿ ತನ್ನ ರೋಮಾಂಚಕ ಚಾರಣ ಮಾರ್ಗಗಳಿಂದ ಯುವಕರನ್ನು ಮತ್ತು ಸಾಹಸಿಗರನ್ನು ವಿಶೇಷವಾಗಿ ಆಕರ್ಷಿಸುತ್ತದೆ. ಜೂನ್ 30ರ ಮಧ್ಯಾಹ್ನ 2 ಗಂಟೆಯಿಂದ ಜುಲೈ 3ರ ಮಧ್ಯಾಹ್ನ 2 ಗಂಟೆಯವರೆಗೆ ಈ ಬೆಟ್ಟಕ್ಕೆ ಚಾರಣಿಗರು ಮತ್ತು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರ ಈ ಆದೇಶವು, ಸಚಿವ ಸಂಪುಟ ಸಭೆಯ ಸಂದರ್ಭದಲ್ಲಿ ಭದ್ರತೆಯನ್ನು ಖಾತರಿಪಡಿಸುವ ಜೊತೆಗೆ, ನಂದಿಬೆಟ್ಟ ಮತ್ತು ಸ್ಕಂದಗಿರಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ದಟ್ಟಣೆಯನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ. ಈ ತಾಣಗಳು ವಾರಾಂತ್ಯದಲ್ಲಿ ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುವುದರಿಂದ, ಈ ಸಂದರ್ಭದಲ್ಲಿ ಜನಸಂದಣಿಯನ್ನು ನಿಯಂತ್ರಿಸುವುದು ಅತ್ಯಗತ್ಯವಾಗಿದೆ. ಜಿಲ್ಲಾಡಳಿತವು ಈ ನಿರ್ಬಂಧವನ್ನು ಜಾರಿಗೊಳಿಸಲು ಸೂಕ್ತ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದು, ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರವನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ನಂದಿಬೆಟ್ಟದಲ್ಲಿ ರೂಂ ಬುಕಿಂಗ್, ಹೋಟೆಲ್ ಬುಕಿಂಗ್ ಮತ್ತು ಇತರ ಯಾವುದೇ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ.