ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ನಿಗೂಢ ಸಾವು: ಮದುವೆಗೆ ತೆರಳಿದ್ದ ಹಬುಲಾಲ್ ಗೋಪ್ ಶವವಾಗಿ ಪತ್ತೆ

BJP Worker death in West Bengal: ಮದುವೆಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪುರುಲಿಯಾ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕನಾಲಿ ಗ್ರಾಮದ ಬಳಿ ಶುಕ್ರವಾರ (ಮೇ 8) ಬೆಳಿಗ್ಗೆ 45 ವರ್ಷದ ಹಬುಲಾಲ್ ಗೋಪ್ ಅವರ ಮೃತದೇಹ ಪತ್ತೆಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ನಿಗೂಢ ಸಾವು

ಮದುವೆಗೆ ತೆರಳಿದ್ದ ಹಬುಲಾಲ್ ಗೋಪ್ ಶವವಾಗಿ ಪತ್ತೆ -

Priyanka P
Priyanka P May 10, 2026 11:47 AM

ಕೋಲ್ಕತ್ತಾ, ಮೇ 10: ಪಶ್ಚಿಮ ಬಂಗಾಳದಲ್ಲಿ (West Bengal) ಚುನಾವಣೆ ಫಲಿತಾಂಶ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇನ್ನೂ ಶಾಂತವಾಗುವ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ತೋರುತ್ತದೆ. ಮನೆಯಿಂದ ಹೊರಗೆ ಹೋಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು (BJP Worker) ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಪುರುಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮದುವೆಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತ ಹಬುಲಾಲ್ ಗೋಪ್ ಮೃತಪಟ್ಟವರು.

ಪುರುಲಿಯಾ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕನಾಲಿ ಗ್ರಾಮದ ಬಳಿ ಶುಕ್ರವಾರ (ಮೇ 8) ಬೆಳಿಗ್ಗೆ 45 ವರ್ಷದ ಹಬುಲಾಲ್ ಗೋಪ್ ಅವರ ಮೃತದೇಹ ಪತ್ತೆಯಾಗಿದೆ. ಇದು ಜನರನ್ನು ತೀವ್ರ ಆಘಾತಕ್ಕೀಡುಮಾಡಿದೆ. ಬೆಲ್ಡಿ ಗ್ರಾಮದ ನಿವಾಸಿ ಗೋಪ್, ಆ ಪ್ರದೇಶದಲ್ಲಿ ಸಕ್ರಿಯ ಬಿಜೆಪಿ ಕಾರ್ಯಕರ್ತನಾಗಿ ಹೆಸರುವಾಸಿಯಾಗಿದ್ದರು. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದರು ಎಂದು ಸ್ಥಳೀಯ ಬಿಜೆಪಿ ನಾಯಕರು ತಿಳಿಸಿದ್ದಾರೆ.

ಗುರುವಾರ (ಮೇ 7) ರಾತ್ರಿ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಲು ಅವರು ಹೊರಗೆ ಹೋಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆದರೆ ಶುಕ್ರವಾರ (ಮೇ 8) ಬೆಳಗ್ಗೆ, ಅವರ ಶವ ಗ್ರಾಮದ ಬಳಿ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ. ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಶಪಡಿಸಿಕೊಂಡರು. ನಂತರ ಶವವನ್ನು ಪುರುಲಿಯಾ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಯಿತು.

ಬಂಗಾಳದ ಹೌರಾದಲ್ಲಿ ಚುನಾವಣೋತ್ತರ ಹಿಂಸಾಚಾರ: ಟಿಎಂಸಿಯಿಂದ ಬಾಂಬ್ ದಾಳಿ

ಗೋಪ್ ಸಾವಿನ ಸುದ್ದಿ ಹರಡುತ್ತಿದ್ದಂತೆ, ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದುದರಿಂದ ಅಪರಿಚಿತ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದರು. ಹಬುಲಾಲ್ ಗೋಪ್ ಬಿಜೆಪಿಯಲ್ಲಿ ಸಕ್ರಿಯವಾಗಿದ್ದರು. ಅವರನ್ನು ಯೋಜಿತ ರೀತಿಯಲ್ಲಿ ಕೊಲೆ ಮಾಡಲಾಗಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ತಕ್ಷಣ ಬಂಧಿಸುವಂತೆ ಅವರು ಒತ್ತಾಯಿಸಿದ್ದಾರೆ.

ಈ ಸಾವು ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಆಕ್ರೋಶವನ್ನು ಹುಟ್ಟುಹಾಕಿತು. ಪಕ್ಷದ ಬೆಂಬಲಿಗರು ಗ್ರಾಮದ ಬಳಿ ಜಮಾಯಿಸಿದರು. ಬಿಜೆಪಿ ಯುವ ಮೋರ್ಚಾ ಸದಸ್ಯರು ಸ್ಥಳಕ್ಕೆ ತಲುಪಿ ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇನ್ನು ಪೊಲೀಸರು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದು, ಸಾವಿಗೆ ನಿಖರವಾದ ಕಾರಣವನ್ನು ತಿಳಿಯಲು ಮರಣೋತ್ತರ ಪರೀಕ್ಷೆಯ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ. ಈ ಘಟನೆಯು ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ರಾಜಕೀಯ ಉದ್ವಿಗ್ನತೆಯನ್ನು ತೀವ್ರಗೊಳಿಸಿದೆ. ಮೊನ್ನೆಯಷ್ಟೇ ಸುವೇಂದು ಅಧಿಕಾರಿ ಅವರ ಆಪ್ತನ ಹತ್ಯೆ ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು. ಇದಕ್ಕೆ ಟಿಎಂಸಿ ಮೇಲೆ ಪಕ್ಷ ಬೊಟ್ಟು ಮಾಡಿತ್ತು. ಇದೀಗ ಅಧಿಕಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರೂ, ರಾಜ್ಯದಲ್ಲಿ ಸಂಘರ್ಷ ನಿಂತಂತೆ ಕಾಣುತ್ತಿಲ್ಲ.