ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chinnaswamy Stadium Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ 11 ಮಂದಿ ಸಾವು; ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

Chinnaswamy Stadium Stampede: ಮೃತರ ಕುಟುಂಬಗಳಿಗೆ ಸರ್ಕಾರದಿಂದ 10 ಲಕ್ಷ ರೂ.ಗಳನ್ನು ಪರಿಹಾರ ನೀಡಲಾಗುತ್ತದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುತ್ತದೆ. ಚಿಕಿತ್ಸೆ ಖರ್ಚನ್ನು ಸರ್ಕಾರ ಭರಿಸಲಿದೆ. ಇನ್ನು ಘಟನೆ ಕುರಿತು ಮ್ಯಾಜಿಸ್ಟ್ರಿಯಲ್‌ ತನಿಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವು; 10 ಲಕ್ಷ ಪರಿಹಾರ ಘೋಷಣೆ

ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ ಸಿಲುಕಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.

Profile Prabhakara R Jun 4, 2025 8:20 PM

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವದ ವೇಳೆ ಬುಧವಾರ ನಡೆದ ಕಾಲ್ತುಳಿತ ದುರಂತದಲ್ಲಿ (Chinnaswamy Stadium Stampede ) ಸಾವಿನ ಸಂಖ್ಯೆ 11ಕ್ಕೆ ಏರಿದೆ. ಸ್ಟೇಡಿಯಂನೊಳಗೆ ಹೋಗಲು ಸಾವಿರಾರು ಅಭಿಮಾನಿಗಳು ಬಂದ ಹಿನ್ನೆಲೆ ನೂಕುನುಗ್ಗಲು ಸಂಭವಿಸಿ, 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡ 11 ಮಂದಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಯಾವುದೇ ಘಟನೆ ನಡೆದಿಲ್ಲ. ಆದರೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದುರಂತ ನಡೆದಿದೆ. ಯಾರೂ ಕೂಡ ಇಂತಹ ದುರ್ಘಟನೆ ನಿರೀಕ್ಷಿಸಿರಲಿಲ್ಲ. ಇದಕ್ಕೆ ಕಾರಣವೇನೆಂದರೆ, ಸ್ಟೇಡಿಯಂನಲ್ಲಿ 35 ಸಾವಿರ ಆಸನ ಸಾಮರ್ಥ್ಯವಿದೆ. ಆದರೆ ಎರಡು ಮೂರು ಲಕ್ಷ ಜನ ಇಲ್ಲಿಗೆ ಆಗಮಿಸಿದ್ದರು. ಹೀಗಾಗಿ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರದಿಂದ 10 ಲಕ್ಷ ರೂ.ಗಳನ್ನು ಪರಿಹಾರ ನೀಡಲಾಗುತ್ತದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುತ್ತದೆ. ಚಿಕಿತ್ಸೆ ಖರ್ಚನ್ನು ಸರ್ಕಾರ ಭರಿಸಲಿದೆ. ಇನ್ನು ಘಟನೆ ಕುರಿತು ಮ್ಯಾಜಿಸ್ಟ್ರಿಯಲ್‌ ತನಿಖೆಗೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.



ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು. ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ. ಪ್ರೀತಿ - ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.