Vishnuvardhan Memorial: ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ಖರೀದಿಸಿದ ನಟ ಸುದೀಪ್
Kiccha sudeep: ನಟ ಕಿಚ್ಚ ಸುದೀಪ್ ಅವರು ಬೆಂಗಳೂರಿನ ಕೆಂಗೇರಿಯ ಅಭಿಮಾನ್ ಸ್ಟುಡಿಯೋದಿಂದ ಸ್ವಲ್ಪ ದೂರದಲ್ಲಿ ಅರ್ಧ ಎಕರೆ ಜಾಗ ಖರೀದಿಸಿದ್ದು, ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಅಲ್ಲಿ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕುವುದಾಗಿ ಮಾಹಿತಿ ಲಭ್ಯವಾಗಿದೆ.


ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು (Vishnuvardhan Memorial) ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಈ ಬಗ್ಗೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ನಟ ಕಿಚ್ಚ ಸುದೀಪ್ (Kiccha sudeep) ಅವರು, ಈ ವಿಚಾರದಲ್ಲಿ ಅಭಿಮಾನಿಗಳ ಪರ ನಿಲ್ಲುತ್ತೇನೆ. ಸ್ಮಾರಕವಿದ್ದ ಜಾಗವನ್ನು ಉಳಿಸಲು ಹಾಗೂ ಮರುಸ್ಥಾಪನೆ ಮಾಡುವುದಕ್ಕೆ ನಾನು ತಯಾರಿದ್ದೀನಿ ಎಂದು ಹೇಳಿದ್ದರು. ಇದೀಗ ಇದೀಗ ಕೆಂಗೇರಿ ಬಳಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸುದೀಪ್ ಭೂಮಿ ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಷ್ಣುವರ್ಧನ್ ಅವರ ಅಭಿಮಾನಿಯೂ ಆದ ಕಿಚ್ಚ ಸುದೀಪ್, ವಿಷ್ಣುವರ್ಧನ್ ಸಮಾಧಿ ಧ್ವಂಸ ವಿಚಾರ ತಿಳಿದು ಭಾವುಕರಾಗಿದ್ದರು. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನು ಖರೀದಿ ಮಾಡಿರುವರೋ, ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ ಎಂದು ಹೇಳಿದ್ದರು. ಇದೀಗ ಸ್ಮಾರಕಕ್ಕಾಗಿ ಭೂಮಿ ಖರೀದಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಟ ಕಿಚ್ಚ ಸುದೀಪ್ ಅವರು ಅಭಿಮಾನ್ ಸ್ಟುಡಿಯೋದಿಂದ ಸ್ವಲ್ಪ ದೂರದಲ್ಲಿ ಅರ್ಧ ಎಕರೆ ಜಾಗ ಖರೀದಿಸಿದ್ದಾರೆ. ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಅಲ್ಲಿ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಡಾ.ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ಅಭಿಮಾನ್ ಸ್ಟುಡಿಯೊ ಭೂಮಿ ವಿವಾದ ಕೋರ್ಟ್ನಲ್ಲಿ ಇರುವುದರಿಂದ ವಿಷ್ಣುವರ್ಧನ್ ಅವರ ಜನ್ಮದಿನ ಆಚರಿಸಲು ಪರ್ಯಾಯವಾಗಿ ದರ್ಶನ ಕೇಂದ್ರ ಮಾಡಲು ನಿರ್ಧರಿಸಿದ್ದೇವೆ. ಇದಕ್ಕೆ ಸುದೀಪ್ ಅವರು ಭೂಮಿ ಖರೀದಿಸುತ್ತಿದ್ದಾರೆ. ಒಂದು ವರ್ಷದೊಳಗೆ ದರ್ಶನ ಕೇಂದ್ರದ ಕೆಲಸ ಮುಗಿಸಲು ನಾವು ತೀರ್ಮಾನಿಸಿದ್ದೇವೆ. ಇದೇ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ದಿನವೇ ಅಡಿಗಲ್ಲು ಹಾಕಲಿದ್ದೇವೆ. ದರ್ಶನ ಕೇಂದ್ರದಲ್ಲಿ 25 ಅಡಿ ಎತ್ತರದ ಪ್ರತಿಮೆ ಮಾಡುತ್ತಿದ್ದು, ಒಂದು ಗ್ರಂಥಾಲಯವೂ ಇರಲಿದೆ ಎಂದು ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ.
ಅಭಿಮಾನ್ ಸ್ಟುಡಿಯೋದಲ್ಲಿ ಪುಣ್ಯಭೂಮಿ ಉಳಿಸಿಕೊಳ್ಳಲು ನಾವು ಪ್ರಯತ್ನಿಸುತ್ತೇವೆ. ಅಲ್ಲಿಯರೆಗೆ ಒಂದು ದರ್ಶನ ಕೇಂದ್ರದ ಅಗತ್ಯವಿದೆ. ಹೀಗಾಗಿ ಸ್ಮಾರಕಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Kichcha Sudeepa: ದೇವಸ್ಥಾನ ಒಡೆದಷ್ಟೇ ಸಂಕಟವಾಗಿದೆ; ವಿಷ್ಣುವರ್ಧನ್ ಸಮಾಧಿ ತೆರವಿಗೆ ಕಿಚ್ಚ ಸುದೀಪ್ ಆಕ್ರೋಶ
ಸ್ಮಾರಕದ ಬಗ್ಗೆ ಸುದೀಪ್ ಏನು ಹೇಳಿದ್ದರು?
ವಿಷ್ಣು ಸಮಾಧಿ ತೆರವು ಬಗ್ಗೆ ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ನಟ ಸುದೀಪ್ ಅವರು, ವಿಷ್ಣುವರ್ಧನ್ ಅಂತಹ ಒಬ್ಬ ಮೇರು ನಟರಿಗೆ, ಬೆಂಗಳೂರಿನಂತಹ ರಾಜಧಾನಿಯಲ್ಲಿ ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ ಇದು ಅತ್ಯಂತ ಖಂಡನೀಯ. ಅಭಿಮಾನ್ ಸ್ಟುಡಿಯೋದಲ್ಲಿನ ಜಾಗ ಖರೀದಿಸುವವರಿಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ವಿಷ್ಣುವರ್ಧನ್ ಸ್ಮಾರಕವನ್ನು ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ ಎಂದು ಹೇಳಿದ್ದರು.