ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ban on RSS activities: ಆರ್‌ಎಸ್ಎಸ್‌ಗೆ ಅಂಕುಶ; ತಮಿಳುನಾಡು ಮಾದರಿ ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

CM Siddaramaiah: ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ. ಈ ಬಗ್ಗೆ ಪರಿಶೀಲಿಸಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆರ್‌ಎಸ್ಎಸ್‌ಗೆ ಅಂಕುಶ; ತಮಿಳುನಾಡು ಮಾದರಿ ಪರಿಶೀಲಿಸಲು ಸಿಎಂ ಸೂಚನೆ

-

Prabhakara R Prabhakara R Oct 13, 2025 9:03 PM

ಬಾಗಲಕೋಟೆ, ಅಕ್ಟೋಬರ್ 13: ಸರ್ಕಾರಿ ಸ್ಥಳದಲ್ಲಿ ಆರ್‌ಎಸ್‌ಎಸ್ (Ban on RSS activities) ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಪ್ರಿಯಾಂಕ್‌ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಪತ್ರ ಬರೆದಿರುವ ಬಗ್ಗೆ ಬಾಗಲಕೋಟೆಯಲ್ಲಿ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ. ಈ ಬಗ್ಗೆ ಪರಿಶೀಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿರುವ ಸಿಎಂ, ಅವರ ಆರೋಗ್ಯ ಸುಧಾರಣೆಯಾಗುತ್ತಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು.

ಸಂಪುಟ ಪುನರ್‌ ರಚನೆಗೂ ಇಂದಿನ ಭೋಜನ ಕೂಟಕ್ಕೂ ಸಂಬಂಧವಿಲ್ಲ

ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ಅವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್‌ನ ಆರ್ಶೀವಾದವಿರಬೇಕು. ಇಂದಿನ ಭೋಜನ ಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಎಂದರು.

ನನಗೆ ಮಾಟಮಂತ್ರಗಳಲ್ಲಿ ನಂಬಿಕೆಯಿಲ್ಲ

ಶಾಸಕ ಮುನಿರತ್ನ ಮತ್ತು ಡಿ.ಕೆ. ಶಿವಕುಮಾರ್ ಅವರ ನಡೆದ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್‌ಬಾಗ್‌ನಂತೆ ಮತ್ತಿಕರೆಯ ಜೆ.ಪಿ. ಪಾರ್ಕ್‌ನಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ . ನಾನು ಯಾವುದೇ ಮಾಟಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸೂಕ್ತ ಅನುದಾನ ನೀಡಿ, ಮುಂದಿನ ನಾಲ್ಕು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಈ ಸುದ್ದಿಯನ್ನೂ ಓದಿ | Ban On RSS Activities: ಮತ್ತೊಮ್ಮೆ ಆರ್‌ಎಸ್‌ಎಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿಲ್ಲ: ವಿಜಯೇಂದ್ರ ಗುಡುಗು

ಸಂಪುಟ ಪುನರ್‌ ರಚನೆ

ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜಿನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್‌ ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.