ದೇವನಹಳ್ಳಿಯಲ್ಲಿ ಶ್ರೀರಾಮನವಮಿ ಪ್ರಸಾದ ಸೇವಿಸಿ 400ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Devanahalli News: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಶ್ರೀರಾಮನವಮಿ ಹಿನ್ನೆಲೆಯಲ್ಲಿ ವಿತರಿಸಿದ ಪ್ರಸಾದ ಸೇವಿಸಿ 400ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿಯಲ್ಲಿ ವೈದ್ಯಕೀಯ ಸಿಬ್ಬಂದಿಯಿಂದ ತಪಾಸಣೆ. -
ದೇವನಹಳ್ಳಿ: ಶ್ರೀರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ವಿತರಿಸಿದ ಪ್ರಸಾದ ಸೇವಿಸಿ 400ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಅಸ್ವಸ್ಥರಾದವರ ಪೈಕಿ 200ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸಾದ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡವರನ್ನು ಅರದೇಶನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಹುತೇಕರು ಚೇತರಿಸಿಕೊಂಡಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಬೀಡುಬಿಟ್ಟು ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, "ಪ್ರಸಾದ ಸೇವಿಸಿ ರಾತ್ರಿ 10 ಗಂಟೆಯಿಂದ ಗ್ರಾಮಸ್ಥರ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ. ಕೆಲವರಿಗೆ ಹೊಟ್ಟೆನೋವು, ವಾಂತಿ-ಭೇದಿಯಾಗಿ ಅಸ್ವಸ್ಥಗೊಂಡಿದ್ದಾರೆ. ಸುಮಾರು 400 ಜನರ ಆರೋಗ್ಯ ಏರುಪೇರಾಗಿದೆ. ಕೆಲವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಇನ್ನು ಕೆಲವರು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಶಾ ತಂಡ, ಆರ್ಆರ್ಟಿ ತಂಡ, ಆರೋಗ್ಯ ಸಿಬ್ಬಂದಿ ಮಾನಿಟರ್ ಮಾಡ್ತಿದ್ದಾರೆ. ಮನೆ ಮನೆಗೆ ಭೇಟಿ ಕೊಟ್ಟು ಮಾಹಿತಿ ಪಡೆದು ಚಿಕಿತ್ಸೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಂಸ್ಕೃತಿ ಹಾಗೂ ಧಾರ್ಮಿಕ ಮೌಲ್ಯಗಳ ಪ್ರತೀಕ ಶ್ರೀರಾಮನವಮಿ: ಶಾಸಕ ರವಿಕುಮಾರ್
ಗ್ರಾಮಸ್ಥರು, ದಾರಿಹೋಕರು, ಅಕ್ಕಪಕ್ಕದ ಗ್ರಾಮಸ್ಥರು ಪ್ರಸಾದ ಸೇವಿಸಿದ್ದಾರೆ. ಅನ್ನ ಪ್ರಸಾದದಲ್ಲಿದ್ದ ಆಹಾರ ಮತ್ತು ಪದಾರ್ಥಗಳನ್ನು ಟೆಸ್ಟಿಂಗ್ಗಾಗಿ ಕಳಿಸಿದ್ದೇವೆ. ಅಡುಗೆ ತಯಾರಿಕೆಗೆ ಬಳಸಿರುವ ನೀರನ್ನೂ ಸಹ ಟೆಸ್ಟಿಂಗ್ಗಾಗಿ ಕಳಿಸಿದ್ದೇವೆ. ಒಂದು ದಿನದಲ್ಲಿ ರಿಪೋರ್ಟ್ ಬರಲಿದ್ದು, ಫುಡ್ ಪಾಯ್ಸನ್ಗೆ ನಿಜವಾದ ಕಾರಣ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.