Bengaluru Traffic: ಬೆಂಗಳೂರಲ್ಲಿ ಇನ್ನು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ರೆ ಜೋಕೆ, ಎಫ್ಐಆರ್ ಬೀಳಬಹುದು!
ಸಿಗ್ನಲ್ ಜಂಪ್ ಮಾಡುವುದು ಮತ್ತು ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸುವುದು ಬೆಂಗಳೂರಿನಲ್ಲಿ ಸಾಮಾನ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿರುವ ಕಾರಣ ಇಲಾಖೆ ಕಠಿಣ ಕ್ರಮ ಜಾರಿಗೆ ಮುಂದಾಗಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)ಯ ಸೆಕ್ಷನ್ 285 (ಸಾರ್ವಜನಿಕ ಮಾರ್ಗದಲ್ಲಿ ಅಪಾಯ ಅಥವಾ ಅಡ್ಡಿ ಉಂಟುಮಾಡುವುದು) ಅಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗಲಿದೆ.
ಬೆಂಗಳೂರು ಟ್ರಾಫಿಕ್ ಪೊಲೀಸ್ -
ಬೆಂಗಳೂರು, ಜ.13: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೇನಾಯ್ತು, ದಂಡ (Fine) ಕಟ್ಟಿದರಾಯಿತು ಬಿಡು ಅಂತ ಉಡಾಫೆ ಮಾಡಿ ಹೋದ್ರೆ ಇನ್ನು ಮುಂದೆ ನಿಮಗೆ ಅಪಾಯ ಕಾದಿದೆ. ಬೆಂಗಳೂರಿನಲ್ಲಿ (Bengaluru Traffic rules) ಇನ್ನು ಸಂಚಾರ ನಿಯಮಗಳ ಪಾಲನೆ ಮಾಡದಿದ್ದರೆ ದಂಡ ಒಂದೇ ಬೀಳಲ್ಲ, ಕೇಸ್ ಕೂಡ ದಾಖಲಾಗುತ್ತೆ. ನಿಯಮ ಉಲ್ಲಂಘಿಸುವವರ ವಿರುದ್ಧ ಬೆಂಗಳೂರಲ್ಲಿ ಪೊಲೀಸರು ಈಗಾಗಲೇ ಎಫ್ಐಆರ್ ದಾಖಲಿಸಲು ಆರಂಭಿಸಿದ್ದಾರೆ.
ಸಿಗ್ನಲ್ ಜಂಪ್ ಮಾಡುವುದು, ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು ಹಾಗೂ ರಸ್ತೆಗಳ ಮೇಲೆ ವಾಹನ ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಉಂಟುಮಾಡುವಂತಹ ಪ್ರಕರಣಗಳಿಗೆ ಸಂಬಂಧಿಸಿ ಆಯಾ ಪ್ರದೇಶಗಳ ವ್ಯಾಪ್ತಿಯ ಸಂಚಾರ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ಗಳನ್ನು ದಾಖಲಿಸಲಾಗುತ್ತಿದೆ. ಈ ಬಗ್ಗೆ ಸ್ವತಃ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅನೂಪ್ ಶೆಟ್ಟಿ ಅವರೇ ಮಾಹಿತಿ ನೀಡಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಸಿಗ್ನಲ್ ಜಂಪ್ ಮಾಡುವುದು ಮತ್ತು ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸುವುದು ಬೆಂಗಳೂರಿನಲ್ಲಿ ಸಾಮಾನ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿರುವ ಕಾರಣ ಇಲಾಖೆ ಕಠಿಣ ಕ್ರಮ ಜಾರಿಗೆ ಮುಂದಾಗಿದೆ. ಪೊಲೀಸ್ ಅಂಕಿ ಅಂಶಗಳ ಪ್ರಕಾರ 2025ರ ಜನವರಿಯಿಂದ ನವೆಂಬರ್ವರೆಗೆ ಬೆಂಗಳೂರಿನಲ್ಲಿ 6,62,447 ಸಿಗ್ನಲ್ ಜಂಪಿಂಗ್ ಪ್ರಕರಣಗಳು ಹಾಗೂ 3,02,962 ನೋ-ಎಂಟ್ರಿ ಉಲ್ಲಂಘನೆಗಳು ದಾಖಲಾಗಿವೆ. ಏಕಮುಖ ರಸ್ತೆಯಲ್ಲಿನ ಸಂಚಾರ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುವ ಜೊತೆಗೆ ಅಪಘಾತಗಳಿಗೂ ಎಡೆಮಾಡಿಕೊಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)ಯ ಸೆಕ್ಷನ್ 285 (ಸಾರ್ವಜನಿಕ ಮಾರ್ಗದಲ್ಲಿ ಅಪಾಯ ಅಥವಾ ಅಡ್ಡಿ ಉಂಟುಮಾಡುವುದು) ಅಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗಲಿದೆ.
ಇದೇ ಸೆಕ್ಷನ್ ಅಡಿಯಲ್ಲಿ, ಬಸ್ ಹಾಗೂ ರೈಲು ನಿಲ್ದಾಣಗಳ ಬಳಿ ರಸ್ತೆ ಮೇಲೆ ವಾಹನಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ತೊಂದರೆ ಉಂಟು ಮಾಡುವ ಆಟೋರಿಕ್ಷಾ ಹಾಗೂ ಕಾರುಗಳ ಮೇಲೂ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಸಿಗ್ನಲ್ ಜಂಪಿಂಗ್ ಕೂಡ ಗಂಭೀರ ಅಪಘಾತಗಳಿಗೆ ಕಾರಣವಾಗಬಹುದು. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಬಿಎನ್ಎಸ್ನ ಸೆಕ್ಷನ್ 281 (ಸಾರ್ವಜನಿಕ ಮಾರ್ಗದಲ್ಲಿ ಅಜಾಗರೂಕ ಅಥವಾ ನಿರ್ಲಕ್ಷ್ಯ ಚಾಲನೆ) ಅಡಿಯಲ್ಲಿ ಕೇಸ್ ದಾಖಲಾಗಲಿದೆ. ಹಿಂದೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದವರು ಸ್ಥಳದಲ್ಲೇ ದಂಡ ಪಾವತಿಸಿ ಮತ್ತೆ ಅದೇ ತಪ್ಪು ಮಾಡುತ್ತಿದ್ದರು. ಆದರೆ ಈಗ ಎಫ್ಐಆರ್ ದಾಖಲಾದ ಬಳಿಕ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ ಮತ್ತು ದಂಡ ಪಾವತಿಸಲು ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ. ಇದು ದೀರ್ಘ ಪ್ರಕ್ರಿಯೆಯಾಗಿರುವ ಕಾರಣ ಪರಿಣಾಮ ದೊಡ್ಡದಿರಲಿದೆ ಎಂಬುದು ಪೊಲೀಸರ ಅಭಿಪ್ರಾಯ.
Bangalore Traffic:: ಬೆಂಗಳೂರಿನ ಟ್ರಾಫಿಕ್ ದಟ್ಟಣೆ ನಿವಾರಣೆಗೆ ʼಕೋಬ್ರಾ ಬೀಟ್ʼ, ಏನಿದು?