Sugarcane Price: ಕಟಾವು, ಸಾಗಾಣಿಕೆ ವೆಚ್ಚ ಹೊರತುಪಡಿಸಿ ಪ್ರತಿ ಟನ್ ಕಬ್ಬಿಗೆ 3,300 ರೂ. ಕೊಡಲು ತೀರ್ಮಾನ: ಸಿಎಂ
CM Siddaramaiah's Pressmeet: ಕ್ಯಾಬಿನೆಟ್ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಕಬ್ಬು ದರ ಹೆಚ್ಚಳದ ಬಗ್ಗೆ ಮಾತನಾಡಿದರು. -
ಬೆಂಗಳೂರು ನ. 7: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ (Sugarcane Price) 3300 ರೂ. ಕೊಡಲು ನಿರ್ಧರಿಸಿದ್ದಾರೆ. ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರವನ್ನು ಸಿಎಂ ಪ್ರಕಟಿಸಿದ್ದು, ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50 ರೂ. ಸೇರಿಸಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 3,300 ಕೊಡಲು ತೀರ್ಮಾನ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.
ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ. ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಕೇಂದ್ರ ಸರ್ಕಾರದ FRP ದರ ವಿರೋಧಿಸಿ ಇನ್ನೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ.
ಪ್ರತಿಭಟನಾ ನಿರತ ರೈತ ಮುಖಂಡರ ಜತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ. ಶೇ.10.25 ಇಳುವರಿ ರಿಕವರಿ ಇರುವ ಕಬ್ಬಿಗೆ 3100 ರೂ, ಶೇ.11.25 ಇಳುವರಿ ರಿಕವರಿ ಇರುವ ಕಬ್ಬಿಗೆ 3200 ರೂ. ಕೊಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಭಟನಾ ರೈತರು ಒಪ್ಪಿಲ್ಲ. ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಸಕ್ಕರೆ ಸಚಿವರಾದ ಶಿವಾನಂದ ಪಾಟೀಲರು ಮಾತುಕತೆ ನಡೆಸಿದರೂ ರೈತರು ಒಪ್ಪಿಲ್ಲ. ಬಳಿಕ ಕ್ಯಾಬಿನೆಟ್ನಲ್ಲಿ ಚರ್ಚಿಸಿ, "ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜತೆ ಚರ್ಚೆ ನಡೆಸುವ ಜತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದರು.
ಈ ಸುದ್ದಿಯನ್ನೂ ಓದಿ | Sugarcane Farmers Protest: ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಕ್ಯಾಬಿನೆಟ್ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದರು.
ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸ ಆಗುತ್ತದೆ. ಆದರೆ, ಎಲ್ಲಾ ಇಳುವರಿಗೂ 100 ರೂ. ಹೆಚ್ಚಳ ಆಗಲಿದೆ. ಕೇಂದ್ರ ಸರ್ಕಾರ 10-5-2025ರಂದು ಕಟಾವು ಮತ್ತು ಸಾಗಾಟ ಸೇರಿಸಿ ಶೇ.10.5 ರಿಕವರಿ ಇರುವ ಕಬ್ಬಿಗೆ ಪ್ರತಿ ಮೆಟ್ರಿಕ್ ಟನ್ 3,550 ರೂ. ನಿಗದಿಪಡಿಸಿದೆ. ರಾಜ್ಯದಲ್ಲಿ ಕಳೆದ ವರ್ಷ 5.6 ಕೋಟಿ ಮೆ.ಟನ್ ಸಕ್ಕರೆ ಉತ್ಪಾದಿಸಲಾಗಿದ್ದು, ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆ.ಟನ್ ಉತ್ಪಾದನೆ ಅಂದಾಜಿದೆ.
ಇಂದು ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಅನ್ವಯವಾಗುವಂತೆ ಕಟಾವು ಮತ್ತು ಸಾಗಾಟ ವೆಚ್ಚಕ್ಕೆ ಹೊರತುಪಡಿಸಿ, ಶೇ.11.25 ರಿಕವರಿ ಕಬ್ಬಿಗೆ 3,250 ರೂ. ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ 50 ರೂ. ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ 100 ರೂ. ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲಿಕರು ಒಪ್ಪಿಗೆ ಸೂಚಿಸಿದ್ದಾರೆ. ರಿಕವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು. ಇದಕ್ಕೆ ರೈತರು ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ.
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಮನವಿ ಮಾಡಿದ್ದು, ರೈತರು ಸಹ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡು ಕಾನೂನು ವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಸಿಎಂ ತಿಳಿಸಿದರು.
ಸಕ್ಕರೆ ಕಾರ್ಖಾನೆ ಮಾಲಿಕರು ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದು, ಇದನ್ನು ಬಗೆಹರಿಸಲು ಚರ್ಚೆ ನಡೆಸುವುದಾಗಿ ತಿಳಿಸಿದ್ದೇವೆ. ಸಕ್ಕರೆ ಎಂಎಸ್ಪಿ ಹೆಚ್ಚಳ, ಎಥೆನಾಲ್ ಹಂಚಿಕೆ ಹೆಚ್ಚಳ, ಸಕ್ಕರೆ ರಫ್ತು ಮಿತಿಯನ್ನು ಹೆಚ್ಚಿಸುವುದು ಸೇರಿದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಕೇಂದ್ರಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗ ಕರೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದೇವೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ | Sugarcane Farmers Protest: ಕಬ್ಬು ರಿಕವರಿ ಆಧಾರದಲ್ಲಿ ದರ ಹೆಚ್ಚಳ ಮಾಡಿ; ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಿಎಂ ಸೂಚನೆ
ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಹೇಳಿದರು.