Govt Job aspirants protest: ಖಾಲಿ ಹುದ್ದೆಗಳ ಭರ್ತಿ ಮಾಡದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ; ಸರ್ಕಾರಕ್ಕೆ ರಾಜ್ಯ ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ
ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸ್ಪಷ್ಟ ಹಾಗೂ ತಕ್ಷಣದ ನಿರ್ಧಾರ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಂಟಾಗುವ ಯಾವುದೇ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗುತ್ತದೆ. ನಮ್ಮ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ತಿಳಿಸಿದೆ.
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತ್ ಕುಮಾರ್. -
ಬೆಂಗಳೂರು: ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡ ಸೇರಿ ರಾಜ್ಯದ ವಿವಿಧೆಡೆ ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆಗಳು ನಡೆದಿವೆ. ಸರ್ಕಾರ ಯುವಕರ ಆಶಯಗಳಿಗೆ ಸ್ಪಂದಿಸಿ, ಖಾಲಿ ಹುದ್ದೆಗಳ ಭರ್ತಿಗೆ ಸ್ಪಷ್ಟ ವೇಳಾಪಟ್ಟಿ ಪ್ರಕಟಿಸಿ, ನೇಮಕಾತಿ ಪ್ರಕ್ರಿಯೆಯನ್ನು ಈ ಕೂಡಲೇ ಪ್ರಾರಂಭಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳ್ಳಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ಕಾಂತ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸ್ಪಷ್ಟ ಹಾಗೂ ತಕ್ಷಣದ ನಿರ್ಧಾರ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಂಟಾಗುವ ಯಾವುದೇ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗುತ್ತದೆ. ಯುವಕರ ಭವಿಷ್ಯವನ್ನು ನಿರ್ಲಕ್ಷಿಸುವ ಧೋರಣೆ ಇನ್ನು ಸಹಿಸಲಾಗದು. ನಮ್ಮ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಪ್ರತೀ ಜಿಲ್ಲೆಯಲ್ಲೂ ಹೋರಾಟ ನಡೆಸಿದ್ದೇವೆ. ಇದು ಕೇವಲ ಒಂದು ಸಂಘಟನೆಯ ಹೋರಾಟವಲ್ಲ. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ, ಪರಿಶ್ರಮ ಮತ್ತು ನಿರೀಕ್ಷೆಗಳ ಪ್ರತಿಬಿಂಬವಾಗಿದೆ. ವಿದ್ಯಾರ್ಥಿಗಳು ವರ್ಷಗಳ ಕಾಲ ಶ್ರಮಿಸಿ, ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ನೇಮಕಾತಿ ವಿಳಂಬದಿಂದ ಅವರ ಕನಸುಗಳು ಅನಿಶ್ಚಿತತೆಯಲ್ಲಿ ಸಿಲುಕಿವೆ. ನಿರುದ್ಯೋಗಿ ಯುವಕರ ನೋವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸರ್ಕಾರ ಯುವಕರ ಆಶಯಗಳಿಗೆ ಸ್ಪಂದಿಸಿ, ಖಾಲಿ ಹುದ್ದೆಗಳ ಭರ್ತಿಗೆ ಸ್ಪಷ್ಟ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಆಗ್ರಹಿಸಿದರು.
CET Exam: ಸಿಇಟಿ ಪರೀಕ್ಷೆಯಲ್ಲಿ ಮತ್ತೆ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ!
ಕೆಪಿಎಸ್ಸಿ ಅಕ್ರಮಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಿ
ವರ್ಷಗಳಿಂದ ಯುವಜನರ ಭವಿಷ್ಯ ಅನಿಶ್ಚಿತತೆಯಲ್ಲಿ ತೂಗುತ್ತಿದೆ. ಉದ್ಯೋಗದ ನಿರೀಕ್ಷೆಯಲ್ಲಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳ ಸಹನೆಗೆ ಮಿತಿ ಇದೆ. ಕೆಪಿಎಸ್ಸಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ತಕ್ಷಣ ಒಪ್ಪಿಸಬೇಕು. ನೇಮಕಾತಿ ವ್ಯವಸ್ಥೆಯ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸುವುದು ಅಗತ್ಯ. ಪಾರದರ್ಶಕತೆ ಇಲ್ಲದೆ, ನ್ಯಾಯ ಇಲ್ಲದೆ, ಯುವಜನರಿಗೆ ಸಮಾನ ಅವಕಾಶ ಸಿಗದು ಎಂದು ಕಾಂತ್ ಕುಮಾರ್ ತಿಳಿಸಿದ್ದಾರೆ.