ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕೋಗಿಲು ಲೇಔಟ್‌ ನಿರಾಶ್ರಿತರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ: ಸಿಎಂ

ಡಿಸಿಎಂ ಡಿ.ಕೆ.ಶಿವಕುಮಾರ್, ವಸತಿ ಸಚಿವರಾದ ಜಮೀರ್ ಅಹ್ಮದ್, ಸ್ಥಳೀಯ ಶಾಸಕರಾದ ಕೃಷ್ಣ ಬೈರೇಗೌಡ ಅವರ ಜತೆ ಮಾತನಾಡಿ, ಕೋಗಿಲು ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಮನೆ ಒದಗಿಸಿಕೊಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೋಗಿಲು ಲೇಔಟ್‌ ನಿರಾಶ್ರಿತರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ: ಸಿಎಂ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿ. -

Prabhakara R
Prabhakara R Dec 29, 2025 10:47 PM

ಬೆಂಗಳೂರು, ಡಿ.29: ಕೋಗಿಲು ಬಡಾವಣೆಯಲ್ಲಿ (Kogilu Demolition Row) ಒತ್ತುವರಿ ತೆರವಿನಿಂದ ನಿರಾಶ್ರಿತರಾದವರಿಗೆ ಮಾನವೀಯತೆ ನೆಲೆಯಲ್ಲಿ ಪರ್ಯಾಯ ವಸತಿ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು, ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ನಿನ್ನೆ ನಾನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೂಡ ಅಧಿಕಾರಿಗಳ ಜತೆ ಭೇಟಿ ನೀಡಿದ್ದಾರೆ ಎಂದರು.

ಅಕ್ರಮ‌ ಒತ್ತುವರಿ ಆಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ. ನಾವು ಸುಮಾರು 2020-21 ರಿಂದ ಈ ರೀತಿ ಅಕ್ರಮವಾಗಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು, ಹೀಗಾಗಿ ಅಲ್ಲಿನ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಸೀಲ್ದಾರರಿಗೆ, ಶಿರಸ್ತೇದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂಬ ಎಚ್ಚರಿಕೆ ನೀಡಿದರು.

ಕೆ.ಸಿ.ವೇಣುಗೋಪಾಲ್ ಸಲಹೆ ನೀಡಿದ್ದಾರೆ, ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿ.ಕೆ. ಶಿವಕುಮಾರ್

ಇನ್ನುಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ‌ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿ ವಾಸವಿದ್ದವರಲ್ಲಿ ಮುಂದಿನ ಎರಡು ದಿನಗಳಲ್ಲಿ ಅರ್ಹರನ್ನು ಗುರುತಿಸಿ, ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸ್ಪಷ್ಟಪಡಿಸಿದರು.

ಈ ವಿಚಾರದ ಬಗ್ಗೆ ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ಅವರು ನನ್ನೊಂದಿಗೆ ಮತ್ತು ನಂತರ ಡಿ.ಕೆ.ಶಿವಕುಮಾರ್ ಅವರ ಜತೆ ಚರ್ಚೆ ಮಾಡಿದ್ದಾರೆ. ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಊಟ, ವಸತಿ, ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡುವಂತೆ ಹೇಳಿದ್ದೆ, ಅದರಂತೆ ಮೂರು ಕಡೆ ಈ ರೀತಿಯ ವ್ಯವಸ್ಥೆ ಮಾಡಿದ್ದರೂ ಅಲ್ಲಿನ ನಿವಾಸಿಗಳು ಹೋಗಿಲ್ಲ ಎಂದರು.

ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ

ಡಿ.ಕೆ.ಶಿವಕುಮಾರ್, ವಸತಿ ಸಚಿವರಾದ ಜಮೀರ್ ಅಹ್ಮದ್, ಸ್ಥಳೀಯ ಶಾಸಕರಾದ ಕೃಷ್ಣ ಬೈರೇಗೌಡ ಅವರ ಜತೆ ಮಾತನಾಡಿ, ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಅಲ್ಲೇ ಸಮೀಪದ ಬೈಯ್ಯಪ್ಪನಹಳ್ಳಿಯ ಸರ್ವೇ ನಂ‌.23 ರಲ್ಲಿ ಸುಮಾರು 1087 ಮನೆಗಳಿವೆ, ಅಧಿಕಾರಿಗಳಿಂದ ಪಟ್ಟಿ ಬಂದ ನಂತರ ಅವರಿಗೆ ಬೈಯ್ಯಪ್ಪನಹಳ್ಳಿಯ ಬಹುಮಹಡಿ ಕಟ್ಟಡದಲ್ಲಿ ಮನೆಗಳ ಹಂಚಿಕೆ ಮಾಡುತ್ತೇವೆ. ಇದು ಕೋಗಿಲು ಇಂದ ಕೇವಲ 7 ಕಿ.ಮೀ ದೂರದಲ್ಲಿದೆ.

ಒಂದು ಮನೆಗೆ ಸುಮಾರು ₹11.20 ಲಕ್ಷ ವೆಚ್ಚವಾಗಿದ್ದು, ಇವನ್ನು ಕೊಡುತ್ತೇವೆ. ಸಾಮಾನ್ಯವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಬ್ಸಿಡಿ ಲಭ್ಯವಿದೆ, ಜತೆಗೆ ಜಿಬಿಎ ಇಂದ ಪ್ರತಿ ಮನೆಗೆ 5 ಲಕ್ಷ ರೂಪಾಯಿ ನೀಡುವಂತೆ ಸೂಚಿಸಿದ್ದೇನೆ. ಜನರಲ್‌ಗೆ ಎಲ್ಲಾ ಸಬ್ಸಿಡಿ ಸೇರಿ 8 ಲಕ್ಷದ 70 ಸಾವಿರ ರೂಪಾಯಿ ಬರುತ್ತದೆ. ಎಸ್‌ಸಿಎಸ್‌ಟಿಗಳಾದರೆ 9.50 ಲಕ್ಷ ಬರುತ್ತದೆ. ಆಮೇಲೆ ಜನರಲ್‌ಗೆ 2.5 ಲಕ್ಷವನ್ನು ಸಾಲದ ರೂಪದಲ್ಲಿ ಕೊಡತಕ್ಕಂತದ್ದು. ಎಸ್‌ಸಿಎಸ್‌ಟಿಗೆ 1.70 ಲಕ್ಷ ಸಾಲ. ಅದನ್ನು ಜಮೀರ್‌ ಅಹ್ಮದ್‌ ಖಾನ್‌ ಅವರು ಸಾಲ ಕೊಡಿಸ್ತೀನಿ ಅಂತ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ನಾಳೆ, ನಾಡಿದ್ದು ಎರಡು ದಿನ ವೇರಿಫೈ ಮಾಡುತ್ತಾರೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಇವರಿಗೆ ವಾಸಕ್ಕೆ ಮನೆಯನ್ನು ಒದಗಿಸಿಕೊಡುವ ಜವಾಬ್ದಾರಿಯನ್ನು ವಸತಿ ಸಚಿವರಾದ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ವಹಿಸಲಾಗಿದೆ. ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದರೂ, ಮಾನವೀಯತೆ ದೃಷ್ಟಿಯಿಂದ ಅವರಿಗೆ ವಾಸಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. 1 ಲಕ್ಷ ಮನೆಗಳನ್ನು ನಾವು ಕಟ್ಟಿಸಿರುವುದೇ ಬಡವರಿಗೆ ಸೂರು ಒದಗಿಸಿಕೊಡಲೆಂದು ಎಂದರು.

ಬುಲ್ಡೋಜರ್ ಸಂಸ್ಕೃತಿ ನಮ್ಮಲ್ಲಿ ಇಲ್ಲ; ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿ.ಕೆ.ಶಿವಕುಮಾರ್‌ ತಿರುಗೇಟು

ಪರ್ಯಾಯ ವಸತಿ ವ್ಯವಸ್ಥೆ ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯ

ಅಕ್ರಮವಾಗಿ ಮನೆ ಕಟ್ಟಿಕೊಂಡಿರುವವರಿಗೆ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವುದು ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯವಾಗುತ್ತದೆ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.