International Yoga Day 2025: ಜೂ.21ರಂದು ಬೆಂಗಳೂರಿನಲ್ಲಿ ಬೃಹತ್ ಮಟ್ಟದ ಸಹಜ ಯೋಗ, ಸಾಂಸ್ಕೃತಿಕ ಕಾರ್ಯಕ್ರಮ
Bengaluru News: ವಿಶ್ವ ಯೋಗ ದಿನ ಹಾಗೂ ವಿಶ್ವ ಸಂಗೀತ ದಿನದ ಪ್ರಯುಕ್ತ ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ಡ್ ಸಹಯೋಗದೊಂದಿಗೆ ಲೈಫ್ ಎಟರ್ನಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಬೃಹತ್ ಮಟ್ಟದಲ್ಲಿ ಯೋಗ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೂ.21ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ ತ್ರಿಪುರವಾಸಿನಿಯಲ್ಲಿ ಆಯೋಜಿಸಲಾಗಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ವಿಶ್ವ ಯೋಗ ದಿನ ಹಾಗೂ ವಿಶ್ವ ಸಂಗೀತ ದಿನದ ಪ್ರಯುಕ್ತ ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ಡ್ ಸಹಯೋಗದೊಂದಿಗೆ ಲೈಫ್ ಎಟರ್ನಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಬೃಹತ್ ಮಟ್ಟದಲ್ಲಿ ಯೋಗ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು (International Yoga Day 2025) ಜೂ.21ರಂದು ಬೆಂಗಳೂರಿನ (Bengaluru News) ಪ್ಯಾಲೇಸ್ ಗ್ರೌಂಡ್ನ ತ್ರಿಪುರವಾಸಿನಿಯಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವು ಬೆಳಗ್ಗೆ 7:30 ರಿಂದ 9:30ರ ವರೆಗೆ ನಡೆಯಲಿದ್ದು, ಸಾರ್ವಜನಿಕರ ವೀಕ್ಷಣೆಗೆ ಸಂಪೂರ್ಣ ಉಚಿತ ಮತ್ತು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ.
ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಯೋಗ, ಸಂಗೀತ ಜತೆಗೆ ನೃತ್ಯದ ಮೂಲಕ ಜನರ ಅಂತರಂಗವನ್ನು ತಲುಪುವ ಪ್ರಯತ್ನ ಮಾಡಲಾಗುತ್ತಿದೆ. ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರತಾಪ್ ರಾವ್ ಜಾಧವ್ ವರ್ಚುವಲ್ ಉದ್ಘಾಟನೆ ಮಾಡಲಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ಕ್ರೀಡಾಪಟುಗಳ ನೇತೃತ್ವದಲ್ಲಿ ಯೋಗ ಕಾರ್ಯಾಗಾರವು ನಡೆಯಲಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಟಿ ನಮ್ರತಾ ಗೌಡ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸಿಇಒ (ಲಂಡನ್ ಯುಕೆ) ಸಂತೋಷ್ ಶುಕ್ಲ ಅವರು ಭಾಗವಹಿಸಲಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಹಜ ಯೋಗ ಲೈಫ್ ಎಟರ್ನಲ್ ಟ್ರಸ್ಟ್ನ ಚೇರ್ಮೆನ್ ಡಾ. ಮನೋಜ್ ಕುಮಾರ್ ಅವರು, ವಿಶ್ವ ಸಂಗೀತ ದಿನದ ಪ್ರಯುಕ್ತ 20ಕ್ಕೂ ಹೆಚ್ಚು ದೇಶಗಳ 200 ಕಲಾವಿದರು 100ಕ್ಕೂ ಹೆಚ್ಚು ಸಂಗೀತ ವಾದ್ಯಗಳೊಂದಿಗೆ ಸಂಗೀತವನ್ನು ಪ್ರಸ್ತುತಪಡಿಸಲಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸಂಗೀತಗಾರರು, ಗಾಯಕರು ಮತ್ತು ಭರತನಾಟ್ಯ ನೃತ್ಯಗಾರರನ್ನು ಒಳಗೊಂಡ "ವಂದೇ ಮಾತರಂ" ಸಾಂಸ್ಕೃತಿಕ ಪ್ರದರ್ಶನವನ್ನು ನಡೆಸಲಾಗುತ್ತಿದೆ. ಈ ಒಂದು ಅದ್ಭುತ ಪ್ರದರ್ಶನವನ್ನು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಲಂಡನ್ನಲ್ಲಿ ಸೇರಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | KPTCL Recruitment: ಕೆಪಿಟಿಸಿಎಲ್ನಲ್ಲಿ 35 ಸಾವಿರ ಖಾಲಿ ಹುದ್ದೆಗಳ ಭರ್ತಿ ಶೀಘ್ರ: ಸಿಎಂ ಘೋಷಣೆ
ಸಂಗೀತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ಆದರ್ಶ್ ಶಾಸ್ತ್ರಿ, ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಸೇರಿದಂತೆ ಇನ್ನೂ ಹಲವಾರು ಸಚಿವರು, ಸಂಸದರು, ಶಾಸಕರು ಮತ್ತು ಸಹಜ ಯೋಗ ಲೈಫ್ ಎಟರ್ನಲ್ ಟ್ರಸ್ಟ್ನ ಹಲವಾರು ಟ್ರಸ್ಟಿಗಳು ಪಾಲ್ಗೊಳ್ಳಲಿದ್ದಾರೆ. ಸಹಜ ಯೋಗವು ಸರಳ ಮತ್ತು ಶಕ್ತಿಶಾಲಿ ಅಭ್ಯಾಸದ ಮೂಲಕ ಜನರು ತಮ್ಮ ಅಂತರಂಗವನ್ನು ಸಂಪರ್ಕಿಸಲು ಇರುವ ಒಂದು ದೈವಿಕ ಕ್ರಮ ಎಂದು ತಿಳಿಸಿರುವ ಅವರು, ಒಟ್ಟಾರೆ ಕಾರ್ಯಕ್ರಮವು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಯ ಸಮ್ಮಿಲನದೊಂದಿಗೆ ಬೃಹತ್ ಮಟ್ಟದಲ್ಲಿ ನಡೆಯುತ್ತಿದ್ದು, ಏಕತೆ ಹಾಗೂ ಜಾಗೃತಿಯನ್ನು ಮೂಡಿಸಲು ಸಜ್ಜಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.