BS Yediyurappa: ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೊ ಕೇಸ್; ಆದೇಶ ಕಾಯ್ದಿರಿಸಿದ ಹೈಕೋರ್ಟ್
POCSO CASE: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿ ಬಾಲಕಿಯ ತಾಯಿ ದೂರು ನೀಡಿದ್ದರು. ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

-

ಬೆಂಗಳೂರು, ಅ.23: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ಗುರುವಾರ ನಡೆದಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ಆದೇಶವನ್ನು ಕಾಯ್ದಿರಿಸಿದ್ದಾರೆ.
ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ಹೊಸದಾಗಿ ಪ್ರಕರಣವನ್ನು ಪರಿಗಣಿಸಲು ಹೈಕೋರ್ಟ್ ಸೂಚಿಸಿತ್ತು. ತನಿಖೆಯ ಎಲ್ಲಾ ಅಂಶಗಳನ್ನೂ ಪರಿಶೀಲಿಸಿ ಕಾಗ್ನಿಜೆನ್ಸ್ ಪಡೆಯಬೇಕಿತ್ತು. ಸಂತ್ರಸ್ತೆಯ ಹೇಳಿಕೆ ಬಿಟ್ಟು ಉಳಿದ ಸಾಕ್ಷ್ಯಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆಯನ್ನು ಪರಿಗಣಿಸಿಲ್ಲ. ಆಡಿಯೋ ರೆಕಾರ್ಡಿಂಗ್ ಅನ್ನೂ ನ್ಯಾಯಾಲಯ ಪರಿಗಣಿಸಿಲ್ಲ. ಹೊಸದಾಗಿ ಕಾಗ್ನಿಜೆನ್ಸ್ ಪಡೆದಿರುವ ಆದೇಶ ಸರಿಯಿಲ್ಲವೆಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಇದು ರದ್ದುಪಡಿಸಬೇಕಾದ ಪ್ರಕರಣವೆಂದು ಮನವರಿಕೆಯಾಗಿಲ್ಲ. ಆದರೆ ಕಾಗ್ನಿಜೆನ್ಸ್ ಪಡೆದ ವಿಧಾನದ ಬಗ್ಗೆ ಪ್ರಶ್ನೆಗಳಿವೆ ಎಂದು ಹೈಕೋರ್ಟ್ ಹೇಳಿದೆ.
ರಾಜ್ಯ ಸರ್ಕಾರದ ಪರ ಎಸ್ಪಿಪಿ ಪ್ರೊ.ರವಿವರ್ಮ ಕುಮಾರ್ ವಾದ ಮಂಡನೆ ಮಾಡಿ, ಕೊಠಡಿಯಲ್ಲಿ ಲಾಕ್ ಮಾಡಿಕೊಂಡಿದ್ದರಿಂದ ಸಂತ್ರಸ್ತೆ ಹೇಳಿಕೆಯೇ ಮುಖ್ಯ. ಯಡಿಯೂರಪ್ಪ ಸೂಚನೆ ಮೇರೆಗೆ ಮೊಬೈಲ್ನಲ್ಲಿದ್ದ ವಿಡಿಯೋ ಡಿಲೀಟ್ ಮಾಡಲಾಗಿದೆ. ಮೊಬೈಲ್ ರೆಕಾರ್ಡಿಂಗ್ನಲ್ಲಿರುವುದು ಯಡಿಯೂರಪ್ಪ ಧ್ವನಿ ಎಂಬ ಬಗ್ಗೆ ಎಫ್ಎಸ್ಎಲ್ ವರದಿಯಿದೆ. ಫಿರ್ಯಾದಿ ಮಹಿಳೆಗೆ ಬ್ಯಾಗ್ನಲ್ಲಿ 2 ಲಕ್ಷ ರೂಪಾಯಿ ಹಣ ನೀಡಲಾಗಿದೆ. ನಡೆದ ಘಟನೆಯನ್ನು ಬಾಲಕಿಯೇ ವಿವರಿಸಿದ್ದಾಳೆ ಎಂದಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಅಂತಿಮವಾಗಿ ಆದೇಶ ಕಾಯ್ದಿರಿಸಿದೆ.
ಏನಿದು ಪ್ರಕರಣ?
ಮಾಜಿ ಸಿಎಂ ಯಡಿಯೂರಪ್ಪ, ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.
ಈ ಸುದ್ದಿಯನ್ನೂ ಓದಿ | Physical Abuse Case: ಬೆಂಗಳೂರು ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ, ವಂಚನೆ ಆರೋಪ; ಮುಸ್ಲಿಂ ಮಹಿಳೆ ದೂರು
ಪೋಕ್ಸೊ ಕೇಸ್ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಪ್ರಕರಣದಲ್ಲಿ ಬಂಧಿಸದಂತೆ ಸೂಚನೆ ನೀಡಿತ್ತು. ಬಳಿಕ ವಿಚಾರಣೆಯ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿತ್ತು.