ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾರನ್ನೂ ಸಹಿಸಲ್ಲ; ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ
ಬೆಂಗಳೂರಿನ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ನೀವುಗಳು ಘನತೆ ಉಳಿಸಿಕೊಂಡರೆ ಇಲಾಖೆಯ ಘನತೆ ಉಳಿಯುತ್ತದೆ. ಇಲಾಖೆ ಘನತೆ ಉಳಿದರೆ ಸರ್ಕಾರದ ಘನತೆ ಹೆಚ್ಚುತ್ತದೆ ಎಂದು ಅಧಿಕಾರಿಗಳಿಗೆ ಸಿಎಂ ಸಲಹೆ ನೀಡಿದ್ದಾರೆ.
-
ಬೆಂಗಳೂರು: ನೀವುಗಳು ಘನತೆ ಉಳಿಸಿಕೊಂಡರೆ ಸರ್ಕಾರದ ಘನತೆ ಹೆಚ್ಚುತ್ತದೆ. ನೀವು ಸರ್ಕಾರದ ಘನತೆಗೆ ಧಕ್ಕೆ ತರುವ ಕೆಲಸ ಮಾಡಿದರೆ ನಾವು ನೋಡುತ್ತಾ ಕೂರುವುದಿಲ್ಲ ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.
ಅಬಕಾರಿ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡೋದಕ್ಕೆ ಆಗುವುದಿಲ್ಲ ಎಂದುಕೊಳ್ಳಬೇಡಿ. ಅಗತ್ಯಬಿದ್ದರೆ ವರ್ಗಾವಣೆ ಮಾಡಲು ಅಗತ್ಯವಾದ ಕಾನೂನು ಬದಲಾವಣೆಯನ್ನೂ ತರಲು ಅವಕಾಶಗಳಿವೆ. ಬಹಳ ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ಸಿಎಂ ಸೂಚಿಸಿದ್ದಾರೆ.
ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾರನ್ನೂ, ಯಾವ ಪ್ರಯತ್ನವನ್ನೂ ನಾನು ಸಹಿಸುವುದಿಲ್ಲ. ಇಲಾಖೆಯಲ್ಲಿ ಹೊಸದಾಗಿ AIB ಪದ್ಧತಿ ಜಾರಿಯಾದ ಬಳಿಕ ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಆಗಿದೆ. ಹೊಸದಾಗಿ 574 ಸನ್ನದುಗಳನ್ನು ಇ-ಹರಾಜು ಹಾಕಲು ನಿರ್ಧರಿಸಲಾಗಿದೆ. ಪರವಾನಗಿ ನವೀಕರಣ ಮೊತ್ತವನ್ನು ಎರಡು ಕಂತುಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಬೇಕು. ಅಕ್ಕ ಪಕ್ಕದ ರಾಜ್ಯಗಳಲ್ಲಿ ಇಲಾಖೆ ಹೇಗೆ ನಡೆಯುತ್ತಿದೆ ಎನ್ನುವ ವರದಿ ನೋಡಿದ್ದೇನೆ. ಇಲಾಖೆಗೆ ಕೊಟ್ಟಿರುವ ಗುರಿ ತಲುಪಲು ಶ್ರಮಿಸಬೇಕು.
ನೀವುಗಳು ಘನತೆ ಉಳಿಸಿಕೊಂಡರೆ ಇಲಾಖೆಯ ಘನತೆ ಉಳಿಯುತ್ತದೆ. ಇಲಾಖೆ ಘನತೆ ಉಳಿದರೆ ಸರ್ಕಾರದ ಘನತೆ ಹೆಚ್ಚುತ್ತದೆ. ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.