ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯಾದ್ಯಂತ 32 ಸ್ಟೇಡಿಯಂ ಅಭಿವೃದ್ಧಿ : ಡಿಸಿಎಂ ಪರಂ

ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಮಾಧ್ಯಮ ಪ್ರಕಟಣೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಕ್ರೀಡಾಳುಗಳಿಗೆ ಪ್ರತಿ ಹಂತದಲ್ಲೂ ಉತ್ತಮ ಮೂಲಸೌಕರ್ಯ ಹಾಗೂ ಹೆಚ್ಚಿನ ಅವಕಾಶಗಳು ಲಭ್ಯವಾದರೆ ಅಸಾಧಾರಣ ಸಾಧನೆಗೈಯಲು ಸಾಧ್ಯವಾಗುತ್ತದೆ. ಈ ಹಿನ್ನೆಲೆ ನಮ್ಮ ಸರಕಾರವು 36 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ 32 ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸುತ್ತಿದೆ.

ರಾಜ್ಯಾದ್ಯಂತ 32 ಸ್ಟೇಡಿಯಂ ಅಭಿವೃದ್ಧಿ : ಡಿಸಿಎಂ ಪರಂ

-

Profile
Ashok Nayak Aug 30, 2026 8:07 AM

ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಜರಾತಿ ವಿನಾಯಿತಿ

ಕ್ರೀಡಾ ಸಾಧಕರಿಗೆ ಸರಕಾರದ ಬೆಂಬಲ

ಬೆಂಗಳೂರು: ಕರ್ನಾಟಕದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯಾದ್ಯಂತ ರಾಜ್ಯ ಸರಕಾರ 36 ಕೋಟಿ ರು. ವೆಚ್ಚದಲ್ಲಿ 32 ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಘೋಷಿಸಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನ(National Sports Day)ದ ಅಂಗವಾಗಿ ಮಾಧ್ಯಮ ಪ್ರಕಟಣೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಕ್ರೀಡಾಳುಗಳಿಗೆ ಪ್ರತಿ ಹಂತದಲ್ಲೂ ಉತ್ತಮ ಮೂಲಸೌಕರ್ಯ ಹಾಗೂ ಹೆಚ್ಚಿನ ಅವಕಾಶಗಳು ಲಭ್ಯವಾದರೆ ಅಸಾಧಾರಣ ಸಾಧನೆಗೈಯಲು ಸಾಧ್ಯವಾಗುತ್ತದೆ. ಈ ಹಿನ್ನೆಲೆ ನಮ್ಮ ಸರಕಾರವು 36 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ 32 ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಈ ವರ್ಷದಿಂದ ಕಬಡ್ಡಿ, ಅಥ್ಲೆಟಿಕ್ ಹಾಗೂ ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆಗಳನ್ನು ಒಳಗೊಂಡ ದಸರಾ ಕ್ರೀಡಾಕೂಟವನ್ನು ತಾಲೂಕು ಮಟ್ಟದಿಂದಲೇ ವ್ಯವಸ್ಥಿತವಾಗಿ ಆಯೋಜಿಸಲು ತೀರ್ಮಾನಿಸಿದ್ದೇವೆ. ಈ ಮೂಲಕ ಕ್ರೀಡೆಯನ್ನು ಯುವಜನರ ಬಳಿಗೆ ಕೊಂಡೊಯ್ದು, ಕರ್ನಾಟಕದ ಪ್ರತಿಯೊಂದು ಭಾಗದಿಂದಲೂ ಕ್ರೀಡಾ ಪ್ರತಿಭೆಗಳು ಹೊರಹೊಮ್ಮಲು ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಹೇಳಿದ್ದಾರೆ. ‌

ಇದನ್ನೂ ಓದಿ: National Sports Awards 2025: 17 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ, ಖೇಲ್‌ ರತ್ನ ಈ ಬಾರಿ ಯಾರಿಗೂ ಇಲ್ಲ!

ಕ್ರೀಡಾಳುಗಳಿಗೆ ಉತ್ತೇಜನ ನೀಡುವ ಸಲುವಾಗಿ ಒಲಿಂಪಿಕ್ಸ್, ಕಾಮನ್ ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್ ಹಾಗೂ ಏಷ್ಯನ್ ಪ್ಯಾರಾ ಗೇಮ್ಸ್‌ಗಳಲ್ಲಿ ಭಾಗವಹಿಸುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ವಿಶೇಷ ಪ್ರೋತ್ಸಾಹಧನ ಹಾಗೂ ಪದಕ ವಿಜೇತರಿಗೆ ಹೆಚ್ಚುವರಿಯಾಗಿ 15 ಲಕ್ಷ ನಗದು ಬಹುಮಾನವನ್ನು ನೀಡುತ್ತದ್ದೇವೆ. ಈ ವರ್ಷ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪಾ ಅವರಿಗೆ ಒಟ್ಟು ರೂ.20 ಲಕ್ಷ ನೀಡಿದ್ದೇವೆ. ಆ ಮೂಲಕ ಕ್ರೀಡಾ ಸಾಧಕರನ್ನು ಗುರುತಿಸಿ, ಅವರನ್ನು ಗೌರವಿಸಿ, ಅಗತ್ಯ ಪ್ರೋತ್ಸಾಹ ನೀಡುವ ಮೂಲಕ ರಾಜ್ಯದ ಯುವಜನತೆಯಲ್ಲಿ ಕ್ರೀಡಾಸ್ಪೂರ್ತಿಯನ್ನು ಹೆಚ್ಚಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ನಮ್ಮ ರಾಜ್ಯ ಮತ್ತು ದೇಶವನ್ನು ಪ್ರತಿನಿಽಸುವ ವಿದ್ಯಾರ್ಥಿಗಳು ಕ್ರೀಡೆ ಶಿಕ್ಷಣದ ನಡುವೆ ಯಾವುದಾದರೊಂದನ್ನು ಆಯ್ಕೆ ಮಾಡಿಕೊಳ್ಳುವ ಇಕ್ಕಟ್ಟಿಗೆ ಸಿಲುಕಿಕೊಳ್ಳಬಾರದು ಎಂಬ ಸದುದ್ದೇಶದಿಂದ ಮಾನ್ಯತೆ ಪಡೆದ 34 ಕ್ರೀಡೆಗಳಲ್ಲಿ ಸ್ಪರ್ಧಿಸುವ ವಿದ್ಯಾರ್ಥಿಗಳಿಗೆ ಹಾಜರಾತಿಯಲ್ಲಿ ವಿನಾಯಿತಿಯನ್ನು ನೀಡಲಾಗಿದೆ.

ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವವರಿಗೆ ಶೇ.15 ರಷ್ಟು ಹಾಜರಾತಿ ವಿನಾಯಿತಿ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವವರಿಗೆ ಶೇ. 25ರಷ್ಟು ಹಾಜರಾತಿ ವಿನಾಯಿತಿಯನ್ನು ನೀಡಲಾಗುತ್ತದೆ. ಕನಿಷ್ಠ ಶೇ.50ರಷ್ಟು ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಈ ಮೂಲಕ ಕ್ರೀಡಾ ಸಾಧನೆ ಮಾಡಲು ಹೊರಟಿರುವ ವಿದ್ಯಾರ್ಥಿಗಳಿಗೆ ಬೆನ್ನೆಲುಬಾಗಿ ನಿಂತಿದ್ದೇವೆ ಎಂದು ವಿವರಿಸಿದರು

ಕ್ರೀಡಾಳುಗಳ ಶೈಕ್ಷಣಿಕ ಉನ್ನತಿಗೆ ಸಾಥ್

ಕ್ರೀಡಾ ಸಾಧನೆಯು ಕ್ರೀಡಾಳುಗಳ ಶೈಕ್ಷಣಿಕ ಬದುಕಿಗೆ ಅಡ್ಡಿಯಾಗಬಾರದು ಎಂಬ ಕಾಳಜಿ ನಮ್ಮದು. ಹೀಗಾಗಿ ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ಅವಧಿಯಲ್ಲಿ ಮೊದಲ ಬಾರಿಗೆ ಸಿಇಟಿ ಪರೀಕ್ಷೆಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿಯನ್ನು ಪರಿಚಯಿಸಲಾಯಿತು. ಆ ಪ್ರಯತ್ನದ ಫಲವಾಗಿ ಪ್ರಸಕ್ತ ಸಾಲಿನಲ್ಲಿ ಮೀಸಲಾತಿಯ ಮೂಲಕ 115 ವಿದ್ಯಾರ್ಥಿ ಕ್ರೀಡಾಪಟುಗಳು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಸೀಟುಗಳನ್ನು ಪಡೆಯಲು ಸಾಧ್ಯವಾಗಿದೆ. ಹೀಗೆ ಕ್ರೀಡಾ ಮೀಸಲಾತಿಗೆ ಇರುವ ಅಡೆತಡೆಗಳನ್ನು ನಿವಾರಿಸುವ ಮೂಲಕ ನಮ್ಮ ಯುವಜನರು ಶಿಕ್ಷಣ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈಯಲು ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದೇವೆ.

ರಾಜ್ಯದ 72000 ಸರಕಾರಿ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ಯನ್ನು ಕಲ್ಪಿಸಲಾಗಿದೆ. ಇದರಿಂದಾಗಿ ಸುಮಾರು 2000 ಹುದ್ದೆಗಳು ರಾಜ್ಯದ ಕ್ರೀಡಾ ಸಾಧಕರಿಗೆ ದೊರೆಯಲಿವೆ. ಇದರ ಜೊತೆಗೆ ಕಾಮನ್‌ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್ ಹಾಗೂ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪದಕ ಗೆದ್ದ 13 ಕ್ರೀಡಾಪಟುಗಳನ್ನು ವಿಶೇಷ ನೇಮಕಾತಿ ಮೂಲಕ ಎ’ ಮತ್ತು ಬಿ’ ಗುಂಪಿನ ಸರಕಾರಿ ಹುದ್ದೆಗಳಿಗೂ ನೇಮಕ ಮಾಡಿ ಗೌರವಿಸಲಾಗಿದೆ ಎಂದು ಡಿಸಿಎಂ ಜಿ.ಪರಮೇಶ್ವರ್ ಹೇಳಿದರು.