ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಮೆಟ್ರೋ ನಿಲ್ದಾಣಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ: ಡಿ.ಕೆ.ಶಿವಕುಮಾರ್

DK Shivakumar: ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯಲು ಬಿಎಂಆರ್‌ಸಿಎಲ್‌ಗೆ ಅರ್ಜಿ ಹಾಕಲು ಕೆಎಂಎಫ್‌ಗೆ ಸೂಚನೆ ನೀಡಿದ್ದು, 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮೆಟ್ರೋ ನಿಲ್ದಾಣಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ: ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್.

Profile Siddalinga Swamy Jun 18, 2025 2:59 PM

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯಲು ಬಿಎಂಆರ್‌ಸಿಎಲ್‌ಗೆ ಅರ್ಜಿ ಹಾಕಲು ಕೆಎಂಎಫ್‌ಗೆ ಸೂಚನೆ ನೀಡಿದ್ದು, 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ತೆರೆಯುತ್ತಿರುವ ಬಗ್ಗೆ ಕೇಳಿದಾಗ, ʼಬಿಎಂಆರ್‌ಸಿಎಲ್ ಅವರು ಟೆಂಡರ್ ಕರೆದಿದ್ದು, ಅಮುಲ್ ಹೊರತಾಗಿ ಬೇರೆ ಯಾರೂ ಮಳಿಗೆಗಳಿಗೆ ಅರ್ಜಿ ಹಾಕಿಲ್ಲ. ಕೆಎಂಎಫ್ ಕೂಡ ಅರ್ಜಿ ಹಾಕಿರಲಿಲ್ಲ. ಈಗ ಕೆಎಂಎಫ್‌ನವರಿಗೆ ನಾವು ಅರ್ಜಿ ಹಾಕುವಂತೆ ಸೂಚಿಸಿದ್ದು, ಟೆಂಡರ್ ಕರೆಯಲಾಗಿದ್ದ 10 ಕಡೆಗಳ ಪೈಕಿ ಎರಡು ಕಡೆ ಅಮುಲ್ ಅವರು ಜಾಗತಿಕ ಟೆಂಡರ್‌ನಲ್ಲಿ ಅರ್ಜಿ ಹಾಕಿ ಮಳಿಗೆ ತೆರೆದಿದ್ದಾರೆ. ತೆರೆಯಲಾಗಿರುವ ಮಳಿಗೆ ಮುಚ್ಚಿಸುವುದು ಸರಿಯಲ್ಲ. ಉಳಿದ 8 ಸ್ಥಳಗಳಲ್ಲಿ ಕೆಎಂಎಫ್ ಮಳಿಗೆಗೆ ಅವಕಾಶ ನೀಡಿ ಎಂದು ಹೇಳಿದ್ದೇನೆʼ ಎಂದು ತಿಳಿಸಿದರು.

ಇಂದು ಬೆಂಗಳೂರು ನಗರದಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಪಕ್ಷ ಸಂಘಟನೆ ವಿಚಾರ ಹಾಗೂ ಪಾಲಿಕೆ ಚುನಾವಣೆ ಸೇರಿದಂತೆ ಇಂದು ನಮ್ಮ ಪಕ್ಷದ ಶಾಸಕರ ಜತೆ ಚರ್ಚೆ ಮಾಡಿದ್ದೇನೆ. ಜಿಬಿಎಯಲ್ಲಿ ಎಷ್ಟು ಪಾಲಿಕೆ ರಚನೆ ಮಾಡಬೇಕು ಎನ್ನುವ ವಿಚಾರವಾಗಿ ಎಲ್ಲಾ ನಾಯಕರ ಜತೆ ಚರ್ಚೆ ಮಾಡಿದ್ದು, ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಬಾಕಿ ಇದೆ. ಅವರ ವಿಶ್ವಾಸ ಪಡೆದು ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ಸ್ವಚ್ಛ ಬೆಂಗಳೂರು ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಕಸವಿರುವ ಜಾಗದ ಫೋಟೋ ತೆಗೆದು ಅದನ್ನು ಈ ಸಂಖ್ಯೆಗೆ ರವಾನಿಸಿದರೆ ಒಂದು ವಾರದಲ್ಲಿ ಆ ಜಾಗದಲ್ಲಿರುವ ಕಸ ವಿಲೇವಾರಿ ಮಾಡಲಾಗುವುದು. ಇನ್ನು ರಸ್ತೆ ಗುಂಡಿ ಮುಚ್ಚುವ ವಿಚಾರವಾಗಿ ಶಾಸಕರು ತಮ್ಮ ಕ್ಷೇತ್ರಗಳ ವಾರ್ಡ್‌ಗಳ ಬಗ್ಗೆ ಗಮನಹರಿಸಿ ರಸ್ತೆ ಕಾಮಗಾರಿಗೆ ಅನುದಾನವನ್ನು ನೀಡುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ಆಸ್ತಿ ಖಾತಾ ದಾಖಲೆ ವಿತರಣೆ ಆಂದೋಲನ

ಇನ್ನು ಬೆಂಗಳೂರಿನಲ್ಲಿ ಆಸ್ತಿ ಖಾತಾ ದಾಖಲೆ ಆಂದೋಲನ ರೂಪಿಸಲಾಗಿದ್ದು, ಜುಲೈ ತಿಂಗಳಿನಿಂದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಪ್ರಾಯೋಗಿಕ ಯೋಜನೆ ಮಾಡಲಾಗಿದ್ದು, 25 ಸಾವಿರ ಆಸ್ತಿಗಳ ಖಾತಾ ದಾಖಲೆಗಳು ಸಿದ್ಧಗೊಂಡಿದ್ದು, ಜುಲೈ ಒಂದರಿಂದ ಇಡೀ ತಿಂಗಳು ಈ ಆಸ್ತಿ ಇ-ಖಾತಾ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಬೆಂಗಳೂರಿನಲ್ಲಿ 25 ಲಕ್ಷ ಮನೆಗಳು ಆಸ್ತಿಗಳಿದ್ದು, ಈ ಪೈಕಿ 5 ಲಕ್ಷ ಮಂದಿ ದಾಖಲೆ ಅಪ್‌ಲೋಡ್ ಮಾಡಿದ್ದಾರೆ. ಇನ್ನು 20 ಲಕ್ಷ ಆಸ್ತಿಗಳ ದಾಖಲೆ ಬಾಕಿ ಇದೆ ಎಂದು ತಿಳಿಸಿದರು.

ಇ ಖಾತಾ ವಿಚಾರವಾಗಿ ಅಭಿಯಾನ ಮಾಡಲಾಗುವುದೇ ಎಂದು ಕೇಳಿದಾಗ, ʼಜುಲೈ 1 ರಿಂದ ಇ ಖಾತಾ ವಿಚಾರವಾಗಿ ಆಂದೋಲನ ಮಾಡಲಾಗುವುದು. ಆ ಮೂಲಕ ಖಾಸಗಿ ಆಸ್ತಿ ಮಾಲೀಕರು ಜಾಗೃತಿ ವಹಿಸಿ, ತಮ್ಮ ದಾಖಲೆಗಳನ್ನು ನೀಡಿ ಇ ಖಾತಾ ಮಾಡಿಸಿಕೊಳ್ಳಲು ಒಂದು ತಿಂಗಳ ಕಾಲ ಆಂದೋಲನ ಹಮ್ಮಿಕೊಳ್ಳಲಾಗುವುದು. ಈ ವಿಚಾರವಾಗಿ ಮನೆ ಮನೆ ಪ್ರಚಾರ, ಜಾಹೀರಾತು ಸೇರಿದಂತೆ ಪ್ರಚಾರ ಮಾಡಲಾಗುವುದುʼ ಎಂದು ತಿಳಿಸಿದರು.

ವೈಟ್ ಟಾಪಿಂಗ್ ಯೋಜನೆಗಳ ಬಗ್ಗೆ ಕೇಳಿದಾಗ, ನಗರದಲ್ಲಿ ವೈಟ್ ಟ್ಯಾಪಿಂಗ್ ಕೆಲಸ ನಡೆಯುತ್ತಿದೆ. ಅನೇಕ ಕಡೆಗಳಲ್ಲಿ ನಾನೇ ಕಾಮಗಾರಿ ಗುಣಮಟ್ಟ ಪರೀಕ್ಷೆ ಮಾಡಿದ್ದೇನೆ. ಕೆಲವು ಕಡೆ ಕಾಮಗಾರಿ ಪ್ರಗತಿಯಲ್ಲಿವೆ ಎಂದರು.

ಈ ಸುದ್ದಿಯನ್ನೂ ಓದಿ | Federal Bank Recruitment 2025: ಫೆಡರಲ್‌ ಬ್ಯಾಂಕ್‌ನಲ್ಲಿದೆ ವಿವಿಧ ಹುದ್ದೆ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಬಿ ಖಾತಾ ನೀಡುವ ವಿಚಾರವಾಗಿ ಚರ್ಚೆ ಮಾಡಲಾಯಿತೇ ಎಂದು ಕೇಳಿದಾಗ, ʼಈ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದು, ಕಾನೂನು ಆಯಾಮಗಳ ಚರ್ಚೆ ಮಾಡಿ ಅಧಿಕೃತ ಘೋಷಣೆ ಮಾಡಲಾಗುವುದುʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.