ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Suresh‌: ಬಮೂಲ್ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

ಬೆಂಗಳೂರು ಸಹಕಾರ ಹಾಲು ಒಕ್ಕೂಟ(ಬಮೂಲ್)ದ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಿ.ಕೆ. ಸುರೇಶ್ ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಮೂಲ್ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

Profile Siddalinga Swamy Jun 19, 2025 7:32 PM

ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಚುನಾವಣೆ ನಡೆದಿದ್ದು, ಡಿ.ಕೆ.ಸುರೇಶ್ (DK Suresh‌) ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ. ಸುರೇಶ್ ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಸುರೇಶ್, ʼʼಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ (ಬಮೂಲ್)ದಲ್ಲಿ 16 ನಿರ್ದೇಶಕರ ಪೈಕಿ 14 ಪದಾಧಿಕಾರಿಗಳನ್ನು ಚುನಾವಣೆ ಮೂಲಕ ಆರಿಸಲಾಗಿದ್ದು, ಇಬ್ಬರು ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದಾರೆ. ಬಮೂಲ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನನ್ನನ್ನು ಅಧ್ಯಕ್ಷನನ್ನಾಗಿ, ಮಾಗಡಿ ತಾಲೂಕಿನ ಕುದೂರು ರಾಜಣ್ಣ ಅವರನ್ನು ಉಪಾಧ್ಯಕ್ಷರನ್ನಾಗಿ ಎಲ್ಲ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆʼʼ ಎಂದು ತಿಳಿಸಿದರು.

ನಮ್ಮ ಪಕ್ಷದ ಅಧ್ಯಕ್ಷ ಡಿಸಿಎಂ ಡಿ.ಕೆ. ಶಿವಕುಮಾರ್, ʼʼರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕರಾದ ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಇಕ್ಬಾಲ್ ಹುಸೇನ್, ಶಿವಣ್ಣ, ಶರತ್ ಬಚ್ಚೇಗೌಡ, ಕೃಷ್ಣಭೈರೇಗೌಡರು ಸೇರಿದಂತೆ ಬಮೂಲ್‌ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಸಕರ ಸರ್ವಸಮ್ಮತದ ತೀರ್ಮಾನದಂತೆ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರಿಗೂ ನಾನು ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆʼʼ ಎಂದು ತಿಳಿಸಿದರು.

ʼʼಗುರುವಾರ ನಡೆದ ಚುನಾವಣೆಯಲ್ಲಿ ಸಹಕಾರ ಸಂಸ್ಥೆ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ಈ ಒಕ್ಕೂಟದ ಹಾಲು ಉತ್ಪಾದಕರು, ರೈತರು ನಮ್ಮ ಮೇಲೆ ನಿರೀಕ್ಷೆ ಇಟ್ಟು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಅವರಿಗೂ ಧನ್ಯವಾದ ತಿಳಿಸುತ್ತೇನೆ. ಹಾಲು ಉತ್ಪಾದಕರು, ನಿರ್ದೇಶಕರು ಬದಲಾವಣೆ ತರುವ ನಿರೀಕ್ಷೆ ಹೊಂದಿದ್ದು, ಎಲ್ಲರ ಸಹಕಾರ ಪಡೆದು ಬೆಂಗಳೂರು ಸಹಕಾರ ಹಾಲು ಒಕ್ಕೂಟ ಹಾಗೂ ರೈತರಿಗೆ ನ್ಯಾಯ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆʼʼ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | ಸಂಪುಟ ನಿರ್ಣಯ: ಉತ್ತರ ಕನ್ನಡದ ಅಪ್ಸರಕೊಂಡ-ಮುಗಳಿ ಕಡಲ ವನ್ಯಜೀವಿ ಧಾಮ ಘೋಷಣೆ

ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ಪರಿಚಯಿಸುವ ಚಿಂತನೆ

ಕನಕಪುರ ಹಾಲು ಒಕ್ಕೂಟದಲ್ಲಿ ಇತ್ತೀಚೆಗೆ ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ಪರಿಚಯಿಸಿದ್ದಿರಿ, ಅದನ್ನು ಬಮೂಲ್‌ಗೂ ವಿಸ್ತರಣೆ ಮಾಡುತ್ತೀರಾ ಎಂದು ಕೇಳಿದಾಗ, ʼʼನಾವು ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ಅನ್ನು ಪರಿಚಯಿಸಿದ್ದು, ಇದನ್ನು ಬೆಂಗಳೂರಿಗೆ ಮಾತ್ರವಲ್ಲ ರಾಜ್ಯಾದ್ಯಂತ ಪರಿಚಯಿಸುವ ಚಿಂತನೆ ಇದೆ. ಪ್ರಾಯೋಗಿಕವಾಗಿ ಒಂದು ಪಂಚಾಯತ್‌ ಮಟ್ಟದಲ್ಲಿ ಇದನ್ನು ವಿತರಣೆ ಮಾಡಿದ್ದೇವೆ. ಮುಂದಿನ ಆಡಳಿತ ಮಂಡಳಿಯಲ್ಲಿ ಇದರ ಸಾಧಕ ಬಾಧಕಗಳನ್ನು ವಿಸ್ತೃತವಾಗಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು. ಮಾರುಕಟ್ಟೆ ವ್ಯಾಪ್ತಿ ಹೆಚ್ಚಿಸಿ, ಹಾಲು ಉತ್ಪಾದಕರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ನಮ್ಮ ಮೇಲಿದ್ದು, ಹಂತಹಂತವಾಗಿ ಇದನ್ನು ಮಾಡುತ್ತೇವೆʼʼ ಎಂದು ತಿಳಿಸಿದರು.

ʼʼಆಡಳಿತ ಮಂಡಳಿಯ ಎಲ್ಲ ಸದಸ್ಯರು ಸೇರಿ ಸಂಘದ ಆಗುಹೋಗುಗಳ ಬಗ್ಗೆ ಸರ್ಕಾರದ ಜತೆ ಚರ್ಚಿಸಿ, ಬದಲಾವಣೆ ತರಬೇಕಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮ ಸೇರಿದಂತೆ ಎಲ್ಲರ ಸಹಕಾರ ಕೋರುತ್ತೇನೆʼʼ ಎಂದರು.