ಬೆಂಗಳೂರಿನಲ್ಲಿ ಪತ್ನಿಯನ್ನು ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!
Bengaluru shootout case: ಬೆಂಗಳೂರಿನಲ್ಲಿ ನೆಲೆಸಿದ್ದ ತಮಿಳುನಾಡಿನ ಸೇಲಂ ಮೂಲದ ದಂಪತಿ, ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ನಲ್ಲಿ ವಿಚಾರಣೆ ಮುಗಿದ ಬಳಿಕ ಬಸವೇಶ್ವರ ನಗರದ ಹೋಟೆಲ್ ಬಳಿ ಇಬ್ಬರಿಗೂ ಜಗಳ ನಡೆದಿದ್ದು, ಈ ವೇಳೆ ಗನ್ನಿಂದ ಶೂಟ್ ಮಾಡಿ ಪತ್ನಿಯನ್ನು ಗಂಡ ಕೊಲೆ ಮಾಡಿದ್ದಾನೆ.
ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಶೂಟೌಟ್ ನಡೆದ ಸ್ಥಳ. -
ಬೆಂಗಳೂರು: ಕೋರ್ಟ್ನಲ್ಲಿ ಡಿವೋರ್ಸ್ ಅರ್ಜಿ ವಿಚಾರಣೆ ಬಳಿಕ ವ್ಯಕ್ತಿಯೊಬ್ಬ, ಗುಂಡು ಹಾರಿಸಿ ಪತ್ನಿಯನ್ನು ಕೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಬಸವೇಶ್ವರ ನಗರದ ಹೋಟೆಲ್ ಬಳಿ ಪತ್ನಿಗೆ ಪತಿ ಗನ್ನಿಂದ ಶೂಟ್ (Bengaluru shootout case) ಮಾಡಿದ್ದು, ಗಂಭೀರ ಗಾಯಗೊಂಡಿದ್ದ ಪತ್ನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಭುವನೇಶ್ವರಿ ಗುಂಡೇಟಿಗೆ ಬಲಿಯಾದ ಮಹಿಳೆ. ಬಾಲಮುರುಗನ್ ಗುಂಡು ಹಾರಿಸಿದ ಆರೋಪಿ. ಇವರು ತಮಿಳುನಾಡಿನ ಸೇಲಂ ಮೂಲದ ದಂಪತಿಯಾಗಿದ್ದಾರೆ. ಬಾಲಮುರುಗನ್ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡಿ, ನಿವೃತ್ತನಾಗಿದ್ದಾನೆ. ಪತ್ನಿ ಭುವನೇಶ್ವರಿ ಬ್ಯಾಂಕ್ ಉದ್ಯೋಗಿ ಆಗಿದ್ದರು. ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಮಾಗಡಿ ರೋಡ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಪತಿ-ಪತ್ನಿ ನಡುವೆ ಕೋರ್ಟ್ನಲ್ಲಿ ಡಿವೋರ್ಸ್ ಅರ್ಜಿ ವಿಚಾರಣೆ ನಡೆಯುತ್ತಿತ್ತು. ಇಬ್ಬರೂ ಕೋರ್ಟ್ಗೆ ಹಾಜರಾಗಿ, ಹೊರಬಂದಿದ್ದರು. ಈ ವೇಳೆ ಇಬ್ಬರ ನಡುವೆ ಜಗಳ ತಾರಕಕ್ಕೇರಿದೆ. ಆಗ ಬಾಲ ಮುರುಗನ್ ಪತ್ನಿ ಮೇಲೆ ಗನ್ ತೆಗೆದು ಗುಂಡಿನ ದಾಳಿ ನಡೆಸಿದ್ದಾನೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಂಡತಿಯನ್ನು ಕೊಂದ ಆರೋಪಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿ ಪಿಸ್ತೂಲನ್ನು ಅಕ್ರಮವಾಗಿ ತರಿಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಪತ್ನಿಯನ್ನು ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡಿದ್ದ ಪತಿ ಅರೆಸ್ಟ್

ಬೆಂಗಳೂರು: ಪತ್ನಿಯನ್ನು ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡಿ ಬಚಾವ್ ಆಗಲು ಯತ್ನಿಸಿದ ವ್ಯಕ್ತಿಯೊಬ್ಬ ಪೊಲೀಸರ ಬಲೆಗೆ ಬಿದ್ಧ ಘಟನೆ ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸರ್ಕಾರಿ ಶಾಲಾ ಶಿಕ್ಷಕಿಯಾಗಿದ್ದ ಮಿಟ್ಟಗಾನಹಳ್ಳಿ ನಿವಾಸಿ ಗಾಯತ್ರಿ ಕೊಲೆಯಾದ ಮಹಿಳೆ. ಇವರು ದೈಹಿಕ ಶಿಕ್ಷಣ ಶಿಕ್ಷಕಿಯಾಗಿದ್ದರು. ಇವರ ಪತಿ ಅನಂತ್ ನಿವೃತ್ತ ಖಾಸಗಿ ಕಂಪನಿ ಉದ್ಯೋಗಿದ್ದಾರೆ.
ಪೊಲೀಸರ ಪ್ರಕಾರ, ದಂಪತಿ ಕೌಟುಂಬಿಕ ವಿಷಯಗಳಿಗಾಗಿ ಆಗಾಗ್ಗೆ ಜಗಳವಾಡುತ್ತಿದ್ದರು. ಹೀಗಾಗಿ ಕೆಲವು ದಿನಗಳ ಹಿಂದೆ ಅನಂತ್ ಗಾಯತ್ರಿಯನ್ನು ಕೊಲ್ಲಲು ಸಂಚು ರೂಪಿಸಿದ್ದರು. ಬಾಗಲೂರಿನಲ್ಲಿರುವ ಸೈಟ್ ಸ್ವಚ್ಛಗೊಳಿಸುವ ನೆಪದಲ್ಲಿ ಗಾಯತ್ರಿ ಅವರನ್ನು ಕರೆದೊಯ್ದಿದ್ದಾನೆ. ಈ ವೇಳೆ ದಾರಿಯಲ್ಲಿ ಹೋಗುವಾಗ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ನಂತರ ಗಾಯತ್ರಿ ಅಪಘಾತಕ್ಕೆ ಒಳಗಾಗಿದ್ದಾರೆ ಎಂಬಂತೆ ನಾಟಕವಾಡಿ ಆಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ.
ಚಿಕ್ಕಜಾಲ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆಗ ಅವರಿಗೆ ಇದು ಅಪಘಾತವಲ್ಲ ಎಂಬುದು ಅರಿವಿಗೆ ಬಂದಿದೆ. ಕೊಲೆ ಅನುಮಾನ ವ್ಯಕ್ತವಾಗಿದೆ. ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ ಗಾಯತ್ರಿಯ ಗಾಯಗಳ ಸ್ವರೂಪ ಪರಿಶೀಲಿಸಿದ ಬಳಿಕ ಪ್ರಕರಣ ಬಯಲಾಗಿದ್ದು, ತಕ್ಷಣ ಬಾಗಲೂರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ಎಂಬುದು ದೃಢಪಟ್ಟಿದೆ.