KPSC ಹಗರಣ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡ್ರಾ IAS ಅಧಿಕಾರಿ ಜ್ಞಾನೇಂದ್ರ ಕುಮಾರ್?
KPSC Scam: ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ಹಲವು ಸ್ಫೋಟಕ ಸಂಗತಿಗಳು ಬಯಲಾಗುತ್ತಿವೆ. ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ತಾನೇ ಮಾಡಿರುವುದಾಗಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ಹಗರಣಕ್ಕೆ (KPSC Scam) ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ಹಲವು ಸ್ಫೋಟಕ ಸಂಗತಿಗಳು ಬಯಲಾಗುತ್ತಿವೆ. ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ತಾನೇ ಮಾಡಿರುವುದಾಗಿ ಕೆಪಿಎಸ್ಸಿ ಮಾಜಿ ಪರೀಕ್ಷಾ ನಿಯಂತ್ರಕ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ (IAS Officer Jnanendra) ಸಿಐಡಿ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾರೆಂದು ಎಂದು ತಿಳಿದು ಬಂದಿದೆ.
ತಾವು ಪರೀಕ್ಷೆ ನಡೆಯುವ ಒಂದು ದಿನ ಮುಂಚಿತವಾಗಿಯೇ ಮಧ್ಯವರ್ತಿಯಾಗಿದ್ದ ಬಸವರಾಜ್ ಕನ್ನಾಳೆ ಎಂಬಾತನಿಗೆ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದಾಗಿ ಜ್ಞಾನೇಂದ್ರ ಕುಮಾರ್ ಸಿಐಡಿ ವಿಚಾರಣೆಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಅಭ್ಯರ್ಥಿಯೊಬ್ಬರ ಮೊಬೈಲ್ ಕರೆಗಳ ತಾಂತ್ರಿಕ ವಿಶ್ಲೇಷಣೆ (CDR) ಮತ್ತು ಬ್ಯಾಂಕ್ ಖಾತೆಗಳ ತನಿಖೆಯ ವೇಳೆ ಮಧ್ಯವರ್ತಿ ಕನ್ನಾಳೆ ಹಾಗೂ ಜ್ಞಾನೇಂದ್ರ ಗಂಗ್ವಾರ್ ನಡುವೆ ನಿರಂತರ ಸಂಪರ್ಕ ಇರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲದೆ, ಕೆಲವು ಅಭ್ಯರ್ಥಿಗಳು ಕನ್ನಾಳೆಯ ಸಹಕಾರಿ ಬ್ಯಾಂಕ್ ಖಾತೆಗೆ ನೇರವಾಗಿ ಸುಮಾರು 75 ಲಕ್ಷ ರೂ. ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಪರೀಕ್ಷೆಗೂ ಮುನ್ನವೇ 24 ಅಭ್ಯರ್ಥಿಗಳಿಂದ 12 ಕೋಟಿ ರೂ.ಗೂ ಹೆಚ್ಚು ಹಣ ಸಂಗ್ರಹಿಸಲಾಗಿತ್ತು ಎಂಬ ಮಾಹಿತಿಯನ್ನು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ. ಸಂಗ್ರಹಿಸಲಾದ ಹಣದ ಬಹುಪಾಲು ನಗದು ರೂಪದಲ್ಲೇ ಪಾವತಿಯಾಗಿರುವ ಸಾಧ್ಯತೆಯಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಅಷ್ಟೇ ಅಲ್ಲದೇ ಪ್ರಶ್ನೆಪತ್ರಿಕೆ ಕೈಸೇರಿದ ಬಳಿಕ ಹಣ ನೀಡಿದ್ದ ಅಭ್ಯರ್ಥಿಗಳನ್ನು ರಹಸ್ಯವಾಗಿ ಕೆಲವು ಹೊಟೇಲ್ ಹಾಗೂ ರೆಸಾರ್ಟ್ಗಳಲ್ಲಿ ಇರಿಸಿ, ಅವರಿಗೆ ಪರೀಕ್ಷೆಯ ಉತ್ತರಗಳನ್ನು ಮುಂಚಿತವಾಗಿಯೇ ತರಬೇತಿ ನೀಡಲಾಗಿತ್ತು ಎಂದು ತನಿಖೆಯಲ್ಲಿ ತಿಳಿದು ಬಂದಿದೆ.
ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಮಧ್ಯವರ್ತಿಗಳು ಡಿಜಿಟಲ್ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಆದಾಗ್ಯೂ, ಅಭ್ಯರ್ಥಿಗಳ ಮೊಬೈಲ್ ಕರೆಗಳ ತಾಂತ್ರಿಕ ವಿಶ್ಲೇಷಣೆ (CDR) ಮತ್ತು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವ ಭದ್ರ ಸಾಕ್ಷ್ಯಗಳನ್ನು ಸಿಐಡಿ ವಶಪಡಿಸಿಕೊಂಡಿದೆ. ಕನ್ನಾಳೆ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಡಿಜಿಟಲ್ ಸಾಕ್ಷ್ಯಗಳನ್ನು ವಿಲೇವಾರಿ ಮಾಡಿದ್ದಾನೆ ಎನ್ನಲಾದ ಶ್ರೀರಂಗಪಟ್ಟಣ ಸಮೀಪದ ಸ್ಥಳಕ್ಕೆ ಸಿಐಡಿ ಅಧಿಕಾರಿಗಳು ಆತನನ್ನು ಕರೆದೊಯ್ಯುವ ಸಾಧ್ಯತೆಯಿದೆ. ತನಿಖಾಧಿಕಾರಿಗಳ ಮುಂದೆ ನೀಡಿರುವ ಹೇಳಿಕೆಯ ಪ್ರಕಾರ, ಆತ ಎರಡು ಮೊಬೈಲ್ ಫೋನ್ಗಳು ಮತ್ತು ಒಂದು ಟ್ಯಾಬ್ಲೆಟ್ನ್ನು ಕಾಲುವೆಯೊಂದಕ್ಕೆ ಎಸೆದಿದ್ದಾನೆ ಎನ್ನಲಾಗಿದೆ.