Lokayukta Raid: ಬೆಂಗಳೂರಿನಲ್ಲಿ 5 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಸರ್ಕಾರಿ ವಕೀಲೆ!
ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿ ವಿರುದ್ಧ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸಂತ್ರಸ್ತೆ ಬಳಿ ವಕೀಲೆ ಲಂಚ ಕೇಳಿದ್ದರು. ಅದರಂತೆ ಲಂಚ ಪಡೆಯುತ್ತಿದ್ದಾಗ ವಕೀಲೆ ಸಿಕ್ಕಿಬಿದ್ದಿದ್ದಾರೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ಜಾಮೀನು ಅರ್ಜಿಗೆ ತಕರಾರು ಅರ್ಜಿ ಸಲ್ಲಿಸಲು ದೂರುದಾರರಿಂದ 5 ಸಾವಿರ ಲಂಚ ಪಡೆಯುವ ವೇಳೆ ಮಹಿಳಾ ಪಬ್ಲಿಕ್ ಪ್ರಾಸಿಕ್ಯೂಟರ್, ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಸಿಸಿಹೆಚ್-54ರ ನ್ಯಾಯಾಲಯದ ಎಸ್ಪಿಪಿ ಸವಿತಾ ನವೀನ್ ಪಾಟೀಲ್ ಎಂಬುವವರನ್ನು ಲೋಕಾಯುಕ್ತ ಅಧಿಕಾರಿಗಳು (Lokayukta Raid) ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆ ದೂರುದಾರರಿಂದ 5 ಸಾವಿರ ರೂಪಾಯಿ ಲಂಚ ಪಡೆಯುವಾಗ ವಕೀಲೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಎಸ್ಪಿಪಿಗೆ ಕೋರ್ಟ್ ತಿಳಿಸಿತ್ತು.
ಪ್ರಕರಣದ ವಿಚಾರಣೆ ಮುಂದುವರಿಸಲು ಸಂತ್ರಸ್ತೆ ಬಳಿ ಸವಿತಾ ಅವರು ಲಂಚ ಕೇಳಿದ್ದರು. ಟೈಪಿಂಗ್ ಸೇರಿ ಇನ್ನಿತರ ಖರ್ಚಿಗಾಗಿ ₹5 ಸಾವಿರ ನೀಡುವಂತೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಸಂತ್ರಸ್ತೆ ಪರವಾಗಿ ಮಂಜುನಾಥ್ ಎಂಬುವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಬ್ರಿಜೇಶ್ ಮ್ಯಾಥ್ಯೂ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಶ್ರೀಕಾಂತ್ ತಂಡವು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.
ಪ್ರಕರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ಸುಭಾಷ್ ಎಂಬುವರು ಮಾತನಾಡಿ, ಜ್ಯೋತಿಷಿಯೊಬ್ಬರು ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಕೆಲ ದಿನಗಳ ಹಿಂದೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಜ್ಯೋತಿಷಿಯೊಬ್ಬರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಹಾಗೂ ನ್ಯಾಯಾಲಯದ ಮುಂದಿನ ವಿಚಾರಣೆ ಮುನ್ನೆಡೆಸಲು ಎಸ್ಪಿಪಿ ಕೈ ಸನ್ನೆಯಿಂದ 5 ಸಾವಿರ ನೀಡುವಂತೆ ಡಿಮ್ಯಾಂಡ್ ಮಾಡಿದ್ದರು. ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳಿಗೆ ನೀಡಿದ ದೂರಿನ ಮೇರೆಗೆ ಇಂದು 5 ಸಾವಿರ ಪಡೆಯುವಾಗ ಎಸ್ಪಿಪಿ ಸಿಕ್ಕಿಬಿದ್ದಿದ್ದಾರೆ. ನ್ಯಾಯ ಕೊಡಿಸಬೇಕಾದ ವಕೀಲರೇ ಲಂಚ ಕೇಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದ್ದಾರೆ.