Prajwal Revanna Case: ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಸಾಧ್ಯವಿಲ್ಲ: ಕಾರಾಗೃಹ ಇಲಾಖೆ ಸ್ಪಷ್ಟನೆ
ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ತಿಥಿಯಲ್ಲಿ ಭಾಗಿಯಾಗಲು ಜೈಲಿನಿಂದ ಪ್ರಜ್ವಲ್ ರೇವಣ್ಣನನ್ನು ಕರೆತರುವುದಕ್ಕೆ ಕುಟುಂಬಸ್ಥರು ಯತ್ನಿಸುತ್ತಿದ್ದಾರೆ. ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಪ್ರಜ್ವಲ್ ರೇವಣ್ಣ. -
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿ ಜೈಲುಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವವರಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಮತ್ತು ಇದು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ.
ಕಾರಾಗೃಹ ಇಲಾಖೆಯಿಂದ ಪೆರೋಲ್ ಸಿಗುವುದು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ, ಪ್ರಜ್ವಲ್ ಕುಟುಂಬಸ್ಥರು ಈಗ ನ್ಯಾಯಾಲಯದ ಬಾಗಿಲು ತಟ್ಟಲು ಸಿದ್ಧತೆ ನಡೆಸಿದ್ದಾರೆ.
ಇತ್ತೀಚಿಗೆ ನಿಧನರಾದ ಪ್ರಜ್ವಲ್ ರೇವಣ್ಣ ಅವರ ಅಜ್ಜಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ತಿಥಿಯ ದಿನ ಪೂಜೆ ಸಲ್ಲಿಸೋದಕ್ಕೆ ಜೈಲಿನಿಂದ ಅವರನ್ನು ಕರೆತರುವುದಕ್ಕೆ ಕುಟುಂಬಸ್ಥರು ಯತ್ನಿಸುತ್ತಿದ್ದಾರೆ. ಇದೀಗ ಪ್ರಜ್ವಲ್ ಅವರ ಕುಟುಂಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, 15 ದಿನಗಳ ಕಾಲ ಪೆರೋಲ್ ಸಿಕ್ಕರೆ ಜುಲೈ 30ಕ್ಕೆ ನಿಗದಿಯಾಗಿರುವ ಅಜ್ಜಿಯ ಪುಣ್ಯ ತಿಥಿಯಲ್ಲಿ ಭಾಗವಹಿಸಲಿದ್ದಾರೆ.
ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಜೈಲಿನಲ್ಲಿ ಮಾತನಾಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ನ್ಯಾಯಾಲಯದ ಆದೇಶದಂತೆ, ಜೈಲು ಮುಖ್ಯ ಅಧೀಕ್ಷಕರು, ಕಾರಾಗೃಹ ನಿಯಮಾವಳಿಗೆ ಅನುಗುಣವಾಗಿ ಕುಟುಂಬಸ್ಥರು, ಸಂಬಂಧಿಕರು ಮತ್ತು ಸ್ನೇಹಿತರಿಗೆ ಭೇಟಿಗೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.