BY Vijayendra: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೇಂದ್ರದ ಯೋಜನೆಗಳಿಗೆ ಕಲ್ಲು ಹಾಕುವ ಕೆಲಸ: ಬಿ.ವೈ. ವಿಜಯೇಂದ್ರ
BY Vijayendra: ಪುಕ್ಕಟೆ ಪ್ರಚಾರ ಗಿಟ್ಟಿಸುವ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳ ಹಪಾಹಪಿಯಿಂದ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಜನ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.


ಕಲಬುರಗಿ: ಯುಪಿಎ ಸರ್ಕಾರದ ಅವಧಿಯಲ್ಲಿ ಭಾರಿ ಹಗರಣಗಳು ನಡೆದಿದ್ದವು. ಬಳಿಕ ಎನ್ಡಿಎ ಅವಧಿಯಲ್ಲಿ ಈ ದೇಶಕ್ಕೆ ಉಜ್ವಲ ಭವಿಷ್ಯವಿದೆ; ಭಾರತದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಸಾಧ್ಯವಿದೆ ಎಂಬುದನ್ನು ನರೇಂದ್ರ ಮೋದಿಜೀ ಅವರ ಸರ್ಕಾರ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವು ಇತರ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತಲುಪಬಹುದು ಎಂಬ ವಿಶ್ವಾಸವನ್ನು ನರೇಂದ್ರ ಮೋದಿ ಅವರ ಸರ್ಕಾರ ನೀಡಿದೆ. 11 ವರ್ಷಗಳ ನರೇಂದ್ರ ಮೋದಿ ಅವರ ಸರ್ಕಾರವು ದಿಟ್ಟ ನಿರ್ಧಾರ ತೆಗೆದುಕೊಂಡು ಭಾರತವನ್ನು ಸದೃಢವಾಗಿ ಮುನ್ನಡೆಸಿ ದೇಶದ ಜನತೆಗೆ ಸಂತಸ ಕೊಟ್ಟಿದೆ ಎಂದರು.
2047ರಲ್ಲಿ ಈ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಆಗಬೇಕೆಂಬ ನಿಟ್ಟಿನಲ್ಲಿ ವಿಶ್ವಾಸ ತುಂಬುವ ರೀತಿಯಲ್ಲಿ ಪ್ರಧಾನಿಯವರು ಭಾರತವನ್ನು ಮುನ್ನಡೆಸುತ್ತಿದ್ದಾರೆ. ಕಳೆದ 11 ವರ್ಷಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವ ಉತ್ತಮ ಆಡಳಿತವನ್ನು ಮೋದಿಜೀ ಅವರು ನೀಡಿದ್ದಾರೆ ಎಂದು ತಿಳಿಸಿದರು. ನರೇಂದ್ರ ಮೋದಿಜೀ ಅವರ ನೇತೃತ್ವದ ಎನ್ಡಿಎ ಸರ್ಕಾರವು ಸತತವಾಗಿ 3ನೇ ಬಾರಿ ಅಧಿಕಾರಕ್ಕೆ ಬಂದು 11 ವರ್ಷಗಳನ್ನು ಪೂರೈಸಿದ ಶುಭ ಗಳಿಗೆ ಇದು. ಮೋದಿ ಅವರು 2014ರಲ್ಲಿ ಪ್ರಧಾನಿಯಾದರು. ಅದಕ್ಕೂ ಮುಂಚಿತವಾಗಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ ತಮ್ಮದೇ ಆದ ಅನುಭವವನ್ನು ಪಡೆದವರು ಎಂದರು.
ನಕ್ಸಲಿಸಂ ಬುಡಸಮೇತ ನಾಶ, 370ನೇ ವಿಧಿ ರದ್ದು
ಆಂತರಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹಿರಿಮೆ ಗರಿಮೆಗಳಿಗೆ ಪ್ರಧಾನಮಂತ್ರಿ ಮೋದಿ ಅವರ ಆಡಳಿತ ಸಾಕ್ಷಿಯಾಗಿದೆ. 10-15 ವರ್ಷಗಳ ಹಿಂದೆ ದೇಶವು ಉಗ್ರಗಾಮಿ ಚಟುವಟಿಕೆಗಳಿಂದ ತತ್ತರಿಸಿ ಹೋಗಿತ್ತು. ನಕ್ಸಲಿಸಂ ಪಿಡುಗು ದೇಶದ ಅನೇಕ ರಾಜ್ಯಗಳಿಗೆ ವಿಸ್ತರಿಸಿ ದೇಶದಲ್ಲಿ ಅಸ್ಥಿರತೆ ಕಾಡುತ್ತಿತ್ತು. ಭಾರತದ ಬಗ್ಗೆ ಜಗತ್ತಿನಲ್ಲಿ ವಿಶ್ವಾಸ ಬರುತ್ತಿರಲಿಲ್ಲ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು. ನರೇಂದ್ರ ಮೋದಿ ಅವರು ಮತ್ತು ಅಮಿತ್ ಶಾ ಅವರ ದಿಟ್ಟ ನಿರ್ಧಾರದಿಂದ ನಕ್ಸಲಿಸಂ ಅನ್ನು ಬಹುತೇಕ ಬುಡಸಮೇತ ಕಿತ್ತು ಹಾಕಲು ಸಾಧ್ಯವಾಗಿದೆ. 370ನೇ ವಿಧಿ ರದ್ದು ಮಾಡುವ ಕುರಿತು ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. 370ನೇ ವಿಧಿ ರದ್ದು ಮಾಡುವ ಮೂಲಕ ಜಮ್ಮು- ಕಾಶ್ಮೀರದಲ್ಲಿ ಶಾಂತಿ ಕಾಪಾಡುವ ಸ್ಥಿತಿ ನಿರ್ಮಾಣವಾಗಿದೆ. ಲಕ್ಷ ಲಕ್ಷ ಸಂಖ್ಯೆಯ ಪ್ರವಾಸಿಗರು ಅಲ್ಲಿಗೆ ಭೇಟಿ ಕೊಡುತ್ತಿದ್ದಾರೆ ಎಂದರು.
ಪುಕ್ಕಟೆ ಪ್ರಚಾರ ಗಿಟ್ಟಿಸುವ ಸಿಎಂ- ಡಿಸಿಎಂ ಹಪಾಹಪಿ
ಪುಕ್ಕಟೆ ಪ್ರಚಾರ ಗಿಟ್ಟಿಸುವ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳ ಹಪಾಹಪಿಯಿಂದ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಜನ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದರು. ಜಿಎಸ್ಟಿ ಮೂಲಕ 1 ಲಕ್ಷದ 12 ಸಾವಿರ ಕೋಟಿ ಮೊತ್ತ ಕರ್ನಾಟಕಕ್ಕೆ ಬಂದಿದೆ. ಕರ್ನಾಟಕವು ಗರಿಷ್ಠ ಜಿಎಸ್ಟಿ ಮೊತ್ತವನ್ನು ಪಡೆದ ರಾಜ್ಯ ಎಂದು ತಿಳಿಸಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳಿಗೆ ಕಲ್ಲು ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಅವರು ಟೀಕಿಸಿದರು.
ಈ ಸುದ್ದಿಯನ್ನೂ ಓದಿ | NEET Results 2025: ನೀಟ್ ಫಲಿತಾಂಶ ಪ್ರಕಟ; ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆ
ಅಹಮದಾಬಾದ್ ವಿಮಾನ ದುರಂತ ಅತ್ಯಂತ ಖೇದಕರ. ದುರ್ಘಟನೆ ಕುರಿತು ತನಿಖೆ ಪ್ರಾರಂಭವಾಗಿದೆ. ಬ್ಲ್ಯಾಕ್ ಬಾಕ್ಸ್ಗಳೂ ಸಿಕ್ಕಿವೆ. ಇಂಥ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಹೇಳಿದರು. ಬೆಂಗಳೂರಿನ ಕಾಲ್ತುಳಿತಕ್ಕೆ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೇ ಕಾರಣಕರ್ತರು. ಕಾಲ್ತುಳಿತಕ್ಕೆ ಪೊಲೀಸ್ ಅಧಿಕಾರಿಗಳು ಕಾರಣಕರ್ತರಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ಅವಿವೇಕತನದಿಂದ ನಡೆದುಕೊಂಡಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಈ ಸಂದರ್ಭದಲ್ಲಿ ಶಾಸಕ ಡಾ. ಅವಿನಾಶ್ ಜಾಧವ್, ಕಲಬುರ್ಗಿ ನಗರ ಜಿಲ್ಲಾಧ್ಯಕ್ಷ ಚಂದ್ರಕಾಂತ್ ಬಿ ಪಾಟೀಲ್, ಕಲಬುರಗಿ ಗ್ರಾಮಾತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ್ ಪಾಟೀಲ್ ಮತ್ತಿತರ ಮುಖಂಡರು ಇದ್ದರು.