ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MP Dr K Sudhakar: ಬಯಲುಸೀಮೆಗೆ ಒತ್ತು ನೀಡಿ, ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ, ಎಚ್‌ಎನ್‌ ವ್ಯಾಲಿಯಲ್ಲಿ ತೃತೀಯ ಹಂತದ ಶುದ್ಧೀಕರಣ ಮಾಡಿ: ಸಂಸದ ಡಾ.ಕೆ.ಸುಧಾಕರ್‌ ಆಗ್ರಹ

ಎಸ್‌ಟಿಪಿ ನೀರಿನಿಂದ ಬೆಳೆದ ತರಕಾರಿಗಳನ್ನೇ ಬೆಂಗಳೂರಿನ ಜನರು ಬಳಸುತ್ತಿದ್ದಾರೆ. ಸುಮಾರು 2 ಕೋಟಿ ಜನರು ಈ ನೀರನ್ನು ಬಳಸುತ್ತಿದ್ದಾರೆ. ಆದ್ದರಿಂದ ಈ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡಲೇಬೇಕಿದೆ. ಕಾಂಗ್ರೆಸ್‌ ಸರ್ಕಾರ ಈ ಕುರಿತು ತೀರ್ಮಾನ ಕೈಗೊಳ್ಳಲಿ. ನಮ್ಮ ಭಾಗದ ಪ್ರತಿನಿಧಿಗಳು ಈ ಬಗ್ಗೆ ಮಾತನಾಡಲಿ

ಸರ್ಕಾರ ಐಸಿಯುನಲ್ಲಿದೆ, ಬೆಲೆ ಏರಿಕೆಯಾಗಿದೆ, ಅಭಿವೃದ್ಧಿ ಕುಂಠಿತವಾಗಿದೆ

Profile Ashok Nayak Jun 18, 2025 6:52 PM

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರ ಬಯಲು ಸೀಮೆಯನ್ನು ಕಡೆಗಣಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲು ಹಾಗೂ ಎಚ್‌ಎನ್‌ ವ್ಯಾಲಿ ಯಲ್ಲಿ ತೃತೀಯ ಹಂತದ ಶುದ್ಧೀಕರಣ ಸೌಲಭ್ಯವನ್ನು ತರಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಆಗ್ರಹಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ಹಿಂದೆ ಸರಿದಿರುವುದು ಬೇಸರ ತಂದಿದೆ. ಎರಡೂವರೆ ವರ್ಷ ಗಳಲ್ಲಿ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳು ಕಡೆಗಣನೆಯಾಗಿದೆ. ಎಚ್‌ಎನ್‌ ವ್ಯಾಲಿಯ 210 ಎಂಎಲ್‌ಡಿಗೆ 3 ನೇ ಹಂತದ ಶುದ್ಧೀಕರಣ ಮಾಡಲು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇಷ್ಟು ವರ್ಷವಾದರೂ ಆ ಕೆಲಸ ಆಗಿಲ್ಲ. 210 ರಲ್ಲಿ 148 ಎಂಎಲ್‌ಡಿ ನೀರು ಮಾತ್ರ ಬರುತ್ತಿದೆ.

ಇದನ್ನೂ ಓದಿ: Chikkaballapur News: ರೈಲ್ವೇ ಮೇಲ್ಸೇತುವೆ ಮೇಲೆ ಎಲ್‌ಇಡಿ ಲೈಟುಗಳ ಅಳವಡಿಕೆ: ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳಿಗೆ ಕೃತಜ್ಞತೆ

ಎಸ್‌ಟಿಪಿ ನೀರಿನಿಂದ ಬೆಳೆದ ತರಕಾರಿಗಳನ್ನೇ ಬೆಂಗಳೂರಿನ ಜನರು ಬಳಸುತ್ತಿದ್ದಾರೆ. ಸುಮಾರು 2 ಕೋಟಿ ಜನರು ಈ ನೀರನ್ನು ಬಳಸುತ್ತಿದ್ದಾರೆ. ಆದ್ದರಿಂದ ಈ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡಲೇಬೇಕಿದೆ. ಕಾಂಗ್ರೆಸ್‌ ಸರ್ಕಾರ ಈ ಕುರಿತು ತೀರ್ಮಾನ ಕೈಗೊಳ್ಳಲಿ. ನಮ್ಮ ಭಾಗದ ಪ್ರತಿನಿಧಿಗಳು ಈ ಬಗ್ಗೆ ಮಾತನಾಡಲಿ ಎಂದು ಆಗ್ರಹಿಸಿದರು.

ಬಯಲುಸೀಮೆಗೆ ಕಾವೇರಿ, ಕೃಷ್ಣಾ, ತುಂಗಭದ್ರಾದಿಂದ ನೀರು ಸಿಗುವುದಿಲ್ಲ. ಎತ್ತಿನಹೊಳೆಯಿಂದ ನೀರು ಬರಲಿದೆ ಎಂದು 12 ವರ್ಷದ ಹಿಂದೆಯೇ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಹಿಂದಿನ ಬಿಜೆಪಿ ಸರ್ಕಾರ 2-4 ಸಾವಿರ ಕೋಟಿ ರೂ.ಗೂ ಅಧಿಕ ಅನುದಾನ ನೀಡಿ ಕಾಮಗಾರಿ ಮಾಡಿಸಿತ್ತು. ಕಾಂಗ್ರೆಸ್‌ ಸರ್ಕಾರ ಬಂದ ನಂತರ ಸರಿಯಾದ ಅನುದಾನ, ಭೂ ಸ್ವಾಧೀನ ಪರಿಹಾರ ನೀಡಿಲ್ಲ. ನೀರು ಇನ್ನೂ ಸಕಲೇಶಪುರದ ಬಳಿಯೇ ಇದ್ದು, ನಮ್ಮ ರೈತರಿಗೆ ನೀರು ಸಿಗುವುದು ತಡವಾಗುತ್ತಿದೆ. ಸಂಪುಟ ಸಭೆಯಲ್ಲಿ ಸ್ಪಷ್ಟವಾಗಿ ಈ ಬಗ್ಗೆ ನಿರ್ಧರಿಸಬೇಕು. 1 ಸಾವಿರ ಕೋಟಿ ರೂ. ನೀಡಿ ಕಾಮಗಾರಿ ಮುಗಿಸಬೇಕು ಎಂದು ಒತ್ತಾಯಿಸಿದರು.

ಭದ್ರಾ ಮೇಲ್ದಂಡೆ, ಕೃಷ್ಣಾದಿಂದ ಬಯಲುಸೀಮೆಗೆ ನೀರು ತರಬಹುದು. ಆದರೆ ರಾಜ್ಯ ಸರ್ಕಾರ ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. 

ಮೆಡಿಕಲ್‌ ಕಾಲೇಜನ್ನು ಬಿಜೆಪಿ ಅವಧಿಯಲ್ಲಿ ನಿರ್ಮಿಸಲಾಗಿದೆ. 810 ಕೋಟಿ ರೂ. ಖರ್ಚು ಮಾಡಿದ್ದರೂ, ಆಸ್ಪತ್ರೆ ಆರಂಭವಾಗಿಲ್ಲ. ಕ್ಷೇತ್ರದಲ್ಲಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರ ಗಳನ್ನು ನಾನು ನಿರ್ಮಿಸಿದ್ದೇನೆ. ಆದರೆ ಇನ್ನೂ ವೈದ್ಯಕೀಯ ಉಪಕರಣಗಳನ್ನು ಪೂರೈಕೆ ಮಾಡಿಲ್ಲ. ಉನ್ನತ ಶಿಕ್ಷಣ ಸಚಿವರು ನಮ್ಮ ಜಿಲ್ಲೆಗೆ ವಿಶ್ವವಿದ್ಯಾಲಯ ತರುತ್ತಾರೆ ಎಂದುಕೊಂಡಿದ್ದೆ. ಆದರೆ 9 ವಿಶ್ವವಿದ್ಯಾಲಯಗಳನ್ನು ಮುಚ್ಚಿಹಾಕಿದ್ದಾರೆ ಎಂದು ದೂರಿದರು.

ಬಿಜೆಪಿ ಬಜೆಟ್‌ನಲ್ಲಿ ಹೈಟೆಕ್‌ ಹೂ ಮಾರುಕಟ್ಟೆ ಘೋಷಿಸಲಾಗಿತ್ತು. ಆ ಯೋಜನೆಯನ್ನು ಈಗಿನ ಸರ್ಕಾರ ಮುಂದುವರಿಸಿಲ್ಲ. 900 ಎಕರೆ ಜಾಗದಲ್ಲಿ ಆಶ್ರಯ ಯೋಜನೆಯಡಿ 20 ಸಾವಿರ ನಿವೇಶನ ರೂಪಿಸಲಾಗಿದೆ. ಈಗಾಗಲೇ ಹಕ್ಕುಪತ್ರಗಳನ್ನೂ ನೀಡಿದ್ದು, ಅದನ್ನು ತಡೆಹಿಡಿಯಲಾಗಿದೆ. ಎರಡೂ ವರೆ ವರ್ಷದಲ್ಲಿ ಒಂದು ಮನೆ ಕಟ್ಟಿಸಿಲ್ಲ, ಒಂದು ನಿವೇಶನ ನೀಡಿಲ್ಲ ಎಂದರು. 

ಕೈಗಾರಿಕಾ ಪಾರ್ಕ್‌ಗಳನ್ನು ನಿರ್ಮಿಸಿದ್ದಾರೆಯೇ ಹೊರತು, ಅಲ್ಲಿ ಕೈಗಾರಿಕೆ ನಿರ್ಮಾಣವಾಗಿಲ್ಲ. ಇದು ರಿಯಲ್‌ ಎಸ್ಟೇಟ್‌ ದಂಧೆಯಾಗಿದೆ. ರೈತರಿಂದ ಫಲವತ್ತಾದ ಭೂಮಿಯನ್ನು ಪಡೆದು, ಅದನ್ನು ಕೋಟ್ಯಂತರ ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ರೈತರ ಬದುಕಿನ ಜೊತೆ ಆಟವಾಡುತ್ತಿರುವ ಸರ್ಕಾರಕ್ಕೆ ರೈತರ ಶಾಪ ತಟ್ಟಲಿದೆ. ಕೂಡಲೇ ಸಿಎಂ ಸಿದ್ದರಾಮಯ್ಯನವರು ಈ ಕುರಿತು ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ಬೆಂಬಲ ಬೆಲೆ ನೀಡಿ

ಮಾವು ಹಾಗೂ ದ್ರಾಕ್ಷಿ ಬೆಳೆಗಾರರಿಗೆ ಅನ್ಯಾಯವಾಗಿದೆ. ಆಂಧ್ರಪ್ರದೇಶದಲ್ಲಿ ರಾಜ್ಯ ಸರ್ಕಾರದಿಂದ ಮಾವು ಬೆಳೆಗೆ ಕೆಜಿಗೆ 4 ರೂ. ಬೆಂಬಲ ಬೆಲೆ ನೀಡಲಾಗುತ್ತಿದೆ. ಇಲ್ಲಿನ ಸರ್ಕಾರ ಕೂಡ ಮಾವು ಬೆಳೆಗೆ ಬೆಂಬಲ ಬೆಲೆ ನೀಡಬೇಕು. ಕೇಂದ್ರ ಸರ್ಕಾರ ರಾಗಿ, ಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸಿದೆ ಎಂದರು. 

ಕೇಂದ್ರದ ಪರಿಶಿಷ್ಟ ಜಾತಿ ಪಂಗಡ ಸಚಿವಾಲಯದ ಕೆಲವು ಯೋಜನೆಗಳಿಗೆ ರಾಜ್ಯ ಸರ್ಕಾರ ಪ್ರಸ್ತಾವವನ್ನೇ ಸಲ್ಲಿಸಿಲ್ಲ. ರಿಯಾಯಿತಿ ದರದಲ್ಲಿ ಔಷಧಿ ನೀಡುವ ಜನ ಔಷಧಿ ಮಳಿಗೆಗಳನ್ನು ಮುಚ್ಚಿಸಿ ಖಾಸಗಿ ಕಂಪನಿಗಳಿಗಾಗಿ ಲಾಬಿ ಮಾಡಲಾಗುತ್ತಿದೆ ಎಂದರು. 

ಸರ್ಕಾರ ಐಸಿಯುನಲ್ಲಿದೆ

ಗೌರಿಬಿದನೂರಿನಲ್ಲಿ ಕೇಂದ್ರ ಸರ್ಕಾರದ ಕುಸುಮ್‌ ಯೋಜನೆಗೆ ಚಾಲನೆ ನೀಡಲಾಗಿದೆ. ಇದನ್ನು ರಾಜ್ಯ ಸರ್ಕಾರ ಪ್ರಚಾರಕ್ಕೆ ಬಳಸಿಕೊಂಡಿರುವುದಲ್ಲದೆ, ಕೇಂದ್ರ ಸರ್ಕಾರದ ಯಾರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಬಸ್‌ ಟಿಕೆಟ್‌ ದರ, ಹಾಲಿನ ದರ, ಅಬಕಾರಿ ಸುಂಕ ಎಲ್ಲವೂ ಹೆಚ್ಚಿದ್ದರೂ, ಅಭಿವೃದ್ಧಿ ಮಾತ್ರ ಕುಂಠಿತವಾಗಿದೆ. ಈ ಸರ್ಕಾರ ಐಸಿಯುನಲ್ಲಿದೆ. ಸರ್ಕಾರ ಇನ್ನೂ ಬದುಕಿದೆ ಎಂದು ತೋರಿಸಿಕೊಳ್ಳಲು, ಕಲಬುರ್ಗಿ, ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ಮಾಡಿದ್ದಾರೆ ಎಂದರು. 

ಕಲಬುರ್ಗಿಯಲ್ಲಿ ಸಂಪುಟ ಸಭೆ ನಡೆದಾಗ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌ ನನಗೆ ತೃಪ್ತಿ ತಂದಿಲ್ಲ ಎಂದಿದ್ದರು. ಬಸವರಾಜ ರಾಯರೆಡ್ಡಿ ಅವರು ನಂ.1 ಭ್ರಷ್ಟಾಚಾರ ಎಂದು ಹೇಳಿದ್ದರು. ಅವರ ಪಕ್ಷದವರೇ ಸರ್ಕಾರವನ್ನು ತೆಗಳುತ್ತಿದ್ದಾರೆ. ಅಧಿಕಾರಿಗಳು ನಮಗೆ ಯಾವುದೇ ಸಹಕಾರ ನೀಡುತ್ತಿಲ್ಲ. ಲೋಕಾಯುಕ್ತ ಬಳಿ ಸಿಕ್ಕಿಹಾಕಿಕೊಂಡು ಅಮಾನತಾಗಿದ್ದ ಅಧಿಕಾರಿಯನ್ನು ನಗರಸಭೆಯಲ್ಲಿ ಕಮಿಶನರ್‌ ಮಾಡಿದ್ದಾರೆ. ಕೋಮುಲ್‌ ವಿಚಾರದಲ್ಲಿ ನನ್ನ ಮೇಲೆ ದ್ವೇಷ ಸಾಧಿಸಲು ಕೈಗೊಂಡ ಕ್ರಮದಿಂದ ರೈತರಿಗೆ ಅನ್ಯಾಯವಾಗಿದೆ. ಇನ್ನೂ ಚುನಾವಣೆಯೇ ನಡೆದಿಲ್ಲ. ಆದಷ್ಟು ಬೇಗ ಪಾರದರ್ಶಕವಾಗಿ ಚುನಾವಣೆ ನಡೆಯಲಿ ಎಂದರು.

ಇರಾನ್‌ನಲ್ಲಿ ಅಲ್ಪಸಂಖ್ಯಾತ ಯುವಜನರು ಸಿಲುಕಿದ್ದಾರೆ. ಆ ವಿದ್ಯಾರ್ಥಿಗಳನ್ನು ಮರಳಿ ಕರೆ ತರುವ ಬಗ್ಗೆ ವಿದೇಶಾಂಗ ಸಚಿವಾಲಯದೊಂದಿಗೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.