Kaiwara News: ಗುರುಪೂಜಾ ಸಂಗೀತೋತ್ಸವಕ್ಕೆ ವಿದ್ಯುಕ್ತ ತೆರೆ
ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಿದ್ದ ಸಂಗೀತೋತ್ಸವದಲ್ಲಿ ರಾಜ್ಯದ ವಿವಿಧ ಭಾಗ ಗಳಿಂದ ಆಗಮಿಸಿದ್ದ ಖ್ಯಾತ ಸಂಗೀತ ವಿದ್ವಾಂಸರು ಹಾಗೂ ನೂರಾರು ಭಜನಾ ತಂಡಗಳು ನಿರಂತರವಾಗಿ ಸಂಗೀತ ಸೇವೆ ಸಲ್ಲಿಸಿದವು. ಮೂರು ದಿನಗಳ ಕಾಲ ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗುರುಪೂಜೆ, ಸಂಗೀತ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು
-
ಕೈವಾರ: ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿನಾರೇಯಣ ಮಠದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ 72 ಗಂಟೆಗಳ ಅಖಂಡ ಗುರುಪೂಜಾ ಸಂಗೀತೋತ್ಸವವು ಗುರುವಾರ ಭಕ್ತಿಭಾವದ ವಾತಾವರಣದಲ್ಲಿ ವಿದ್ಯುಕ್ತವಾಗಿ ಸಮಾಪ್ತಿಯಾಯಿತು.
ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಿದ್ದ ಸಂಗೀತೋತ್ಸವದಲ್ಲಿ ರಾಜ್ಯದ ವಿವಿಧ ಭಾಗ ಗಳಿಂದ ಆಗಮಿಸಿದ್ದ ಖ್ಯಾತ ಸಂಗೀತ ವಿದ್ವಾಂಸರು ಹಾಗೂ ನೂರಾರು ಭಜನಾ ತಂಡಗಳು ನಿರಂತರವಾಗಿ ಸಂಗೀತ ಸೇವೆ ಸಲ್ಲಿಸಿದವು. ಮೂರು ದಿನಗಳ ಕಾಲ ಸಾವಿರಾರು ಭಕ್ತರು ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಗುರುಪೂಜೆ, ಸಂಗೀತ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಸಂಗೀತೋತ್ಸವದಲ್ಲಿ ಶಾಸ್ತ್ರೀಯ ಸಂಗೀತ, ಭರತನಾಟ್ಯ, ನಾದಸ್ವರ, ಹರಿಕಥೆ, ಬುರುಕಥೆ, ವೀರಗಾಸೆ, ಡೊಳ್ಳು ಕುಣಿತ, ತೊಗಲುಗೊಂಬೆಯಾಟ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭಜನಾ ಸೇವೆಗಳು ಜರುಗಿದವು.
ಇದನ್ನೂ ಓದಿ: Kaivara News: ಕೈವಾರದಲ್ಲಿ ಗುರುಪೂಜಾ ಸಂಗೀತೋತ್ಸವ ಇಂದಿನಿಂದ ಪ್ರಾರಂಭ
ಗುರುಪೂರ್ಣಿಮೆಯ ದಿನ ಕೈವಾರ ಕ್ಷೇತ್ರ ಭಕ್ತರಿಂದ ಕಿಕ್ಕಿರಿದು ತುಂಬಿತ್ತು. ಬೆಳಗ್ಗೆಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ಸದ್ಗುರು ತಾತಯ್ಯನವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸಭಾಂಗಣ ದಲ್ಲಿ ನಡೆದ ಗುರುಪೂಜೆಯಲ್ಲಿ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಹಿರಿಯ ಸಂಗೀತ ವಿದ್ವಾಂಸ ಹಾಗೂ ಪದ್ಮಶ್ರೀ ಪುರಸ್ಕೃತ ತಿರುವಾರೂರು ಭಕ್ತವತ್ಸಲಂ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, "ಸದ್ಗುರು ತಾತಯ್ಯನವರ ಸನ್ನಿಧಿಯಲ್ಲಿ ದೊರೆತಿರುವ ಈ ಗೌರವ ನನ್ನ ಜೀವನದ ಅಮೂಲ್ಯ ಕ್ಷಣವಾಗಿದೆ" ಎಂದು ಹೇಳಿದರು.
ಧರ್ಮಾಧಿಕಾರಿಗಳಾದ ಡಾ.ಎಂ.ಆರ್.ಜಯರಾಮ್ ಅವರ ನೇತೃತ್ವದಲ್ಲಿ ಸಂಕೀರ್ತನೆಯೊಂದಿಗೆ ಸಂಗೀತೋತ್ಸವಕ್ಕೆ ಮಂಗಳ ಹಾಡಲಾಯಿತು. ಕಾರ್ಯಕ್ರಮಕ್ಕಾಗಿ ನಿರ್ಮಿಸಿದ್ದ ವಿಶೇಷ ವೇದಿಕೆ ಮತ್ತು ಅಲಂಕಾರ ಭಕ್ತರ ಗಮನ ಸೆಳೆಯಿತು.
ಮೂರು ದಿನಗಳ ಕಾಲ ನಡೆದ ಉತ್ಸವದಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಯ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಿದರು.