Chikkaballapur News: ಪೆರೇಸಂದ್ರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ; ನೂರಾರು ಮಂದಿಗೆ ತಜ್ಞ ವೈದ್ಯರಿಂದ ಸೇವೆ
ಶಿಬಿರವನ್ನು ಬಿಜೆಪಿ ಮುಖಂಡ ಹಾಗೂ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ಬಿ. ರೆಡ್ಡಿ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಟ್ರಸ್ಟ್ ನಿರಂತರವಾಗಿ ಜನಪರ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೇ, ಪ್ರತಿಯೊಬ್ಬರೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅನಿವಾರ್ಯ.
-
ಚಿಕ್ಕಬಳ್ಳಾಪುರ: ಆರೋಗ್ಯವಂತ ಸಮಾಜ ನಿರ್ಮಾಣವೇ ನಿಜವಾದ ಸಮಾಜಸೇವೆ ಎಂಬ ಧ್ಯೇಯದೊಂದಿಗೆ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಹಾಗೂ ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಪೆರೇಸಂದ್ರದ ಶ್ರೀ ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ಮಂಡಿಕಲ್ ಹೋಬಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗಾಗಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಯಿತು.
ಶಿಬಿರವನ್ನು ಬಿಜೆಪಿ ಮುಖಂಡ ಹಾಗೂ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ಬಿ. ರೆಡ್ಡಿ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಟ್ರಸ್ಟ್ ನಿರಂತರವಾಗಿ ಜನಪರ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೇ, ಪ್ರತಿಯೊಬ್ಬರೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅನಿವಾರ್ಯ. ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿದರೆ ಚಿಕಿತ್ಸೆ ಸುಲಭವಾಗುವುದರ ಜೊತೆಗೆ ಕುಟುಂಬವೂ ಆರ್ಥಿಕ ಸಂಕಷ್ಟದಿಂದ ಪಾರಾಗುತ್ತದೆ ಎಂದು ಹೇಳಿದರು.
ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಹೃದಯ, ಮೂಳೆ, ಚರ್ಮ ಸೇರಿದಂತೆ ವಿವಿಧ ವಿಭಾಗ ಗಳ ತಜ್ಞ ವೈದ್ಯರು ಸಾರ್ವಜನಿಕರನ್ನು ತಪಾಸಣೆ ನಡೆಸಿ ಅಗತ್ಯ ಸಲಹೆ ಹಾಗೂ ಔಷಧಿ ಗಳನ್ನು ಉಚಿತವಾಗಿ ವಿತರಿಸಿದರು.
ಇದನ್ನೂ ಓದಿ: Chikkaballapur News: ಅಂಬೇಡ್ಕರ್ ಸೇವಾ ಸಮಿತಿ, ಕರ್ನಾಟಕ ಅಂಬೇಡ್ಕರ್ ಸೇನೆ ಪ್ರತಿಭಟನೆ; ಜಿಲ್ಲಾಡಳಿತಕ್ಕೆ ಮನವಿ
ಅಗತ್ಯವಿರುವವರಿಗೆ ಔಷಧಿ ,ಕನ್ನಡಕ, ಊರುಗೋಲು, ಇತ್ಯಾದಿ ಪರಿಕರಗಳನ್ನು ವಿತರಿಸುವುದರ ಜೊತೆಗೆ ಗಂಭೀರ ಆರೋಗ್ಯ ಸಮಸ್ಯೆ ಕಂಡುಬಂದ ರೋಗಿಗಳಿಗೆ ಬೆಂಗಳೂರಿನ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ದಾಖಲಿಸಿ ಮುಂದಿನ ಚಿಕಿತ್ಸೆಯನ್ನು ಒದಗಿಸುವ ವ್ಯವಸ್ಥೆಯನ್ನೂ ಟ್ರಸ್ಟ್ ಮಾಡಿತ್ತು.
ಮಂಡಿಕಲ್ ಹೋಬಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಮಹಿಳೆ ಯರು, ಹಿರಿಯ ನಾಗರಿಕರು ಹಾಗೂ ರೈತರು ಶಿಬಿರದ ಪ್ರಯೋಜನ ಪಡೆದುಕೊಂಡರು.
ಶಿಬಿರದಲ್ಲಿ ಭಾಗವಹಿಸಿದ್ದ ನಾಗರಿಕರ ಯೋಗಕ್ಷೇಮ ವಿಚಾರಿಸಿದ ಸಂದೀಪ್ ಬಿ. ರೆಡ್ಡಿ, ಪ್ರತಿಯೊಬ್ಬರ ಆರೋಗ್ಯವೇ ಸಮಾಜದ ದೊಡ್ಡ ಸಂಪತ್ತು. ಜನರ ಸಂಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುವುದೇ ನಮ್ಮ ಟ್ರಸ್ಟ್ನ ನಿಜವಾದ ಧ್ಯೇಯ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದ ಜನರಿಗೆ ನಗರದ ಮಟ್ಟದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ತಲುಪಿಸುವ ಈ ಆರೋಗ್ಯ ಶಿಬಿರ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಪಡೆದಿದ್ದು, ಇಂತಹ ಜನಪರ ಸೇವಾ ಕಾರ್ಯಕ್ರಮಗಳು ಇನ್ನಷ್ಟು ಗ್ರಾಮಗಳಿಗೆ ವಿಸ್ತರಿಸಬೇಕು ಎಂಬ ಅಭಿಪ್ರಾಯವನ್ನು ಸಾರ್ವಜನಿಕರು ವ್ಯಕ್ತಪಡಿಸಿದರು.
ಇದಕ್ಕೆ ದನಿಗೂಡಿಸಿದ ಸಂದೀಪ್ ರೆಡ್ಡಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉದ್ದಗಲಕ್ಕು ಈ ಸೇವೆಯನ್ನು ನಿರಂತರವಾಗಿ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ನೀವೇಳಿ ಸಂದೀಪ್ ರೆಡ್ಡಿ ಅಭಿಮಾನಿ ಬಳಗ ಮತ್ತು ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.