Gauribidanur News: ಜು.18ರೊಳಗೆ ಹಂದಿಗಳನ್ನು ನಗರದಿಂದ ಸ್ಥಳಾಂತರಿಸಿ: ಸಾಕಾಣೆದಾರರಿಗೆ ನಗರಸಭೆ ಕಟ್ಟುನಿಟ್ಟಿನ ಸೂಚನೆ
ಹಂದಿಗಳನ್ನು ನಗರದಿಂದ ಕನಿಷ್ಠ ಒಂದು ಕಿಲೋಮೀಟರ್ ದೂರಕ್ಕೆ ಸ್ಥಳಾಂತರಿಸಿ, ಅವುಗಳನ್ನು ಮುಕ್ತವಾಗಿ ಬಿಡದೆ ಸೂಕ್ತ ಗೂಡುಗಳಲ್ಲಿ ಸಾಕಬೇಕು. ನಗರ ವ್ಯಾಪ್ತಿಯಲ್ಲಿ ಹಂದಿಗಳು ಸಂಚರಿಸು ತ್ತಿರುವುದು ಕಂಡುಬಂದರೆ ಕಾನೂನಿನ ಪ್ರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
-
ಗೌರಿಬಿದನೂರು: ನಗರ ವ್ಯಾಪ್ತಿಯಲ್ಲಿ ಹಂದಿಗಳನ್ನು ಮುಕ್ತವಾಗಿ ಬಿಡುವುದರಿಂದ ನೈರ್ಮಲ್ಯ ಹದಗೆಡುವುದರ ಜೊತೆಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜು.18ರೊಳಗೆ ಎಲ್ಲ ಹಂದಿಗಳನ್ನು ನಗರದಿಂದ ಹೊರಗೆ ಸ್ಥಳಾಂತರಿಸಬೇಕು ಎಂದು ನಗರಸಭೆ ಅಧಿಕಾರಿಗಳು ಹಂದಿ ಸಾಕಾಣೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರಸಭೆ ಕಚೇರಿಯಲ್ಲಿ ಪೌರಾಯುಕ್ತರ ಸೂಚನೆಯಂತೆ ಸಹಾಯಕ ಕಾರ್ಯಪಾಲಕ ಅಭಿಯಂತ ರರು ಹಂದಿ ಸಾಕಾಣೆದಾರರ ಸಭೆ ನಡೆಸಿ, ಸಾರ್ವಜನಿಕರಿಂದ ನಗರದಲ್ಲಿ ಹಂದಿಗಳ ಹಾವಳಿಗೆ ಸಂಬಂಧಿಸಿದಂತೆ ಹಲವು ದೂರುಗಳು ಬಂದಿವೆ. ಹೀಗಾಗಿ ಇನ್ನು ಮುಂದೆ ನಗರ ವ್ಯಾಪ್ತಿಯಲ್ಲಿ ಹಂದಿಗಳು ಕಂಡುಬಂದರೆ ಸಂಬಂಧಪಟ್ಟ ಸಾಕಾಣೆದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಅಗತ್ಯವಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಂದಿಗಳನ್ನು ನಗರದಿಂದ ಕನಿಷ್ಠ ಒಂದು ಕಿಲೋಮೀಟರ್ ದೂರಕ್ಕೆ ಸ್ಥಳಾಂತರಿಸಿ, ಅವುಗಳನ್ನು ಮುಕ್ತವಾಗಿ ಬಿಡದೆ ಸೂಕ್ತ ಗೂಡುಗಳಲ್ಲಿ ಸಾಕಬೇಕು. ನಗರ ವ್ಯಾಪ್ತಿಯಲ್ಲಿ ಹಂದಿಗಳು ಸಂಚರಿಸು ತ್ತಿರುವುದು ಕಂಡುಬಂದರೆ ಕಾನೂನಿನ ಪ್ರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಹಂದಿ ಸಾಕಾಣೆದಾರರ ಪರವಾಗಿ ನರಸಿಂಹ, ಶ್ರೀನಿವಾಸ, ನರಸಿಂಹಮೂರ್ತಿ ಹಾಗೂ ಬಾಲಕೃಷ್ಣ ಅವರು ಅಧಿಕಾರಿಗಳ ಸೂಚನೆ ಪಾಲಿಸುವುದಾಗಿ ಲಿಖಿತ ರೂಪದಲ್ಲಿ ಒಪ್ಪಿಗೆ ನೀಡಿದರು. ಸಭೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ನವೀನ್ ಹಾಗೂ ನಗರಸಭೆಯ ಸಿಬ್ಬಂದಿ ಉಪಸ್ಥಿತರಿದ್ದರು.