Caste Census: ಜಾತಿಗಣತಿಗೆ ಆನ್ಲೈನ್ನಲ್ಲೂ ಮಾಹಿತಿ ನೀಡಲು ಅವಕಾಶ: ಡಿಸಿಎಂ ಡಿಕೆಶಿ
Caste Census: ಜಾತಿಗಣತಿ ವಿಚಾರವಾಗಿ ಇರುವ ಅಪಸ್ವರವನ್ನು ಸರಿಪಡಿಸಲಾಗುವುದು. ನಮ್ಮ ರಾಜ್ಯದವರು ಎಲ್ಲೇ ಇದ್ದರೂ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಜಾತಿಗಣತಿಗೆ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.


ನವದೆಹಲಿ: “ಜಾತಿ ಗಣತಿ (Caste Census) ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿ-ಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ನವದೆಹಲಿಯಲ್ಲಿ ಎಐಸಿಸಿ ನಾಯಕರ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಂಗಳವಾರ ಮಾತನಾಡಿದರು. “ಮಂಗಳವಾರದಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆಸಿ ಪಕ್ಷ ಸಂಘಟನೆ ವಿಚಾರವಾಗಿ, ರಾಜ್ಯ ರಾಜಕಾರಣ ಹಾಗೂ ಇತ್ತೀಚಿನ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ಮಾಡಲಾಯಿತು” ಎಂದು ಹೇಳಿದರು.
“ಜಾತಿ ಗಣತಿ ವಿಚಾರವಾಗಿ ಇದೇ ತಿಂಗಳ 12ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲು ನಿರ್ಧರಿಸಿದ್ದೆವು. ಈ ವಿಚಾರವಾಗಿ ಸಂಸದರು, ಶಾಸಕರು, ಸಂಘ ಸಂಸ್ಥೆಗಳು ನಮ್ಮ ವರಿಷ್ಠರ ಜತೆ ಚರ್ಚೆ ಮಾಡಿದ್ದಾರೆ. ಕೆಲವು ಸಂಘಟನೆ ಹಾಗೂ ಸಮಾಜಗಳಿಂದ ಈ ಜಾತಿ ಗಣತಿಗೆ ಅಪಸ್ವರ ಬಂದಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ನ್ಯಾಯಬದ್ಧವಾಗಿ ಅವಕಾಶ ಕಲ್ಪಿಸಿಕೊಡಬೇಕು ಎಂದು ವರಿಷ್ಠರು ನಮಗೆ ಮಾರ್ಗದರ್ಶನ ನೀಡಿದ್ದಾರೆ. ಈ ಜಾತಿ ಗಣತಿಯಲ್ಲಿ ಯಾರನ್ನೂ ಬಿಡಬಾರದು, ಎಲ್ಲರನ್ನು ಒಳಗೊಳ್ಳಬೇಕು ಎಂದು ತೀರ್ಮಾನಿಸಲಾಗಿದೆ. ಯಾರ ಅಪಸ್ವರವೂ ಇಲ್ಲದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.
“ಸಾಮಾಜಿಕ ನ್ಯಾಯದ ಬಗ್ಗೆ ಸರ್ಕಾರದ ಬದ್ಧತೆ ಇದೆ. ಜಾತಿ ಗಣತಿಯಲ್ಲಿ ಅಂಕಿ ಅಂಶಗಳ ಬಗ್ಗೆ ಅನೇಕ ಸಮಾಜಗಳು ಅಪಸ್ವರ ಎತ್ತಿದ್ದು, ಈ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ತೀರ್ಮಾನಿಸಲಾಗಿದೆ. ಸಾರ್ವಜನಿಕರು ನ್ಯಾಯಬದ್ಧವಾಗಿ ಯಾವ ಸಮಾಜಕ್ಕೆ ಸೇರಿದ್ದೀರಿ ಎಂಬುದನ್ನು ವ್ಯಕ್ತಪಡಿಸಿಕೊಳ್ಳಬೇಕು. ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕು. ಸಮಾಜದ ಮುಖಂಡರು ಹಾಗೂ ಮಠಾಧೀಶರು ಇದಕ್ಕೆ ಸಹಕರಿಸಬೇಕು” ಎಂದು ಮನವಿ ಮಾಡಿದರು.
“ಕಳೆದ ಎರಡು ತಿಂಗಳಿನಿಂದ ಒಳಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಅವರ ಜನಗಣತಿ ಮಾಡುತ್ತಿದ್ದೇವೆ. ಹೀಗಾಗಿ ಈ ಪ್ರಕ್ರಿಯೆ ಸುದೀರ್ಘವಾಗಿ ನಡೆಯುವುದರಿಂದ ಇದನ್ನು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನಾವು ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು. ಇದರಲ್ಲಿ ಯಾವುದೇ ಆತಂಕ ಬೇಡ. ನಮ್ಮ ಈ ಪ್ರಯತ್ನದ ಮೂಲಕ ಜಾತಿಗಣತಿ ವಿಚಾರವಾಗಿ ಇರುವ ಅಪಸ್ವರವನ್ನು ಸರಿಪಡಿಸಲಾಗುವುದು. ನಮ್ಮ ರಾಜ್ಯದವರು ಎಲ್ಲೇ ಇದ್ದರೂ ಈ ಬಗ್ಗೆ ಆನ್ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗುವುದು” ಎಂದು ತಿಳಿಸಿದರು.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆಯಾಯಿತೇ ಎಂದು ಕೇಳಿದಾಗ, “ಈ ವಿಚಾರವಾಗಿ ಚರ್ಚೆ ಮಾಡಲಾಯಿತು. ಈ ದುರ್ಘಟನೆಯನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಬಗ್ಗೆ ವರಿಷ್ಠರಿಗೆ ಸಂಪೂರ್ಣ ಮಾಹಿತಿ ನೀಡಿ ಸತ್ಯಾಸತ್ಯತೆಯನ್ನು ವಿವರಿಸಿದ್ದೇವೆ” ಎಂದು ತಿಳಿಸಿದರು.
ಸಚಿವ ಸಂಪುಟ ಮರುವಿಂಗಡಣೆ ಬಗ್ಗೆ ಚರ್ಚೆಯಾಯಿತೇ ಎಂದು ಕೇಳಿದಾಗ, “ಈ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ” ಎಂದು ತಿಳಿಸಿದರು.
ವಿಧಾನ ಪರಿಷತ್ ಸ್ಥಾನಕ್ಕೆ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಹೈಕಮಾಂಡ್ ಪರಿಶೀಲಿಸಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಿದೆ” ಎಂದು ತಿಳಿಸಿದರು.
ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಘೋಷಣೆ
ನವದೆಹಲಿ: ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ (Caste census) ನಡೆಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿರುವ ಅವರು, ಜಾತಿಗಣತಿ ಸಮೀಕ್ಷೆ ನಡೆದು 9, 10 ವರ್ಷವಾಗಿದೆ. ಹೀಗಾಗಿ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಜಾತಿಗಣತಿ ವರದಿಯನ್ನು ನಾವು ಅನುಮೋದನೆ ಮಾಡಿದ್ದೇವೆ. ಆದರೆ, ಕೆಲವರು ಅಪಸ್ವರ ಎತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ರಾಹುಲ್ ಗಾಂಧಿ ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಹೇಳಿದ್ದಾರೆ.
ನಿರ್ದಿಷ್ಟ ಕಾಲ ಮಿತಿಯಲ್ಲಿ ಮರು ಸಮೀಕ್ಷೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಬಗ್ಗೆ ಜೂನ್ 12 ರಂದು ನಿರ್ಧಾರ ಕೈಗೊಳ್ಳಲಾಗುವುದು. ಸಭೆಯಲ್ಲಿ ರಾಜ್ಯದ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದರು. ಮುಖ್ಯವಾಗಿ ಜಾತಿ ಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು ಎಂದು ತಿಳಿಸಿದ್ದಾರೆ.
ಕಾಲ್ತುಳಿತ ದುರಂತ ಪ್ರಕರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದ್ದು, ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ್ದೇವೆ. ಸಿಐಡಿ, ನ್ಯಾ.ಕುನ್ಹಾ ನೇತೃತ್ವದ ತನಿಖೆ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಲೀಸ್ ಅಧಿಕಾರಿಗಳ ಅಮಾನತು, ಇಂಟೆಲಿಜೆನ್ಸ್ ಮುಖ್ಯಸ್ಥರ ವರ್ಗಾವಣೆ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ ಎಂದರು.
ಈ ಸುದ್ದಿಯನ್ನೂ ಓದಿ | Caste Census: ಜಾತಿಗಣತಿ ವರದಿ; ಮರು ಗಣತಿಗೆ ರಾಜ್ಯ ಸರ್ಕಾರ ನಿರ್ಧಾರ, ಜೂ.12ಕ್ಕೆ ವಿಶೇಷ ಕ್ಯಾಬಿನೆಟ್ ಸಭೆ