NEET exam: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್ ಕೋಚಿಂಗ್
ರಾಜ್ಯದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳು ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರವು ಹಂತ ಹಂತವಾಗಿ ಪರಿಣಾಮಕಾರಿ ಕೋಚಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಭರವಸೆ ನೀಡಿದರು.
ಸಚಿವ ಶರಣ್ ಪ್ರಕಾಶ್ ಪಾಟೀಲ್ -
ಬೆಂಗಳೂರು, ಮಾರ್ಚ್ 17: ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಹಳ್ಳಿಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ನೀಟ್ ತರಬೇತಿ (NEET exam coaching) ನೀಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Dr Sharanaprakash R Patil) ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ನ ಪ್ರಶ್ನೋತ್ತರ ಅವಧಿಯಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ನೀಟ್ ಪದ್ಧತಿಯು ಗ್ರಾಮೀಣ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದಿಂದ ವಂಚಿಸುತ್ತಿದೆ. ಕೇವಲ 3 ಲಕ್ಷ ರೂಪಾಯಿ ಸಹಾಯಧನದಿಂದ ಬಡ ವಿದ್ಯಾರ್ಥಿಗಳು ಕೋಚಿಂಗ್ ಪಡೆಯಲು ಸಾಧ್ಯವೇ ಎಂದು ಐವನ್ ಡಿಸೋಜಾ ಆತಂಕ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಪಾಟೀಲ್, ನೀಟ್ ವ್ಯವಸ್ಥೆಯಿಂದ ರಾಜ್ಯದ ವೈದ್ಯಕೀಯ ಸೀಟುಗಳ ಸಂಖ್ಯೆಯೇನೂ ಕಡಿಮೆಯಾಗಿಲ್ಲ. ನಾವು ನೀಟ್ ಪದ್ಧತಿಯನ್ನು ರದ್ದುಗೊಳಿಸಲು ನಿರ್ಧರಿಸಿದ್ದೆವು. ಆದರೆ ಸುಪ್ರೀಂ ಕೋರ್ಟ್ ಈ ಪದ್ಧತಿಯ ಪರವಾಗಿ ತೀರ್ಪು ನೀಡಿದೆ. ಆದ್ದರಿಂದ, ರಾಜ್ಯದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳು ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರವು ಹಂತ ಹಂತವಾಗಿ ಪರಿಣಾಮಕಾರಿ ಕೋಚಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ ಎಂದು ಭರವಸೆ ನೀಡಿದರು.
CET, NEET coaching: ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಸಿಇಟಿ, ನೀಟ್ ಉಚಿತ ತರಬೇತಿ; ಅನುದಾನ ಬಿಡುಗಡೆ
ವೈದ್ಯಕೀಯ ಶಿಕ್ಷಣ ಪಡೆಯಲು ನೀಟ್ ಪರೀಕ್ಷೆ ಕಡ್ಡಾಯವಾದಾಗಿನಿಂದ, ಕರ್ನಾಟಕದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ದೊಡ್ಡ ಮಟ್ಟದ ಸವಾಲು ಎದುರಾಗಿದೆ. ನಗರ ಪ್ರದೇಶದ ವಿದ್ಯಾರ್ಥಿಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಖಾಸಗಿ ತರಬೇತಿ ಕೇಂದ್ರಗಳಲ್ಲಿ ಕೋಚಿಂಗ್ ಪಡೆಯುತ್ತಿದ್ದರೆ, ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಸರಿಯಾದ ಮಾರ್ಗದರ್ಶನವಿಲ್ಲದೆ ವೈದ್ಯಕೀಯ ಸೀಟು ಪಡೆಯಲು ಪರದಾಡುತ್ತಿದ್ದಾರೆ. ಇದೇ ಕಾರಣಕ್ಕೆ ರಾಜ್ಯ ಸರ್ಕಾರವು ನೀಟ್ ಪದ್ಧತಿಯನ್ನು ವಿರೋಧಿಸಿ ರದ್ದುಗೊಳಿಸಲು ಈ ಹಿಂದೆ ಚಿಂತನೆ ನಡೆಸಿತ್ತು. ಆದರೆ, ನೀಟ್ ಪರೀಕ್ಷೆಯ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಈಗ ಪರೀಕ್ಷೆಯನ್ನು ಎದುರಿಸುವುದೊಂದೇ ವಿದ್ಯಾರ್ಥಿಗಳ ಮುಂದಿರುವ ದಾರಿಯಾಗಿದೆ.
ಹೀಗಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಕರ್ನಾಟಕ ಸರ್ಕಾರವು ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡುವುದು ಮತ್ತು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗಳನ್ನು ರೂಪಿಸುತ್ತಿದೆ. ಸಚಿವರು ಈಗ ನೀಡಿರುವ ಉಚಿತ ತರಬೇತಿ ಭರವಸೆಯು ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.