ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tumkur News: ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಹೋರಾಟ; ಇಬ್ಬರು ಸ್ವಾಮೀಜಿಗಳು ಸೇರಿ 11 ಮಂದಿ ವಿರುದ್ಧ ಎಫ್‌ಐಆರ್

Tumkur News: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ನಡೆಸಿದ್ದ ಬೃಹತ್ ಪ್ರತಿಭಟನೆ ಸಂಬಂಧ ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರಿಗೆ ತೊಂದರೆ, ಸರ್ಕಾರಿ ವಾಹನಗಳಿಗೆ ಹಾನಿ, ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಮಾಡಿ ತೊಂದರೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಹೋರಾಟ; 11 ಮಂದಿ ವಿರುದ್ಧ ಎಫ್‌ಐಆರ್

Profile Prabhakara R Jun 1, 2025 3:19 PM

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ರೈತರು, ಮಠಾಧೀಶರು, ಜನಪ್ರತಿನಿಧಿಗಳು ಸೇರಿ ನಡೆಸಿದ್ದ ಬೃಹತ್ ಪ್ರತಿಭಟನೆ (Tumkur News) ಸಂಬಂಧ ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಸ್ವಾಮೀಜಿಗಳು ಯಾರೆಂದು ಹೆಸರು ಉಲ್ಲೇಖ ಮಾಡಿಲ್ಲ. ಶನಿವಾರ ಗುಬ್ಬಿ ಬಳಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಜನಪ್ರತಿನಿಧಿಗಳು, ಮಠಾಧೀಶರು ಬೆಂಬಲ ನೀಡಿದ್ದರು. ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರಿಗೆ ತೊಂದರೆ, ಸರ್ಕಾರಿ ವಾಹನಗಳಿಗೆ ಹಾನಿ, ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಮಾಡಿ ತೊಂದರೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಈ ವೇಳೆ ಸಿಪಿಐ, ಪಿಎಸ್‌ಐ, ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಹಿಟಾಚಿಯಿಂದ ಪೈಪ್ ಮುಚ್ಚುವ ವೇಳೆ ಪೊಲೀಸ್ ವರಿಷ್ಠಾಧಿಕಾರಿ ಕೈಗೆ ಗಾಯವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ನಡೆಸಲಾಗಿದೆ ಎಂದು ಕೇಸ್ ದಾಖಲಾಗಿದೆ.

ಯಾರ ವಿರುದ್ಧ ಎಫ್‌ಐಆರ್?

ಶಾಸಕರಾದ ಸುರೇಶ್ ಗೌಡ, ಜ್ಯೋತಿ ಗಣೇಶ್, ಎಂ.ಟಿ ಕೃಷ್ಣಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ದಿಲೀಪ್ ಕುಮಾರ್ ಹಾಗೂ ಇಬ್ಬರು ಸ್ವಾಮೀಜಿಗಳ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಆದರೆ, ಸ್ವಾಮೀಜಿಗಳ ಹೆಸರು ಉಲ್ಲೇಖಿಸಿಲ್ಲ. ಒಟ್ಟು 11 ಜನರ ವಿರುದ್ಧ ಎಫ್​ಐಆರ್ ದಾಖಲಿಸಿದ್ದು, ಇದರಲ್ಲಿ 10 ಸ್ವಯಂಪ್ರೇರಿತ ಪ್ರಕರಣಗಳಾಗಿವೆ. ಒಂದು ಕೇಸ್ ಮಾತ್ರ ಗುತ್ತಿಗೆದಾರ ನೀಡಿದ ದೂರಿನ ಮೇಲೆ ದಾಖಲಾಗಿದ್ದು, ಇನ್ನೂ ಮೂರರಿಂದ ನಾಲ್ಕು ಕೇಸ್ ದಾಖಲಾಗುವ ಸಾಧ್ಯತೆ ಇದೆ.

ಎಫ್‌ಐಆರ್‌ ಬಗ್ಗೆ ಶಾಸಕ ಸುರೇಶ್ ಗೌಡ ಪ್ರತಿಕ್ರಿಯಿಸಿ, ಹೇಮಾವತಿ ಕೆನಾಲ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ ಹೋರಾಟಗಾರರ ವಿರುದ್ಧ ದಾಖಲಿಸಿರುವ ಎಫ್ಐಆರ್‌ಗೆ ಹೆದರುವುದಿಲ್ಲ. ರೈತರ ಪರವಾಗಿ ನಾನೇ ಹೋರಾಟ ಮಾಡುತ್ತೇನೆ ಎಂದು ಕಿಡಿಕಾರಿದ್ದಾರೆ.

ಪ್ರಾಣ ಕೊಡಲು ಸಿದ್ಧನಿದ್ದೇನೆ : ಶಾಸಕ ರಂಗನಾಥ್

ಜಿಲ್ಲೆಯ ಮಗನಾಗಿ ಯೋಜನೆಯನ್ನು ಬೇರೆ ಕಡೆ ತೆಗೆದುಕೊಂಡು ಹೋಗಲು ನಾನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕುಣಿಗಲ್‌ಗೆ ಮಾತ್ರ ಸೀಮಿತವಾದ ಯೋಜನೆ. ಈ ಜಿಲ್ಲೆಯ ಮಗನಾಗಿ ಯೋಜನೆಯನ್ನು ಬೇರೆ ಕಡೆ ತೆಗೆದುಕೊಂಡು ಹೋಗಲು ನಾನು ಬಿಡುವುದಿಲ್ಲ. ಯೋಜನೆಯನ್ನು ರಾಮನಗರಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆಂಬುವುದು ಶುದ್ಧ ಸುಳ್ಳು. ರೈತರ ಹಿತಾಸಕ್ತಿಗೆ ನಾನು ನನ್ನ ಪ್ರಾಣ ಕೊಡಲು ಸಿದ್ಧನಿದ್ದೇನೆ ಎಂದು ಕುಣಿಗಲ್ ಶಾಸಕ ರಂಗನಾಥ್ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Hemavathi Express Link Canal: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಲ್ಲ: ಡಿಸಿಎಂ ಡಿಕೆಶಿ