Kusum-C scheme: ಕುಸುಮ್-ಸಿ ಯೋಜನೆಯಿಂದ ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ತಾಸು ವಿದ್ಯುತ್ ಪೂರೈಕೆ ಸಾಧ್ಯ: ಸಿಎಂ
Kusum-C scheme: ರೈತರಿಗೆ ಹಗಲಿನ ವೇಳೆ ಸಮರ್ಪಕ ವಿದ್ಯುತ್ ಪೂರೈಸುವುದೇ ಕುಸುಮ್- ಸಿ ಯೋಜನೆಯ ಉದ್ದೇಶವಾಗಿದೆ. ಕುಸುಮ್- ಸಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆ.ಜೆ.ಜಾರ್ಜ್ ಅವರು ಸಚಿವರಾದ ಮೇಲೆ ರಾಜ್ಯದಲ್ಲಿ ಕುಸುಮ್- ಸಿ ಯೋಜನೆ ಅನುಷ್ಠಾನ ಆರಂಭಿಸಲಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಗೌರಿಬಿದನೂರು: ಕುಸುಮ್- ಸಿ ಯೋಜನೆಯಿಂದಾಗಿ ರೈತರ ಕೃಷಿ ಪಂಪ್ಸೆಟ್ಗಳಿಗೆ ಇನ್ನು ಮುಂದೆ ಹಗಲಿನ ವೇಳೆಯೇ 7 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಪೂರೈಸಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲೆಯ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಕುಸುಮ್-ಸಿ ಯೋಜನೆಯಡಿ ಸ್ಥಾಪಿಸಿರುವ ಸೋಲಾರ್ ಘಟಕವನ್ನು (Kusum-C scheme) ಬುಧವಾರ ಲೋಕಾರ್ಪಣೆಗೊಳಿಸಿದ ಬಳಿಕ ಪಟ್ಟಣದ ನೇತಾಜಿ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಮಾತನಾಡಿದರು.
ರೈತರಿಗೆ ಹಗಲಿನ ವೇಳೆ ಸಮರ್ಪಕ ವಿದ್ಯುತ್ ಪೂರೈಸುವುದೇ ಕುಸುಮ್- ಸಿ ಯೋಜನೆಯ ಉದ್ದೇಶವಾಗಿದೆ. ಕುಸುಮ್- ಸಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. 2021ರಲ್ಲಿ ರಾಜ್ಯದಲ್ಲೂ ಇದನ್ನು ಜಾರಿಗೊಳಿಸುವ ಸಂಬಂಧ ಆಗಿನ ಬಿಜೆಪಿ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿತ್ತು. ಆದರೆ, ನಂತರ 2 ವರ್ಷ ಅಧಿಕಾರದಲ್ಲಿದ್ದರೂ ಯೋಜನೆ ಜಾರಿಗೊಳಿಸುವ ಪ್ರಯತ್ನ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆ.ಜೆ.ಜಾರ್ಜ್ ಅವರು ಸಚಿವರಾದ ಮೇಲೆ ರಾಜ್ಯದಲ್ಲಿ ಕುಸುಮ್- ಸಿ ಯೋಜನೆ ಅನುಷ್ಠಾನ ಆರಂಭಿಸಲಾಯಿತು ಎಂದರು.
ಕುಸುಮ್-ಸಿ ಯೋಜನೆಯಡಿ ನಮ್ಮ ರಾಜ್ಯದಲ್ಲಿ 389 ವಿದ್ಯುತ್ ಸರಬರಾಜು ಉಪ ಕೇಂದ್ರಗಳನ್ನು ಸೌರೀಕರಣಗೊಳಿಸಲಾಗುತ್ತಿದೆ. 2369 ಮೆಗಾವ್ಯಾಟ್ ಸಾಮರ್ಥ್ಯದ ಸೌರಘಟಕಗಳು 1,555 ಕೃಷಿ ಫೀಡರ್ಗಳಿಗೆ ಸೌರವಿದ್ಯುತ್ ಬಲ ನೀಡಲಿದೆ. ಇದರಿಂದ 6,32,794 ಕೃಷಿ ಪಂಪ್ಸೆಟ್ಗಳಿಗೆ ಸೋಲಾರ್ ವಿದ್ಯುತ್ ಸಿಗಲಿದೆ. ಇದರಿಂದ ರೈತರಿಗೆ ಹಗಲು ವೇಳೆಯೇ ಗುಣಮಟ್ಟದ ವಿದ್ಯುತ್ ಲಭ್ಯವಾಗುವುದರ ಜತೆಗೆ ವಿದ್ಯುತ್ ಅಪವ್ಯಯವೂ ನಿಲ್ಲುತ್ತದೆ. ಹೀಗಾಗಿ ಕುಸುಮ್ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತಂದ ಇಂಧನ ಸಚಿವ ಕೆ.ಜೆ.ಜಾರ್ಜ್ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಕೇಂದ್ರದ ಯೋಜನೆಗೆ ರಾಜ್ಯದ ಸಬ್ಸಿಡಿ ಹೆಚ್ಚು:
ರೈತರಿಗೆ ಸೋಲಾರ್ ಪಂಪ್ ಸೆಟ್ ನೀಡುವ ಕುಸುಮ್- ಬಿ ಯೋಜನೆಯನ್ನು ರಾಜ್ಯ ಸರ್ಕಾರ ಈಗಾಗಲೇ ಜಾರಿಗೆ ತಂದಿದೆ. ಇದು ಕೇಂದ್ರ ಸರ್ಕಾರದ ಯೋಜನೆಯಾದರೂ ಅವರು ನೀಡುವ ಸಹಾಯಧನ ಶೇ. 30ರಷ್ಟು ಮಾತ್ರ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರದ ಸಹಾಯಧನವನ್ನು ಶೇ. 50ಕ್ಕೆ ಹೆಚ್ಚಿಸಲಾಗಿದೆ. ಶೇ. 20ರಷ್ಟನ್ನು ಮಾತ್ರ ಫಲಾನುಭವಿ ಭರಿಸಿದರೆ ಸಾಕು. ಕೇಂದ್ರ ಸರ್ಕಾರದ ಯೋಜನೆಗಳಿಗೂ ನಮ್ಮ ಸರ್ಕಾರ ಅವರಿಗಿಂತ ಹೆಚ್ಚು ಸಹಾಯಧನ ನೀಡುತ್ತಿರವುದೇ ರೈತರ ಬಗ್ಗೆ ನಮಗಿರುವ ಕಾಳಜಿಗೆ ಸಾಕ್ಷಿ ಎಂದರು.
ಬಿಜೆಪಿಗೆ ರೈತಪರ ಕಾಳಜಿ ಇತ್ತೆ?
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಒಂದೇ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿರಲಿಲ್ಲ. ಮಾತೆತ್ತಿದರೆ ನಮ್ಮದು ರೈತಪರ ಸರಕಾರ ಎನ್ನುತ್ತದೆ. ಆದರೆ, ನಾವು ಅಧಿಕಾರಕ್ಕೆ ಬಂದ ಮೇಲೆ 4000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿದ್ದೇವೆ. ಪ್ರಸ್ತುತ 35 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯವಿದ್ದು, 2030ರ ವೇಳೆಗೆ ಇದನ್ನು 60 ಸಾವಿರ ಮೆಗಾವ್ಯಾಟ್ಗೆ ಹೆಚ್ಚಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ನಮ್ಮದು ರೈತರಪರ ಸರಕಾರ
ರೈತರ ಕೃಷಿ ಪಂಪ್ಸೆಟ್ಗಳಿಗೆ ಸರ್ಕಾರ ವಾರ್ಷಿಕ 19,000 ಕೋಟಿ ರೂ. ಸಹಾಯಧನ ನೀಡುತ್ತಿದೆ. ಆದರೂ ನಮ್ಮ ಸರ್ಕಾರದ ಬಗ್ಗೆ ಪ್ರತಿಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುತ್ತಿವೆ. ಯಾವುದೇ ಕಾರಣಕ್ಕೂ ಕೃಷಿ ಪಂಪ್ ಸೆಟ್ಗಳಿಗೆ ಉಚಿತ ವಿದ್ಯುತ್ ಯೋಜನೆ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಪ್ರಿ ಪೇಯ್ಡ್ ಮೀಟರ್ ಕುರಿತು ಚಿಂತನೆ: ಜಾರ್ಜ್
ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಪರಿಷ್ಕೃತ ವಿತರಣಾ ವಲಯ ಯೋಜನೆ (ಆರ್ ಡಿಎಸ್ಎಸ್) ಯೋಜನೆಯಡಿ ಇಂಧನ ಮೂಲ ಸೌಕರ್ಯಕ್ಕೆ ಕೇಂದ್ರ ಸರ್ಕಾರದಿಂದ ಶೇ. 60 ಸಹಾಯಧನ ಸಿಗುವುದರ ಜತೆಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಪ್ರತಿ ಮೀಟರ್ಗೆ 900 ರೂ. ಸಬ್ಸಿಡಿ ಸಿಗುತ್ತದೆ. ಆದರೆ, ಕೆಲವೊಂದು ಷರತ್ತುಗಳ ಕಾರಣಕ್ಕೆ ಹಿಂದಿನ ರಾಜ್ಯ ಸರ್ಕಾರ ಅದನ್ನು ಒಪ್ಪಿಕೊಂಡಿರಲಿಲ್ಲ. ಇದೀಗ ಆರ್ಡಿಎಸ್ಎಸ್ ಯೋಜನೆ ಅಳವಡಿಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಇಂಧನ ಸಚಿವರನ್ನು ಕೋರಲಾಗಿದ್ದು, ಷರತ್ತುಗಳಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಒಪ್ಪಿರುವ ಸಚಿವರು, ಇತರೆ ಇಲಾಖೆಗಳಿಂದ ಬರಬೇಕಾದಬಾಕಿ ವಸೂಲಿಗೆ ಶೇ. 2ರಷ್ಟು ಸೆಸ್ ವಿಧಿಸಬೇಕು ಮತ್ತು ಸರ್ಕಾರಿ ಕಚೇರಿಗಳಿಗೆ ಪ್ರಿ ಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಸಬೇಕು ಎಂದು ಹೇಳಿದ್ದಾರೆ. ಇದನ್ನು ಕಾರ್ಯರೂಪಕ್ಕೆ ತರಲು ಸಚಿವ ಸಂಪುಟದ ಸದಸ್ಯರು ಸಹಕಾರ ನೀಡಬೇಕು," ಎಂದು ಮನವಿ ಮಾಡಿದರು.
ಪಿಎಂ ಕುಸುಮ್-ಸಿ ಯೋಜನೆ ರೈತರಿಗೆ ಅದರಲ್ಲೂ ಮುಖ್ಯವಾಗಿ ಬಯಲು ಸೀಮೆ ಭಾಗದ ರೈತರಿಗೆ ವರದಾನವಾಗಿದೆ. ಯೋಜನೆ ಜಾರಿಗೊಳಿಸಲು ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡುತ್ತಿದೆ. ಆದರೆ, ಭೂಮಿ ಕೊರತೆ ಇದೆ. ಹೀಗಾಗಿ ಶಾಸಕರು ಆಸಕ್ತಿ ವಹಿಸಿ ಯೋಜನೆ ಅನುಷ್ಠಾನಗೊಳಿಸಲು ಸಹಕರಿಸಿದರೆ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು.
ಪಾವಗಡ ಸೋಲಾರ್ ಪಾರ್ಕ್ ಮತ್ತಷ್ಟು ವಿಸ್ತರಣೆ
2013 ರಿಂದ 2014ರ ಅವಧಿಯಲ್ಲಿ ರಾಜ್ಯ ಸರ್ಕಾರ ಇಂಧನ ಇಲಾಖೆಯಲ್ಲಿ ಕೈಗೊಂಡ ಹಲವು ಯುಕ್ತ ಕ್ರಮಗಳಿಂದಾಗಿ ಇಂದು ವಿದ್ಯುತ್ ಶಕ್ತಿ ಕೊರತೆಯಿಂದ ಪಾರಾಗಲು ಸಾಧ್ಯವಾಗಿದೆ. ಅದೇ ದಿಕ್ಕಿನಲ್ಲಿ ಈಗಿನ ಸರ್ಕಾರವು ಸಹ ಒಂದು ಹೆಜ್ಜೆ ಮುಂದಿಟ್ಟು ಕುಸುಮ್ ಸಿ ಯೋಜನೆಯನ್ನು ರಾಜ್ಯಾದ್ಯಂತ ವ್ಯಾಪಕವಾಗಿ ಜಾರಿ ಮಾಡಿ ವಿಕೇಂದ್ರಿಕೃತ ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸುತ್ತಿದೆ. ಸ್ಥಳೀಯವಾಗಿ ವಿದ್ಯುತ್ತನ್ನು ಉತ್ಪಾದಿಸುವ ಮೂಲಕ ಪರಿಸರ ಸ್ನೇಹಿ ಕ್ರಮಕ್ಕೆ ಮುಂದಾಗಿದೆ. ಆ ಮೂಲಕ ಭವಿಷ್ಯದಲ್ಲಿ ಸಂಭವಿಸಬಹುದಾದ ವಿದ್ಯುತ್ ಶಕ್ತಿ ಕೊರತೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ಬದ್ಧತೆಯನ್ನು ಹೊಂದಿದೆ. ಆ ನಿಟ್ಟಿನಲ್ಲಿ ಕುಸುಮ್ ಸಿ ಯೋಜನೆಯು ಒಂದು ಐತಿಹಾಸಿಕ ಯೋಜನೆಯಾಗಿದ್ದು, ರೈತರಿಂದಲೂ ಸಹ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಪಾವಗಡ ತಾಲೂಕಿನಲ್ಲಿ ಈಗಾಗಲೇ 10,000 ಎಕರೆಯಲ್ಲಿ ಸೌರ ವಿದ್ಯುತ್ ಉತ್ಪಾದನೆ (ಸೋಲಾರ್ ಪಾರ್ಕ್) ಮಾಡಲಾಗುತ್ತಿದ್ದು, ಮತ್ತೆ 10,000 ಎಕರೆಯನ್ನು ಸೌರ ವಿದ್ಯುತ್ ಉತ್ಪಾದನೆಗಾಗಿ ನೀಡಲು ಮುಂದೆ ಬಂದಿರುವುದು ಆಶಾದಾಯಕ ಬೆಳವಣಿಗೆ ಎಂದು ರೈತರಿಗೆ ಧನ್ಯವಾದ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಮಾತನಾಡಿ, ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು 3 ರಿಂದ 4 ಎಕರೆ ಜಮೀನಿನಲ್ಲಿ ಪ್ಯಾನಲ್ ಅಳವಡಿಸಲು ಸುಮಾರು 4 ಕೋಟಿ ವೆಚ್ಚವನ್ನು ಅಂದಾಜು ಮಾಡಲಾಗುವುದು. ಈ ನಾಲ್ಕು ಕೋಟಿ ವೆಚ್ಚದಲ್ಲಿ 1 ಕೋಟಿ ಕೇಂದ್ರ ಸರ್ಕಾರ ಸಹಾಯಧನ ನೀಡಲಿದೆ. ಉಳಿದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಿ ವಿದ್ಯುತ್ ಅನ್ನು ಉತ್ಪಾದನೆ ಮಾಡಿ ಸ್ಥಳೀಯ ಗ್ರಿಡ್ ವಿದ್ಯುತ್ ಠಾಣೆಗಳಿಗೆ ಸರಬರಾಜು ಮಾಡಲಾಗುತ್ತದೆ. ಅಲ್ಲಿಂದ ರೈತರಿಗೆ ವಿದ್ಯುತ್ ನೀಡುವ ಮಹಾತ್ವಾಕಾಂಕ್ಷಿ ಯೋಜನೆಗೆ ಕುಸುಮ್-ಸಿ ಚಿಕ್ಕಬಳ್ಳಾಪುರ ಜಿಲ್ಲೆ ಸಾಕ್ಷಿ ಆಗಿದೆ ಎಂದರು.
ಒಟ್ಟಾರೆ ರೈತರಿಗೆ ವಾಡಿಕೆಯಾಗಿ 3000 ಮೆಗಾವ್ಯಾಟ್ ವಿದ್ಯುತ್ ಪೂರೈಸಲಾಗುತ್ತಿದೆ. ಜಿಲ್ಲೆಯಲ್ಲಿ ವಿವಿಧೆಡೆ ಒಟ್ಟು ಸೌರ ವಿದ್ಯುತ್ ಉತ್ಪಾದನೆಯ ಕುಸುಮ್ ಸಿ ಯೋಜನೆಗೆ 287 ಎಕರೆ ಜಮೀನನ್ನು ಮಂಜೂರು ಮಾಡಲಾಗಿದೆ. ಎಲ್ಲೆಡೆ ಕಾಮಗಾರಿಗಳು ತ್ವರಿತವಾಗಿ ಪ್ರಗತಿಯಾಗುತ್ತಿದೆ. ಇದಕ್ಕಾಗಿ ಇಂಧನ ಸಚಿವರಿಗೆ ಈ ಭಾಗದ ರೈತರ ಪರವಾಗಿ ಧನ್ಯವಾದ ತಿಳಿಸುತ್ತೇನೆ. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಸಹಕಾರ ನೀಡಿದ ರಾಜ್ಯ ಮಟ್ಟದ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಂದನೆಗಳನ್ನು ತಿಳಿಸುತ್ತೇನೆ. ಜಿಲ್ಲೆಯಲ್ಲಿ ಉತ್ತಮ ಕಾರ್ಯಕ್ರಮಗಳು ಅನುಷ್ಠಾನ ಆಗುತ್ತಿವೆ ಅದಕ್ಕೆ ಕುಸುಮ ಸಿ ಹೊಸ ಸೇರ್ಪಡೆ ಆಗಿದೆ. ರಾಜ್ಯ ಮಟ್ಟದ ಬೃಹತ್ ಯೋಜನೆಯೊಂದನ್ನು ಉದ್ಘಾಟಿಸಲು ಗೌರಿಬಿದನೂರನ್ನು ಆಯ್ಕೆ ಮಾಡಿಕೊಡಿದ್ದಕ್ಕಾಗಿ ಸಿಎಂ, ಡಿಸಿಎಂ ಮತ್ತು ಇಂಧನ ಸಚಿವರಿಗೆ ಜಿಲ್ಲೆಯ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ | Yettinahole Project: ಎತ್ತಿನಹೊಳೆ ಯೋಜನೆ ಇನ್ನೆರಡು ವರ್ಷದಲ್ಲಿ ಮುಗಿಯುತ್ತೆ: ಸಿಎಂ ಸಿದ್ದರಾಮಯ್ಯ
ಸ್ಥಳೀಯ ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಮಾಜಿ ಸ್ಪೀಕರ್ ಮತ್ತು ಎಚ್.ನರಸಿಂಹಯ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ, ಕ್ರೆಡಲ್ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್, ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿ, ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ಗ್ಯಾರಂಟಿ ಸಮಿತಿಯಗಳ ಜಿಲ್ಲಾಧ್ಯಕ್ಷ ಯಲುವಹಳ್ಳಿ ಎನ್.ರಮೇಶ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ. ಟಿ. ನಿಟ್ಟಳ್ಳಿ ಮತ್ತಿತರರು ಪಾಲ್ಗೊಂಡಿದ್ದರು.