ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದ ಬಿಜೆಪಿ; ಇಂದೇ ಹೊಸ ಪಕ್ಷದ ಘೋಷಣೆ ಮಾಡ್ತಾರಾ ಸಿಂಗಂ?
ತಮಿಳುನಾಡಿನ ರಾಜಕೀಯದಲ್ಲಿ ಬಿಜೆಪಿಗೆ ಹೊಸ ಭರವಸೆಯನ್ನು ಹುಟ್ಟು ಹಾಕಿದ್ದ ಕೆ ಅಣ್ಣಾಮಲೈ ಇಂದು ಅಧಿಕೃತವಾಗಿ ಪಕ್ಷದಿಂದ ಹೊರ ನಡೆದಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಅಣ್ಣಾಮಲೈ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.
ಸಂಗ್ರಹ ಚಿತ್ರ -
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಬಿಜೆಪಿಗೆ ಹೊಸ ಭರವಸೆಯನ್ನು ಹುಟ್ಟು ಹಾಕಿದ್ದ ಕೆ ಅಣ್ಣಾಮಲೈ (K Annamalai) ಇಂದು ಅಧಿಕೃತವಾಗಿ ಪಕ್ಷದಿಂದ ಹೊರ ನಡೆದಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಅಣ್ಣಾಮಲೈ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಆ ವೇಳೆ ಅವರು ರಾಜೀನಾಮೆ ನೀಡಿದ್ದಾದರೂ ಅಂಗೀಕಾರಗೊಂಡಿರಲಿಲ್ಲ.
ನಿತಿನ್ ನಬಿನ್ ಅವರು ತಮಿಳುನಾಡು ಮಾಜಿ ರಾಜ್ಯಾಧ್ಯಕ್ಷರಾದ ಶ್ರೀ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ" ಎಂದು ಬಿಜೆಪಿ ಇಂದು ಹೇಳಿಕೆಯಲ್ಲಿ ತಿಳಿಸಿದೆ. ತಮಿಳುನಾಡು ಬಿಜೆಪಿಯ ಮಾಜಿ ಮುಖ್ಯಸ್ಥ ಅಣ್ಣಾಮಲೈ ಅವರು ಮಧ್ಯಾಹ್ನ ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕರೊಂದಿಗೆ "ಮುಕ್ತ, ಹೃದಯಸ್ಪರ್ಶಿ ಸಂಭಾಷಣೆ" ನಡೆಸುವ ಕೆಲವೇ ಗಂಟೆಗಳ ಮೊದಲು ಈ ಬೆಳವಣಿಗೆ ನಡೆದಿದೆ.
ಅಮಿತ್ ಶಾ ಅವರೊಂದಿಗಿನ ಭೇಟಿಯ ಸಮಯದಲ್ಲಿ, ಅಣ್ಣಾಮಲೈ 2025 ರಲ್ಲಿ ತಮಿಳುನಾಡು ಘಟಕದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲ್ಪಟ್ಟ ನಂತರ ಎಐಎಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ರಾಜ್ಯ ಘಟಕದ ನಾಯಕತ್ವದೊಂದಿಗಿನ ತಮ್ಮ ದೀರ್ಘಕಾಲದ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ತಮ್ಮ ಮುಂದಿನ ರಾಜಕೀಯ ನಡೆಯ ಕುರಿತು ಬೆಂಬಲಿಗರು ಮತ್ತು ಸಾರ್ವಜನಿಕರೊಂದಿಗೆ ಮುಕ್ತವಾಗಿ ಸಂವಹನ ನಡೆಸಲು ಸಜ್ಜಾಗಿದ್ದಾರೆ. ಇದೇವೇಳೆ ಜೂನ್ 5, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಅವರು ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಅವರು ಲೈವ್ ಬರಲಿದ್ದಾರೆ.
ಸಿಎಂ ಜೋಸೆಫ್ ವಿಜಯ್ ಮಾದರಿಯಲ್ಲೇ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಉದ್ದೇಶವನ್ನು ಅಣ್ಣಾಮಲೈ ಹೊಂದಿದ್ದಾರೆ ಎನ್ನಲಾಗಿದೆ. ಇತ್ತೀಚಿನ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕವೇ ಅವರು ಬಿಜೆಪಿ ತೊರೆಯುವ ಅಂತಿಮ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದ್ದು, ಆರಂಭದಲ್ಲಿ ಜನಾಂದೋಲನ ರೂಪಿಸಲು ಹೊಸ ರಾಜಕೀಯೇತರ ಚಳವಳಿ ಅಥವಾ ಸಂಘಟನೆಯನ್ನು ಸ್ಥಾಪಿಸಲಿದ್ದಾರೆ.