Road Accident: ಬೆಂಗಳೂರು ಬಳಿ ಸಾರಿಗೆ ಬಸ್- ಲಾರಿ ಅಪಘಾತ, ನಾಲ್ವರ ಸಾವು
Road Accident: ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ ಓವರ್ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿದೆ.


ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ (Bengaluru rural) ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಧ್ರ ಸಾರಿಗೆ ಬಸ್ (APSRTC Bus) ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಂಧ್ರ ಸಾರಿಗೆ ಬಸ್ಸಿನಲ್ಲಿದ್ದ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಸಾವಿಗೀಡಾಗಿದ್ದಾರೆ. ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ ಓವರ್ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ, ಇಬ್ಬರ ಸಾವು
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ (Bengaluru Mysuru Expressway) ಸೋಮವಾರ ಭೀಕರ ಅಪಘಾತ (Road Accident) ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ (Road divider) ಡಿಕ್ಕಿಯಾಗಿ ಮತ್ತೊಂದು ಬದಿಯಲ್ಲಿ ಸಾಗುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ವೇಳೆ ತೀವ್ರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಎಂಬವರು ಮೃತಪಟ್ಟಿದ್ದಾರೆ. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಎಂಬವರು ಗಂಭೀರ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಇದನ್ನೂ ಓದಿ: ಮಗನಿಗೆ ಮಚ್ಚಿನೇಟು: ತಾಯಿ ಹೃದಯಾಘಾತದಿಂದ ಸಾವು