Kichcha Sudeepa: ಸೆಪ್ಟೆಂಬರ್ 1ರ ರಾತ್ರಿ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ ಸುದೀಪ್
ಸೆಪ್ಟೆಂಬರ್ 1ರ ಮಧ್ಯರಾತ್ರಿಯೇ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಲು ಕಿಚ್ಚ ಸುದೀಪ್ ನಿರ್ಧರಿಸಿದ್ದಾರೆ. ಈ ಬಗ್ಗೆ ಪತ್ರ ಬರೆದಿದ್ದಾರೆ. ಎಲ್ಲಿ, ಹೇಗೆ? ಎನ್ನುವುದನ್ನು ಸದ್ಯದಲ್ಲೇ ಅವರು ತಿಳಿಸಲಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಭರ್ಜರಿ ಗುಡ್ನ್ಯೂಸ್ ನೀಡಿದ್ದಾರೆ.


ಬೆಂಗಳೂರು: ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeepa) ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಅಭಿಮಾನಿಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ. ಸೆಪ್ಟೆಂಬರ್ 1ರ ಮಧ್ಯರಾತ್ರಿಯೇ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸುವುದಾಗಿ ತಿಳಿಸಿದ್ದಾರೆ. ಅದಾಗ್ಯೂ, ಮನೆ ಬಳಿ ಬರದಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಸುದೀಪ್ ಅವರಿಗೆ ಅಮ್ಮನಿಲ್ಲದ ಮೊದಲ ಹುಟ್ಟುಹಬ್ಬ ಇದಾಗಿದ್ದು, ಈ ನೋವಿನಲ್ಲೂ ಅಭಿಮಾನಿಗಳ ಜತೆಗೆ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಎಲ್ಲಿ, ಹೇಗೆ? ಎನ್ನುವುದನ್ನು ಸದ್ಯದಲ್ಲೇ ಅವರು ತಿಳಿಸಲಿದ್ದಾರೆ.
ತಮ್ಮ ಹುಟ್ಟುಹಬ್ಬ ಆಚರಣೆ ಬಗ್ಗೆ ಸುದೀಪ್ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ‘ʼಸೆಪ್ಟೆಂಬರ್ 2ರ ಬೆಳಗಿನಲ್ಲಿ ಅಲ್ಲ ಸೆಪ್ಟೆಂಬರ್ ಒಂದರ ರಾತ್ರಿಯೇ ಸಿಗೋಣವಾ? ಸೆಪ್ಟೆಂಬರ್ 2ರಂದು ನೀವು ನನ್ನನ್ನು ಭೇಟಿ ಮಾಡುವುದಕ್ಕಾಗಿ ಎಷ್ಟು ಕಾಯುವಿರೋ ಅದಕ್ಕಿಂತ ಹೆಚ್ಚಾಗಿ ನಾನು ನಿಮಗಾಗಿ ಕಾಯುತ್ತೇನೆʼʼ ಎಂದಿದ್ದಾರೆ.
To all my dearest Frnzzz,,,
— Kichcha Sudeepa (@KicchaSudeep) August 25, 2025
Saw many videos posted about
the excitement shown to celebrate 2nd Sept.
Big big thanks for this unconditional luv.
Mch luv and Hugs
❤️🤗 pic.twitter.com/Q3fP0otsxQ
ಈ ಸುದ್ದಿಯನ್ನೂ ಓದಿ: Kichcha Sudeepa: ʼಮುಸ್ಸಂಜೆ ಮಾತುʼ ಚಿತ್ರ ರಿಲೀಸ್ ಆಗಿ 17 ವರ್ಷ; ಅಮ್ಮನನ್ನು ಸುದೀಪ್ ನೆನೆದು ಭಾವುಕ
ಸುದೀಪ್ ಪತ್ರದಲ್ಲಿ ಏನಿದೆ?
ʼʼಆ ದಿನ ನೀವು ಪಡುವ ಸಂಭ್ರಮ, ಆಚರಿಸುವ ವಿಡಿಯೊಗಳನ್ನು ನೋಡಿದಾಗ ಪ್ರತಿಸಲವೂ ನನಗೆ ಮರುಹುಟ್ಟು ಪಡೆದಂತಾಗುತ್ತದೆ. ನಿಸ್ಸಂದೇಹವಾಗಿ ನನ್ನ ಬದುಕಿಗೆ ಮೌಲ್ಯ ತುಂಬಿದವರು ನೀವು. ನಿಮ್ಮೆದರು ನಿಂತು ವಿನೀತನಾಗುವುದಕ್ಕಿಂತ ಖುಷಿ ಏನಿದೆ? ಆದ್ದರಿಂದಲೇ ದಶಕಗಳಿಂದ ನಿಮ್ಮನ್ನು ಮನೆಯ ಹತ್ತಿರ ಭೇಟಿಮಾಡುತ್ತಲೇ ನಾನೂ ಸಂಭ್ರಮಸಿದ್ದೇನೆ. ಆದರೆ ಈ ಸಲ ತುಂಬ ಕಷ್ಟವಾಗುತ್ತಿದೆ. ಏಕೆಂದರೆ ಅಮ್ಮನಿಲ್ಲದ ಮೊದಲ ವರ್ಷವಿದು. ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ’ʼ ಎಂದು ಭಾವುಕರಾಗಿ ಪತ್ರ ಆರಂಭಿಸಿದ್ದಾರೆ.
‘ʼಆದರೆ ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ! ನಿಮ್ಮ ಮೂಲಕವೇ ನನ್ನ ಹುಟ್ಟುಹಬ್ಬ ಹುಟ್ಟಬೇಕು. ಗಡಿಯಾರ ಹನ್ನೆರಡು ಗಂಟೆ ಎಂದು ಸದ್ದುಮಾಡುವಾಗ ನನಗೆ ನಿಮ್ಮ ಶುಭಾಶಯಗ ಕಿವಿಗೆ ಕೇಳಬೇಕು. ಅವುಗಳೇ ಎದೆಗೆ ಇಳಿಯಬೇಕು. ಆದ್ದರಿಂದ ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ. ಎಲ್ಲಿ, ಹೇಗೆ? ಅನ್ನೋದನ್ನು ತಿಳಿಸುತ್ತೇನೆʼʼ ಎಂದು ಹೇಳಿದ್ದಾರೆ.
ʼʼಸೆಪ್ಟೆಂಬರ್ 2ರಂದು ದಯವಿಟ್ಟು ಯಾರೂ ಮನೆ ಹತ್ತಿರ ಬರಬೇಡಿ. ನಾನು ಆ ದಿನ ಮನೆಯಲ್ಲಿ ಇರುವುದಿಲ್ಲ. ನಾನಿರುವುದಿಲ್ಲವೆಂದು ಹೇಳಿ ಮೇಲೂ ನೀವು ಮನೆ ಬಳಿ ಬಂದು ಕಾದರೆ ನಿನ್ನ ಮನಸಿಗೆ ನೋವಾಗುತ್ತದೆ. ಜತೆಗೆ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ. ನನಗೆ ನಂಬಿಕೆ ಇದೆ; ನೀವು ನನ್ನನ್ನು ಅರ್ಥ ಮಾಡಿಕೊಳ್ಳುವಿರೆಂದು ಮತ್ತು ನಿರಾಸೆಗೊಳಿಸುವುದಿಲ್ಲವೆಂದು. ಅದು ಬಿಟ್ಟರೆ ಪ್ರತಿವರ್ಷದಂತೆ ಈ ಸಲವೂ ಸಾಮಾಜಿಕ ಸೇವಾ ಕಾರ್ಯಗಳು ಯಥಾಪ್ರಕಾರ ನಡೆಯಲಿವೆ. ನಿಮ್ಮ ಹಾರೈಕೆ, ಅಭಿಮಾನ ಮತ್ತು ಸಾಂಗತ್ಯವೇ ನನ್ನ ಬಹುದೊಡ್ಡ ಆಸ್ತಿʼʼ ಎಂದು ಸುದೀಪ್ ಪತ್ರ ಬರೆದಿದ್ದಾರೆ.
ಸದ್ಯ ಸುದೀಪ್ ಬಿಗ್ ಬಾಸ್ ಕನ್ನಡ ಸೀಸನ್ 12ರ ನಿರೂಪಣೆಯ ಜವಾಬ್ದಾರಿ ಹೊತ್ತುಕೊಂಡಿದ್ದು, 2 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ಬಿಲ್ಲ ರಂಗ ಭಾಷಾ ಮತ್ತು ವಿಜಯ್ ಕಾರ್ತಿಕೇಯ ಆಕ್ಷನ್ ಕಟ್ ಹೇಳುತ್ತಿರುವ ಮುಂದಿನ ಸಿನಿಮಾದಲ್ಲಿ ಅಬಿನಯಿಸುತ್ತಿದ್ದಾರೆ.