Landslide: ಜಮ್ಮು-ಕಾಶ್ಮೀರದಲ್ಲಿ ಭಾರೀ ಭೂ ಕುಸಿತ; ಸಾವಿನ ಸಂಖ್ಯೆ 30ಕ್ಕೆ ಏರಿಕೆ
Vaishno Devi Landslide: ವೈಷ್ಣೋದೇವಿ ಮಾರ್ಗದ ಅರ್ಧಕುವರಿಯ ಇಂದ್ರಪ್ರಸ್ಥ ಭೋಜನಾಲಯದ ಬಳಿ ಭೂಕುಸಿತ ಸಂಭವಿಸಿದ್ದು, (Vaishno Devi Landslide)ಸಾವಿನ ಸಂಖ್ಯೆ 30ಕ್ಕೆ ಏರಿಕೆ ಆಗಿದೆ. ಇನ್ನು ಈ ದುರ್ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
-
Rakshita Karkera
Aug 27, 2025 12:47 PM
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಹಲವೆಡೆ ಭಾರಿ ಮಳೆಯಾಗುತ್ತಿದ್ದು, ವೈಷ್ಣೋದೇವಿ ಮಾರ್ಗದ ಅರ್ಧಕುವರಿಯ ಇಂದ್ರಪ್ರಸ್ಥ ಭೋಜನಾಲಯದ ಬಳಿ ಭೂಕುಸಿತ ಸಂಭವಿಸಿದ್ದು, (Vaishno Devi Landslide)ಸಾವಿನ ಸಂಖ್ಯೆ 30ಕ್ಕೆ ಏರಿಕೆ ಆಗಿದೆ. ಇನ್ನು ಈ ದುರ್ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತದೇಹಗಳನ್ನು ಕತ್ರಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಕನಿಷ್ಠ 6 ಯಾತ್ರಿಕರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಇದಕ್ಕಾಗಿ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿಯು ಕೈ ಜೋಡಿಸಿದೆ.
ವೈಷ್ಣೋದೇವಿ ಯಾತ್ರೆ ಸ್ಥಗಿತ
ಈ ಪ್ರದೇಶದಲ್ಲಿ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ವೈಷ್ಣೋದೇವಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ದೇವಾಲಯ ಮಂಡಳಿ ತಿಳಿಸಿದೆ. ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವುದರಿಂದ ಜಮ್ಮುವಿನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಎಚ್ಚರಿಕೆ ನೀಡಲಾಗಿದೆ. ದೇವಾಲಯ ಮಂಡಳಿಯ ಮೂಲಕ ನೀಡಲಾದ ಎಚ್ಚರಿಕೆಯನ್ನು ಪಾಲಿಸುವಂತೆ ಅಧಿಕಾರಿಗಳು ಯಾತ್ರಿಕರಿಗೆ ಸೂಚಿಸಿದ್ದಾರೆ.
ರೆಡ್ ಅಲರ್ಟ್ ಘೋಷಣೆ
ಭಾರತೀಯ ಹವಾಮಾನ ಇಲಾಖೆ (IMD) ಜಮ್ಮು ಮತ್ತು ಕಾಶ್ಮೀರದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಗುಡುಗು ಸಹಿತ ಮತ್ತಷ್ಟು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಲ ಜನರು ಅತೀವ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಚೆನಾಬ್ ನದಿ ಅಪಾಯದ ಮಟ್ಟಮೀರಿ ಹರಿಯುತ್ತಿದ್ದು, ದುರ್ಬಲ ಪ್ರದೇಶಗಳಲ್ಲಿ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ (SDRF) ತಂಡಗಳನ್ನು ನಿಯೋಜಿಸಲಾಗಿದೆ.