ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಫಾಸ್ಟ್-ಟ್ರ್ಯಾಕ್ ಕೋರ್ಟ್ ಸಾಕಾಗದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲಿ: ಸಿಜೆಪಿ ಕಠಿಣ ನಿಲುವು
CJP: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ ಇದನ್ನು ಮೂಲ ಸಮಸ್ಯೆಗೆ ಪರಿಹಾರವಲ್ಲ ಎಂದು ಟೀಕಿಸಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸುರಕ್ಷಿತ ಪರೀಕ್ಷಾ ವ್ಯವಸ್ಥೆ ನಿರ್ಮಿಸುವಲ್ಲಿ ವಿಫಲರಾಗಿದ್ದು, ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ವಿದ್ಯಾರ್ಥಿಗಳಿಗೆ ನಿಜವಾದ ನ್ಯಾಯ ಸಿಗಬೇಕಾದರೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವ್ಯವಸ್ಥಾತ್ಮಕ ದೋಷಗಳನ್ನು ಸರಿಪಡಿಸಬೇಕು ಎಂದು ಪಕ್ಷ ಒತ್ತಾಯಿಸಿದೆ.
ನರೇಂದ್ರ ಮೋದಿ ಮತ್ತು ಸಿಜೆಪಿ ಪ್ರತಿಭಟನೆ -
ನವದೆಹಲಿ, ಜು. 23: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವುದನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ತೀವ್ರವಾಗಿ ಟೀಕಿಸಿದೆ. ಇದು ಮೂಲ ಸಮಸ್ಯೆಯನ್ನು ಬಗೆಹರಿಸದೆ ಕೇವಲ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಎಂದು ಆರೋಪಿಸಿರುವ ಸಿಜೆಪಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.
ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ನಲ್ಲಿ, "ಯುವಕರ ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ ನೀಡಲು ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ. ಯುವಕರ ಭವಿಷ್ಯ ಹಾಳು ಮಾಡಲು ಯತ್ನಿಸುವವರನ್ನು ಬಿಡುವುದಿಲ್ಲ" ಎಂದು ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಪಿ, "ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು" ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಪಕ್ಷದ ನಾಯಕ ಅಭಿಜಿತ್ ದೀಪ್ಕೆ, ಧರ್ಮೇಂದ್ರ ಪ್ರಧಾನ್ ಅವರ ಚಿತ್ರದೊಂದಿಗೆ Hi, I am nothing ಎಂಬ ವ್ಯಂಗ್ಯ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಸಿಜೆಪಿ ಎಕ್ಸ್ ಪೋಸ್ಟ್:
Dharmendra Pradhan Must Resign
— Cockroach is Back (@Cockroachisback) July 23, 2026
धर्मेंद्र प्रधान को इस्तीफ़ा देना होगा https://t.co/0XShqJ6FVG
ಸಿಜೆಪಿ ವಕ್ತಾರ ಆಶುತೋಷ್ ರಾಂಕಾ ಮಾತನಾಡಿ, "ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳು ನಿಜವಾದ ಪರಿಹಾರವಲ್ಲ. ಇದು ಕೇವಲ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ. ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಪ್ರಧಾನಿ ಕ್ರೂರ ಹಾಸ್ಯ ಮಾಡುತ್ತಿದ್ದಾರೆ" ಎಂದು ಆರೋಪಿಸಿದರು.
ನೀಟ್ ಹಗರಣಕ್ಕೆ ಕಾಂಗ್ರೆಸ್ ಆಕ್ರೋಶ: ವಿದ್ಯಾರ್ಥಿಗಳ ಭವಿಷ್ಯ ರಕ್ಷಣೆಗೆ ಹೋರಾಟ ಮುಂದುವರಿಕೆ
ʼʼಪ್ರಶ್ನೆಪತ್ರಿಕೆ ಸೋರಿಕೆಗಳು ನ್ಯಾಯಾಲಯಗಳ ಕೊರತೆಯಿಂದ ಆಗುತ್ತಿಲ್ಲ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸುರಕ್ಷಿತ ಮತ್ತು ದೋಷರಹಿತ ಪರೀಕ್ಷಾ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ವಿದ್ಯಾರ್ಥಿಗಳು ಈಗ ಹೊಣೆಗಾರಿಕೆಯನ್ನು ಕೇಳುತ್ತಿದ್ದಾರೆʼʼ ಎಂದು ಅವರು ಹೇಳಿದರು.
ನರೇಂದ್ರ ಮೋದಿ ಅವರ ಪೋಸ್ಟ್:
Nothing is more important than the welfare and future of our youth!
— Narendra Modi (@narendramodi) July 23, 2026
We have decided to set up fast-track courts to ensure swift and stringent punishment for those involved in paper leaks. Have directed the concerned authorities and officials to take all necessary steps in this…
"ಮುರಿದ ಎಲುಬಿಗೆ ಬ್ಯಾಂಡ್ಯೇಜ್ ಅಂಟಿಸಿದಂತಾಗಿದೆ ಈ ಕ್ರಮ. ಪರೀಕ್ಷಾ ವ್ಯವಸ್ಥೆಯಲ್ಲಿರುವ ಮೂಲಭೂತ ದೋಷಗಳನ್ನು ಸರಿಪಡಿಸದಿದ್ದರೆ ಪ್ರಶ್ನೆಪತ್ರಿಕೆ ಸೋರಿಕೆಗಳು ಮುಂದುವರಿಯುತ್ತವೆ" ಎಂದು ರಾಂಕಾ ಅಭಿಪ್ರಾಯಪಟ್ಟರು.
ಇದರ ನಡುವೆ, ದೆಹಲಿಯ ಜಂತರ್-ಮಂತರ್ ಸೇರಿ ವಿವಿಧ ಪ್ರದೇಶಗಳಲ್ಲಿ ಸಿಜೆಪಿ ನೇತೃತ್ವದಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಶಿಕ್ಷಣ ಸಚಿವರ ರಾಜೀನಾಮೆ, ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ರುಪಾಯಿ ಪರಿಹಾರ ನೀಡುವುದು ಹಾಗೂ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳವುದು ಸೇರಿ ವಿವಿಧ ಎಂಬ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.