ಸಿಜೆಪಿಯಿಂದ ಮತ್ತೆ ಪ್ರತಿಭಟನೆಯ ಬೆದರಿಕೆ: ದೆಹಲಿಯ ಜಂತರ್ ಮಂತರ್ನಲ್ಲಿ ಭಾರಿ ಭದ್ರತೆ
CJP threatens another protest: ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್ಐಆರ್ಗಳನ್ನು ಹಿಂಪಡೆಯದಿದ್ದರೆ ತನ್ನ ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹೊಸ ಎಚ್ಚರಿಕೆ ನೀಡಿದ ನಂತರ, ದೆಹಲಿ ಪೊಲೀಸರು ಜಂತರ್ ಮಂತರ್ನಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸಿಜೆಪಿಯಿಂದ ಮತ್ತೆ ಪ್ರತಿಭಟನೆಯ ಬೆದರಿಕೆ -
ನವದೆಹಲಿ, ಜು.30: ರಾಷ್ಟ್ರ ರಾಜಧಾನಿ ದೆಹಲಿಯ (Delhi) ಜಂತರ್ ಮಂತರ್ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್ಐಆರ್ಗಳನ್ನು ಹಿಂಪಡೆಯದಿದ್ದರೆ ತನ್ನ ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (Cockroach Janta Party) ಹೊಸ ಎಚ್ಚರಿಕೆ ನೀಡಿದ ನಂತರ, ದೆಹಲಿ ಪೊಲೀಸರು ಜಂತರ್ ಮಂತರ್ನಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಲೋಹದ ಬ್ಯಾರಿಕೇಡ್ಗಳನ್ನು ಹಾಕುವ ಮೂಲಕ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಯನ್ನು ಕೇಂದ್ರವು ಉಲ್ಲಂಘಿಸಿದೆ ಎಂದು ಸಿಜೆಪಿ ಆರೋಪಿಸಿದ ಕೆಲವು ದಿನಗಳ ನಂತರ ಹಾಗೂ ಮತ್ತೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಬೆದರಿಕೆ ಹಾಕಿದ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಜಂತರ್ ಮಂತರ್ನಲ್ಲಿ ಸಿಜೆಪಿ 36 ದಿನಗಳ ಕಾಲ ನಡೆಸಿದ ಪ್ರತಿಭಟನೆಯಲ್ಲಿ, ಪ್ರತಿಭಟನಾಕಾರರು ನಿಗದಿಪಡಿಸಿದ ಸ್ಥಳದ ಗಡಿ ದಾಟದಂತೆ ಅಥವಾ ಭವಿಷ್ಯದಲ್ಲಿ ನಡೆಯುವ ಯಾವುದೇ ಪ್ರತಿಭಟನೆ ವೇಳೆ ಬ್ಯಾರಿಕೇಡ್ಗಳನ್ನು ತೆರವುಗೊಳಿಸದಂತೆ ತಡೆಯಲು, ಸ್ಥಳದ ಎರಡೂ ಬದಿಗಳಲ್ಲಿದ್ದ ಬ್ಯಾರಿಕೇಡ್ಗಳನ್ನು ಕಬ್ಬಿಣದಿಂದ ವೆಲ್ಡಿಂಗ್ ಮಾಡಿ ಜೋಡಿಸಿರುವುದು ಕಂಡುಬಂದಿದೆ.
ಜಂತರ್ ಮಂತರ್ನಲ್ಲಿಯೂ ಭಾರಿ ಭದ್ರತಾ ನಿಯೋಜನೆ ಮುಂದುವರೆದಿದ್ದು, ದೆಹಲಿ ಪೊಲೀಸರು, ಅರೆಸೈನಿಕ ಪಡೆಗಳು ಮತ್ತು ಇತರ ಭದ್ರತಾ ಸಂಸ್ಥೆಗಳ ಸಿಬ್ಬಂದಿ ಸ್ಥಳದಾದ್ಯಂತ ಬೀಡುಬಿಟ್ಟಿದ್ದಾರೆ. ಮಂಗಳವಾರದಂದು (ಜು.28), ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಸಿಜೆಪಿ ಎಚ್ಚರಿಸಿತ್ತು. ಜುಲೈ 25 ರಂದು ನಡೆದ ಪ್ರತಿಭಟನೆಯ ನಂತರ ಮಾಡಿಕೊಂಡ ಒಪ್ಪಂದವನ್ನು ಕೇಂದ್ರವು ಉಲ್ಲಂಘಿಸಿ ಪ್ರತಿಭಟನಾಕಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಮುಂದುವರೆಸಲು ಅವಕಾಶ ನೀಡಿದೆ ಎಂದು ಆರೋಪಿಸಿತ್ತು.
ಸರ್ಕಾರವು ಒಪ್ಪಂದದ ಸಂಪೂರ್ಣ ಉಲ್ಲಂಘನೆ ಮಾಡಿದೆ ಎಂದು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ ಆರೋಪಿಸಿದರು. ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಎಲ್ಲಾ ಎಫ್ಐಆರ್ಗಳನ್ನು ತಕ್ಷಣ ಹಿಂಪಡೆಯಬೇಕು, ಬಂಧಿತ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡಬೇಕು, ದೆಹಲಿ ಪೊಲೀಸರು, ಕೇಂದ್ರ ಸಂಸ್ಥೆಗಳು ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪೊಲೀಸರು ಹೊಸ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವುದನ್ನು ನಿಲ್ಲಿಸಬೇಕು ಮತ್ತು ಸಹಿ ಮಾಡಿದ ಒಪ್ಪಂದವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು ಎಂದು ರಾಂಕಾ ಒತ್ತಾಯಿಸಿದರು. ಸಿಜೆಪಿಯಿಂದ ಮತ್ತೊಂದು ಆಂದೋಲನ ಪ್ರಾರಂಭವಾಗಲಿ ಎಂದು ಸರ್ಕಾರ ಬಯಸುತ್ತಿರಬಹುದು ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದರು.
ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜುಲೈ 25 ರಂದು ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತ್ತು.