Manipur Violence: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ
ಕೆಲವು ದಿನಗಳಿಂದ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಸಂಘರ್ಷ ಭುಗಿಲೆದ್ದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮೈಥಿ ಸಮುದಾಯದ ನಾಯಕನನ್ನು ಬಂಧಿಸಿದ ಬಳಿಕ ಅನೇಕ ಪ್ರದೇಶಗಳಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ 5 ದಿನಗಳವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಸಾಂದರ್ಭಿಕ ಚಿತ್ರ.

ಇಂಫಾಲ: ಕೆಲವು ದಿನಗಳಿಂದ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಸಂಘರ್ಷ ಭುಗಿಲೆದ್ದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ (Manipur Violence). ಮೈಥಿ (Meitei) ಸಮುದಾಯದ ನಾಯಕನನ್ನು ಬಂಧಿಸಿದ ಬಳಿಕ ಅನೇಕ ಪ್ರದೇಶಗಳಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಹಲವೆಡೆ 5 ದಿನಗಳವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಕರ್ಫ್ಯೂ ವಿಧಿಸಲಾಗಿದೆ.
ಮಣಿಪುರದಲ್ಲಿ ಶನಿವಾರ (ಜೂ. 7) ರಾತ್ರಿ 11.45ರಿಂದ 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್, ವಿಷ್ಣುಪುರ ಮತ್ತು ಕಾಕ್ಚಿಂಗ್ನಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Manipur | In view of the prevailing law and order situation, internet and mobile data services, including VSAT and VPN, have been suspended in Imphal West, Imphal East, Thoubal, Kakching and Bishnupur districts of Manipur for 5 days with effect from 11.45 PM, June 7 pic.twitter.com/L95SoHjXOf
— ANI (@ANI) June 8, 2025
ಈ ಸುದ್ದಿಯನ್ನೂ ಓದಿ: Manipur Police: ಮಣಿಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; ಕೆಸಿಪಿ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಶನಿವಾರ ಸಂಜೆ ಇಂಫಾಲ್ನ ಕ್ವಾಕಿಥೆಲ್ ಪ್ರದೇಶದಿಂದ ಅರಾಂಬೈ ಟೆಂಗೋಲ್ ಸಂಘಟನೆಯ ನಾಯಕನನ್ನು ಬಂಧಿಸಲಾಗಿದೆ ಎಂದು ವರದಿ ಬಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಇಂಫಾಲ ಪಶ್ಚಿಮ ಜಿಲ್ಲೆಯ ಉರಿಪೋಕ್, ಟಿಡ್ಡಿಮ್ ರಸ್ತೆ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರು ಟೈರ್ಗಳಿಗೆ ಬೆಂಕಿ ಹಚ್ಚಿ, ರಸ್ತೆಗಳನ್ನು ತಡೆದು, ಬಂಧಿತ ನಾಯಕನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ಜತೆಗೆ ಕ್ವಾಕಿಥೆಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆಗಳು ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
"ಕೆಲವು ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ದ್ವೇಷ ಭಾಷಣ ಮತ್ತು ದ್ವೇಷದ ಕಿಡಿ ಹೊತ್ತಿಸುವ ವಿಡಿಯೊ ಸಂದೇಶಗಳ ಮೂಲಕ ಸಾರ್ವಜನಿಕರ ಭಾವನೆಗಳನ್ನು ಕೆರಳಿಸಬಹುದು. ಇದು ಮಣಿಪುರದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರಬಹುದು" ಎಂದು ಇಂಟರ್ನೆಟ್ ಸ್ಥಗಿತಗೊಳಿಸಿದ್ದಕ್ಕೆ ರಾಜ್ಯ ಸರ್ಕಾರ ಕಾರಣ ನೀಡಿದೆ.
ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಈ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ಸಾರ್ವಜನಿಕ ನೆಮ್ಮದಿಗೆ ಭಂಗ, ಗಲಭೆ ಮತ್ತು ಸಮಾಜ ವಿರೋಧಿ ಶಕ್ತಿಗಳ ಕಾನೂನುಬಾಹಿರ ಚಟುವಟಿಕೆಗಳನ್ನು ಉಲ್ಲೇಖಿಸಿ ಬಿಎನ್ಎಸ್ನ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. ಜೂ. 7ರ ರಾತ್ರಿ 11 ಗಂಟೆಯಿಂದ ಜಾರಿಗೆ ಬರುವಂತೆ ಬಿಷ್ಣುಪುರ ಜಿಲ್ಲೆಯಲ್ಲಿ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ.
ಮಣಿಪುರದಲ್ಲಿ 2023ರ ಮೇಯಲ್ಲಿ ಆರಂಭವಾದ ಹಿಂಸಾಚಾರವು 250ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಪರಿಶಿಷ್ಟ ಪಂಗಡದ (ST) ಸ್ಥಾನಮಾನಕ್ಕಾಗಿ ಮೈಥಿ ಸಮುದಾಯ ಬೇಡಿಕೆ ಮುಂದಿಟ್ಟ ಬಳಿಕ ಬುಡಕಟ್ಟು ಸಮುದಾಯ ಕುಕಿಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಹಿಂಸಾಚಾರ ಭುಗಿಲೆದ್ದಿತ್ತು. ಮಣಿಪುರದ ಜನಸಂಖ್ಯೆಯ ಶೇ. 53ರಷ್ಟಿರುವ ಮೈಥಿ ಸಮುದಾಯದವರು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಆದಿವಾಸಿಗಳು ಮಣಿಪುರ ಜನಸಂಖ್ಯೆಯ ಶೇ. 40ರಷ್ಟಿದ್ದಾರೆ ಮತ್ತು ಮುಖ್ಯವಾಗಿ ಬೆಟ್ಟಗಳಲ್ಲಿ ವಾಸಿಸುತ್ತಿದ್ದಾರೆ. ಕೆಲವು ದಿನಗಳಿಂದ ಶಾಂತವಾಗಿದ್ದ ಕಣಿವೆ ರಾಜ್ಯದಲ್ಲಿ ಮತ್ತೆ ಸಂಘರ್ಷ ಕಾಣಿಸಿಕೊಂಡಿದೆ.
ಬೂದಿ ಮುಚ್ಚಿದ ಕೆಂಡದಂತಿರುವ ಮಣಿಪುರದಲ್ಲಿ ಫೆ. 9ರಂದು ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ (Biren Singh) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.