ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಸರ್ಕಾರದಿಂದ ಕಠಿಣ ಕ್ರಮ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ರಾಜಕೀಯ ಪ್ರೇರಿತ ಎಂದ ಕೇಂದ್ರ
Dharmendra Pradhan: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಕಠಿಣ ಕ್ರಮ ಕೈಗೊಂಡಿದ್ದು, ಸಿಬಿಐ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆಯನ್ನು ರಾಜಕೀಯ ಪ್ರೇರಿತ ಎಂದು ಸರ್ಕಾರ ಹೇಳಿದ್ದು, ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧವಿರುವುದಾಗಿ ಸ್ಪಷ್ಟಪಡಿಸಿದೆ.
ಸಾಂದರ್ಭಿಕ ಚಿತ್ರ -
ನವದೆಹಲಿ, ಜು. 22: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗಳ ವಿರುದ್ಧ ನಡೆದ ಕ್ರಮವನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸುತ್ತಿರುವ ನಡುವೆಯೇ ಕೇಂದ್ರ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ. ಸರ್ಕಾರದ ಮೂಲಗಳ ಪ್ರಕಾರ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರ ಬೆಳಕಿಗೆ ಬಂದ ತಕ್ಷಣವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆಗಾರಿಕೆ ಹೊತ್ತು ಹಲವು ತಿದ್ದುಪಡಿ ಕ್ರಮ ಆರಂಭಿಸಿದ್ದರು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಲಾಗಿದ್ದು, ಇದುವರೆಗೆ 13ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿರುವುದನ್ನು ಸರ್ಕಾರದ ಮೂಲಗಳು ʼರಾಜಕೀಯ ಪ್ರೇರಿತ ಬೇಡಿಕೆʼ ಎಂದು ಟೀಕಿಸಿವೆ.
ಪ್ರಶ್ನೆಪತ್ರಿಕೆ ಸೋರಿಕೆ ಘೋರ ಪಾಪ: ಪ್ರಧಾನಿ ಮೋದಿ
ನೀಟ್ ಅಕ್ರಮಗಳ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರಶ್ನೆಪತ್ರಿಕೆ ಸೋರಿಕೆಯನ್ನು ಘೋರ ಪಾಪ ಎಂದು ಬಣ್ಣಿಸಿದರು. ಯುವ ಜನರ ಭವಿಷ್ಯದೊಂದಿಗೆ ಆಟವಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಈ ವಿಷಯವು ರಾಜಕೀಯದ ವಿಚಾರವಲ್ಲ, ರಾಷ್ಟ್ರದ ಹಿತಾಸಕ್ತಿಯ ವಿಷಯ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದು, ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು ಎಂದು ಪ್ರಧಾನಿ ಸೂಚಿಸಿದ್ದು, ಯುವಕರ ವಿಶ್ವಾಸವನ್ನು ಗಳಿಸುವುದು ಅತ್ಯಂತ ಮುಖ್ಯ ಎಂದು ಎನ್ಡಿಎ ಸಂಸದರಿಗೆ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.
ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಉತ್ತರ ಪತ್ರಿಕೆಯ ಫೋಟೊ ಅಸಲಿಯೆ? ಎನ್ಟಿಎ ಹೇಳಿದ್ದೇನು?
ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಸಿದ್ಧ
ನೀಟ್ ವಿವಾದದ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವಿರೋಧ ಪಕ್ಷಗಳ ಬೇಡಿಕೆಯಂತೆ ಈ ವಿಷಯದ ಕುರಿತು ವಿವರವಾದ ಚರ್ಚೆಗೆ ಸರ್ಕಾರ ಮುಕ್ತವಾಗಿದೆ ಎಂದು ಹೇಳಲಾಗಿದೆ.
ಐದು ಬೇಡಿಕೆ ಮುಂದಿರಿಸಿದ ರಾಹುಲ್ ಗಾಂಧಿ
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ ಕೇಂದ್ರ ಸರ್ಕಾರದ ಮುಂದೆ ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದು, ಅದರಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪ್ರಮುಖವಾದುದು. ಪ್ರಧಾನಮಂತ್ರಿ ನಿವಾಸದ ಎದುರು ನಡೆದ ಪ್ರತಿಭಟನೆಯಲ್ಲಿ ದೆಹಲಿ ಪೊಲೀಸರು ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ, ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕ್ರಮ, ಸಂಸತ್ತಿನಲ್ಲಿ ಚರ್ಚೆ ಹಾಗೂ ವಿದ್ಯಾರ್ಥಿಗಳ ಮೇಲಿನ ದಮನದ ಬಗ್ಗೆ ಪ್ರಧಾನಿ ಕ್ಷಮೆಯಾಚಿಸಬೇಕೆಂದು ಅವರು ಆಗ್ರಹಿಸಿದರು.
ಧರ್ಮೇಂದ್ರ ಪ್ರಧಾನ್ ಅವರ ಎಕ್ಸ್ ಪೋಸ್ಟ್:
LoP Shri @RahulGandhi and @INCIndia continue to shamelessly exploit students as political tools to manufacture disruption during the Monsoon Session of Parliament.
— Dharmendra Pradhan (@dpradhanbjp) July 21, 2026
Shri @RahulGandhi and @INCIndia chose to stage a dharna outside the Hon'ble Prime Minister's residence , causing…
ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ
ಈ ಮಧ್ಯೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿದ್ಯಾರ್ಥಿಗಳ ಸಮಸ್ಯೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. "ಸರ್ಕಾರ ಸಮಗ್ರ ಚರ್ಚೆಗೆ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದ್ದರೂ, ಕಾಂಗ್ರೆಸ್ ಪ್ರಜಾಪ್ರಭುತ್ವದ ಚರ್ಚೆಯ ಬದಲು ರಾಜಕೀಯ ಪ್ರದರ್ಶನವನ್ನು ಆಯ್ಕೆ ಮಾಡಿಕೊಂಡಿದೆ. ಅವರ ಉದ್ದೇಶ ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರವಲ್ಲ, ರಾಜಕೀಯ ಸುದ್ದಿಗಳನ್ನು ಸೃಷ್ಟಿಸುವುದಾಗಿದೆ" ಎಂದು ಧರ್ಮೇಂದ್ರ ಪ್ರಧಾನ್ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.