ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

“ಇನ್ಮುಂದೆ ಸಂಸತ್‌ಗೆ ಮೆರವಣಿಗೆ ಇಲ್ಲ”: ಹಿಂಸಾಚಾರದ ನಂತರ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಯಿಂದ ಮಹತ್ವದ ನಿರ್ಧಾರ

Abhijit Dipke: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಆಂದೋಲನವನ್ನು ಮುಂದುವರಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ ತಿಳಿಸಿದೆ. ದೆಹಲಿಯಲ್ಲಿ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಹಲವು ಬೆಂಬಲಿಗರು ಗಾಯಗೊಂಡ ಒಂದು ದಿನದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಅಭಿಜೀತ್ ದೀಪ್ಕೆ ಹೇಳಿದ್ದಾರೆ.

ದೆಹಲಿ ಹಿಂಸಾಚಾರದ ನಂತರ ಅಭಿಜಿತ್ ದೀಪ್ಕೆ ಹೇಳಿದ್ದೇನು?

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಭಿಜಿತ್ ದೀಪ್ಕೆ -

Priyanka P
Priyanka P Jul 21, 2026 2:50 PM

ನವದೆಹಲಿ, ಜು. 21: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರ ರಾಜೀನಾಮೆಗೆ ಒತ್ತಾಯಿಸಿ ಆಂದೋಲನವನ್ನು ಮುಂದುವರಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (Cockroach Janta Party) ತಿಳಿಸಿದೆ. ಆದರೆ ಸಂಸತ್ತಿಗೆ ಮತ್ತೊಂದು ಮೆರವಣಿಗೆ ನಡೆಸುವುದಿಲ್ಲ. ದೆಹಲಿಯಲ್ಲಿ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಹಲವು ಬೆಂಬಲಿಗರು ಗಾಯಗೊಂಡ ಒಂದು ದಿನದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಅಭಿಜೀತ್ ದೀಪ್ಕೆ (Abhijit Dipke) ಹೇಳಿದ್ದಾರೆ. ಯುವಕರು ನೋಯುವುದನ್ನು ಪಕ್ಷ ಬಯಸುವುದಿಲ್ಲ ಎಂದು ಅವರು ಹೇಳಿದರು.

ಸಂಸತ್ತಿನ ಕಡೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸುವುದನ್ನು ತಡೆಯಲು ಪೊಲೀಸರು ಲಾಠಿಚಾರ್ಜ್, ಅಶ್ರುವಾಯು ಮತ್ತು ಬ್ಯಾರಿಕೇಡ್‌ಗಳನ್ನು ಬಳಸಿದ್ದರಿಂದ ಸೋಮವಾರ (ಜುಲೈ 20) ದೆಹಲಿಯಲ್ಲಿ ಅವ್ಯವಸ್ಥೆ ಉಂಟಾಗಿತ್ತು. ಘಟನೆಯಲ್ಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಸೇರಿ ಸುಮಾರು 180 ಜನರು ಗಾಯಗೊಂಡಿದ್ದಾರೆ. 150ಕ್ಕೂ ಹೆಚ್ಚು ಪ್ರತಿಭಟನಾಕಾರರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ.

ಸೋಮವಾರ ನಡೆದ ಘರ್ಷಣೆಗಳ ನಂತರ ದೀಪ್ಕೆ ಬೆಂಬಲಿಗರಿಗೆ ಕ್ಷಮೆಯಾಚಿಸಿದರು. ಅಲ್ಲದೆ ಪೊಲೀಸ್ ಅಧಿಕಾರಿಗಳು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. “ನಮ್ಮ ಎಲ್ಲ ಬೆಂಬಲಿಗರಿಗೆ, ವಿಶೇಷವಾಗಿ ಪೊಲೀಸ್ ಅಧಿಕಾರಿಗಳಿಂದ ಕ್ರೂರವಾಗಿ ಥಳಿಸಲ್ಪಟ್ಟ ಹೆಣ್ಣಕ್ಕಳ ಬಳಿ ನಾನು ಕ್ಷಮೆಯಾಚಿಸುತ್ತೇನೆ. ನಾವು ಇನ್ನೂ ಉತ್ತಮವಾಗಿ ಹೋರಾಟ ಮಾಡಬಹುದಿತ್ತು. ದೆಹಲಿ ಪೊಲೀಸರ ಅಮಾನವೀಯ ಕ್ರಮಗಳಿಂದ ನಿಮ್ಮನ್ನು ರಕ್ಷಿಸಲು ನಾನು ಇನ್ನೂ ಉತ್ತಮವಾಗಿ ಕೆಲಸ ಮಾಡಬಹುದಿತ್ತು” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಸಿಜೆಪಿ ಪ್ರತಿಭಟನೆ: 178ಕ್ಕೂ ಹೆಚ್ಚು ಮಂದಿಗೆ ಗಾಯ, 4 ಎಫ್‌ಐಆರ್ ದಾಖಲು

“20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾವಿಗೆ ಕಾರಣರಾದ ಧರ್ಮೇಂದ್ರ ಪ್ರಧಾನ್ ಅವರನ್ನು ರಕ್ಷಿಸಲು ಸರ್ಕಾರ ಇನ್ನೂ ಅನೇಕ ಯುವ ವಿದ್ಯಾರ್ಥಿಗಳ ರಕ್ತವನ್ನು ಚೆಲ್ಲಲು ಸಿದ್ಧವಾಗಿದೆ” ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಆರೋಪಿಸಿದರು. ನಾವು ನಿಮ್ಮೆಲ್ಲರಿಗಾಗಿ ಹೋರಾಡುತ್ತಲೇ ಇರುತ್ತೇವೆ ಎಂದು ಅವರು ಹೇಳಿದರು.

ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭಿಕ ದಿನವಾದ ಸೋಮವಾರ ದೆಹಲಿ ಮತ್ತು ನೆರೆಯ ನಗರಗಳಿಂದ ಸಾವಿರಾರು ಪ್ರತಿಭಟನಾಕಾರರು ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸಿದರು. ಈ ಪ್ರತಿಭಟನೆಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಾರಂಭವಾಗಿ ದೊಡ್ಡ ಪ್ರಮಾಣದ ಬೀದಿ ಹೋರಾಟವಾಗಿ ಬದಲಾಗಿದೆ.

ಪ್ರತಿಭಟನಾಕಾರರು ಅಶಿಸ್ತಿನ, ಆಕ್ರಮಣಕಾರಿ ಮತ್ತು ಹಿಂಸಾತ್ಮಕ ನಡವಳಿಕೆಯನ್ನು ಪ್ರದರ್ಶಿಸಿದ್ದಾರೆ ಮತ್ತು ಪದೇ ಪದೆ ಎಚ್ಚರಿಕೆ ನೀಡಿದ್ದರೂ ಆದೇಶ ಉಲ್ಲಂಘಿಸಿದ್ದಾರೆ ಎಂದು ದೆಹಲಿ ಪೊಲೀಸರು ಹೇಳಿದರು.

ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ

ಪ್ರತಿಭಟನೆಯ ಸಂದರ್ಭದಲ್ಲಿ ಸಿಜೆಪಿ ನಾಯಕತ್ವವು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಬಿಡುಗಡೆ, ಶಿಕ್ಷಣ ಸಚಿವರ ರಾಜೀನಾಮೆ ಮತ್ತು ನೀಟ್ ಪತ್ರಿಕೆ ಸೋರಿಕೆಯ ನಂತರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರುಪಾಯಿ ಪರಿಹಾರ ಸೇರಿ ತನ್ನ ಬೇಡಿಕೆಗಳನ್ನು ಪುನರುಚ್ಚರಿಸಿತು.

ಮೋದಿ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಅತ್ಯಂತ ದೊಡ್ಡ ಪಾಪ ಎಂದು ಬಣ್ಣಿಸಿದರು. ಸರ್ಕಾರವು ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸುವ ಮೂಲಕ ತ್ವರಿತವಾಗಿ ಕಾರ್ಯನಿರ್ವಹಿಸಿದೆ ಎಂದು ಹೇಳಿದ ನಂತರ ಸಿಜೆಪಿ ಸಂಸತ್ತಿನ ಮೆರವಣಿಗೆಯನ್ನು ರದ್ದುಗೊಳಿಸಿತು.