ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Supreme Court: ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಸುಪ್ರೀಂ ಕೋರ್ಟ್‌ ಪದೋನ್ನತಿಗೆ ಕೇಂದ್ರದ ಅನುಮೋದನೆ

ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಾಂಚೋಲಿ ಮತ್ತು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ಪದೋನ್ನತಿಯ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಈ ಇಬ್ಬರ ನೇಮಕಾತಿಯೊಂದಿಗೆ ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಪದೋನ್ನತಿಗೆ ಅನುಮೋದನೆ

Ramesh B Ramesh B Aug 27, 2025 5:07 PM

ದೆಹಲಿ: ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಾಂಚೋಲಿ (Vipul Manubhai Pancholi) ಮತ್ತು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಅಲೋಕ್ ಆರಾಧೆ (Alok Aradhe) ಅವರ ಪದೋನ್ನತಿಯ ಸುಪ್ರೀಂ ಕೋರ್ಟ್‌ನ (Supreme Court) ಕೊಲಿಜಿಯಂ ಶಿಫಾರಸನ್ನು ಕೇಂದ್ರ ಸರ್ಕಾರ (Central Government) ಅನುಮೋದಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಜೆ.ಕೆ. ಮಹೇಶ್ವರಿ ಹಾಗೂ ಬಿ.ವಿ. ನಾಗರತ್ನಾ ಅವರನ್ನೊಳಗೊಂಡ ಕೊಲಿಜಿಯಂ ಈ ಶಿಫಾರಸು ಮಾಡಿದೆ.

"ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ರಾಷ್ಟ್ರಪತಿ ಭಾರತದ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿದ ನಂತರ ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪುಲ್ ಮನುಭಾಯಿ ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ" ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ. ಈ ಇಬ್ಬರ ನೇಮಕಾತಿಯೊಂದಿಗೆ ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಬಲದೊಂದಿಗೆ ಕಾರ್ಯನಿರ್ವಹಿಸಲಿದೆ.



ಈ ಸುದ್ದಿಯನ್ನೂ ಓದಿ: Murugesh nirani: ಮುರುಗೇಶ್‌ ನಿರಾಣಿ ಪುತ್ರನ ವಿರುದ್ಧ ತನಿಖೆ, ಸುಪ್ರೀಂ ಕೋರ್ಟ್‌ ಆದೇಶ

ಮುಖ್ಯ ನ್ಯಾಯಮೂರ್ತಿ ಪಂಚೋಲಿ ಅವರನ್ನು ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡುವ ಕೊಲಿಜಿಯಂನ ಪ್ರಸ್ತಾಪವನ್ನು ಆರಂಭದಲ್ಲಿ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ವಿರೋಧಿಸಿದ್ದರು. ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ನಿವೃತ್ತಿಯ ನಂತರ, ನ್ಯಾಯಮೂರ್ತಿ ಪಾಂಚೋಲಿ 2031ರ ಅಕ್ಟೋಬರ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗುವ ನಿರೀಕ್ಷೆಯಲ್ಲಿದ್ದಾರೆ.

ಅರಾಧೆ ಹಿನ್ನೆಲೆ

ಆರಾಧೆ ಅವರನ್ನು 2009ರಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಯಿತು. 2011ರಲ್ಲಿ ಅವರನ್ನು ಖಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಯಿತು. 2016ರಲ್ಲಿ ಜಮ್ಮು ಕಾಶ್ಮೀರ ಹೈಕೋರ್ಟ್‌ಗೆ ವರ್ಗಾವಣೆಗೊಂಡ ಅವರು 2018ರಲ್ಲಿ 3 ತಿಂಗಳ ಕಾಲ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದರು. 2018ರ ನವೆಂಬರ್ 17ರಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿ 2022ರಲ್ಲಿ ಕೆಲವು ತಿಂಗಳು ಕಾಲ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದರು. 2023ರಲ್ಲಿ ಅವರನ್ನು ತೆಲಂಗಾಣ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಯಿತು. ನಂತರ 2025ರ ಜನವರಿಯಲ್ಲಿ ಬಾಂಬೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಗೊಂಡ ಅವರು ಈವರೆಗೆ ಅಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಪಂಚೋಲಿ ಹಿನ್ನೆಲೆ

ನ್ಯಾಯಮೂರ್ತಿ ಪಂಚೋಲಿ ಅವರ ಮಾತೃ ಹೈಕೋರ್ಟ್ ಗುಜರಾತ್. ಅವರನ್ನು 2023ರ ಜುಲೈಯಲ್ಲಿ ಪಾಟ್ನಾಗೆ ವರ್ಗಾವಣೆ ಮಾಡಲಾಯಿತು. 2014ರ ಅಕ್ಟೋಬರ್ 1ರಂದು ಗುಜರಾತ್ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಲಾಯಿತು ಮತ್ತು 2016ರ ಜೂನ್ 10ರಂದು ಹುದ್ದೆ ಖಾಯಂಗೊಂಡಿತು.