BY Vijayendra: ಸಿಎಂ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ- ಬಿ.ವೈ.ವಿಜಯೇಂದ್ರ ಆರೋಪ
BY Vijayendra: ರಾಜ್ಯದಲ್ಲಿ ಪರಿಸ್ಥಿತಿ ದಿನೇ ದಿನೇ ಕೈಮೀರಿ ಹೋಗುತ್ತಿದೆ. ಆಡಳಿತ ಯಂತ್ರವು ಸಂಪೂರ್ಣವಾಗಿ ಕುಸಿದುಬಿದ್ದಿದೆ. ಆಡಳಿತ ಪಕ್ಷದಲ್ಲಿ ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ದಿನೇ ದಿನೇ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಅಭಿವೃದ್ಧಿ ಕೆಲಸ ಕಾರ್ಯಗಳು ಏನೂ ನಡೆಯುತ್ತಿಲ್ಲ. ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.


ಬೆಂಗಳೂರು: ಸಿದ್ದರಾಮಯ್ಯ ಅವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರ್ಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ದೂರಿದ ಅವರು, ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ಹೇಳಿದರು.
ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಅವರು ಡಿಕೆಶಿಯವರಿಗೆ 100 ಜನ ಶಾಸಕರ ಬೆಂಬಲ ಇದೆ, ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್. ಪಾಟೀಲ್, ರಾಜು ಕಾಗೆಯವರು ಸೇರಿ ಬೇರೆ ಬೇರೆ ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ಪಕ್ಷದ ಶಾಸಕರ ವಿಶ್ವಾಸವನ್ನೂ ಕಳಕೊಂಡಿದ್ದಾರೆ ಎಂದರು. ಕುದುರೆ ವ್ಯಾಪಾರದ ಬಗ್ಗೆ ಮಾನ್ಯ ರಾಜ್ಯಪಾಲರೂ ಗಮನಿಸಬೇಕು ಎಂದು ವಿನಂತಿಸಿದರು.
ಹಾಸನ ಜಿಲ್ಲೆಗೆ ಮಾತ್ರ ಕೋವಿಡ್ ಲಸಿಕೆ ಕೊಡಲಾಗಿದೆಯೇ?
ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ 35- 40 ಜನರು ಸತ್ತಿದ್ದು, ಕೋವಿಡ್ ಲಸಿಕೆ ಕಾರಣ ಎಂಬ ಮುಖ್ಯಮಂತ್ರಿಗಳ ಆರೋಪಕ್ಕೆ ಉತ್ತರಿಸಿದ ಅವರು, ಹಾಸನ ಜಿಲ್ಲೆಗೆ ಮಾತ್ರ ಕೋವಿಡ್ ಲಸಿಕೆ ಕೊಡಲಾಗಿದೆಯೇ? ದೇಶದ ಕೋಟ್ಯಂತರ ಜನರಿಗೆ, ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಿಗೂ ಕೋವಿಡ್ ಲಸಿಕೆ ರಫ್ತು ಮಾಡಿದ್ದಾರೆ. ಹಾಸನದ ಸಾವುಗಳ ಸಂಬಂಧ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸಮರ್ಪಕ ತನಿಖೆ ನಡೆಸಬೇಕಿದೆ ಎಂದು ವಿಜಯೇಂದ್ರ ಆಗ್ರಹಿಸಿದರು.
ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದು ಖಂಡಿಸಿದ ಅವರು, ಮುಖ್ಯಮಂತ್ರಿಗಳು ತುರ್ತಾಗಿ ಸಭೆ ಕರೆದು ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಮರ್ಪಕ ಔಷಧಿ ಸಿದ್ಧವಾಗಿ ಇಟ್ಟುಕೊಳ್ಳುವ ಕಡೆ ಗಮನಿಸಬೇಕು. ಅಪಪ್ರಚಾರ ಸಲ್ಲದು ಎಂದು ತಿಳಿಸಿದರು.
ಆರೆಸ್ಸೆಸ್ ನಿಷೇಧ ಕುರಿತ ಪ್ರಿಯಾಂಕ್ ಖರ್ಗೆಯವರ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಇದು ತಿರುಕನ ಕನಸು ಎಂದು ವ್ಯಂಗ್ಯವಾಡಿದರು. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು ಸ್ವತಃ ನಿಮ್ಮ ತಂದೆ- ಮಲ್ಲಿಕಾರ್ಜುನ ಖರ್ಗೆಯವರೇ ನಂಬಲು ಸಾಧ್ಯವಿಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರೇ ನಂಬಲಸಾಧ್ಯ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಕನಸು ಪ್ರಿಯಾಂಕ್ ಖರ್ಗೆಯವರಿಗೆ ಯಾಕೆ ಬಿತ್ತು ಎಂದು ಪ್ರಶ್ನಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘ ಒಂದು ರಾಷ್ಟ್ರಭಕ್ತ ಸಂಘಟನೆ. ಭಾರತ- ಚೀನಾದ ಜತೆ ಯುದ್ಧದ ವೇಳೆ ಆರೆಸ್ಸೆಸ್ ಪಾತ್ರವನ್ನು ಪ್ರಧಾನಿ ಜವಾಹರಲಾಲ್ ನೆಹರೂ ಅವರು ಸ್ವಾಗತಿಸಿದ್ದರು. ಅದರ ಬಳಿಕ ರಿಪಬ್ಲಿಕ್ ಪರೇಡ್ನಲ್ಲಿ ಅವಕಾಶ ಕೊಡಲಾಗಿತ್ತು ಎಂದು ವಿವರಿಸಿದರು. ನೆಹರೂ, ಇಂದಿರಾ ಗಾಂಧಿಯವರು ಆರೆಸ್ಸೆಸ್ ನಿಷೇಧಿಸಿದ್ದರು. ಕಾಡಿ ಬೇಡಿದ್ದು ನಿಷೇಧ ರದ್ದಾಯಿತೆಂಬ ಅಪ್ರಬುದ್ಧ ಹೇಳಿಕೆ ನೀಡಿದ್ದು, ಮಾಹಿತಿ ಕೊರತೆಯಿಂದ ಕೂಡಿದೆ ಎಂದು ಆಕ್ಷೇಪಿಸಿದರು.
ಬಿಜೆಪಿ ಹೋರಾಟಕ್ಕೆ ಸಂದ ಜಯ
ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ರಾಜ್ಯ ಹೈಕೋರ್ಟ್ ಸಿಬಿಐಗೆ ವಹಿಸಿದ್ದು ಬಿಜೆಪಿ ಹೋರಾಟಕ್ಕೆ ಸಂದ ಜಯ ಎಂದ ಅವರು, ರಾಜ್ಯ ಹೈಕೋರ್ಟ್ ನಿನ್ನೆ ಮಹತ್ವದ ತೀರ್ಪು ನೀಡಿದೆ. ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದು ಬಿಜೆಪಿ ಹೋರಾಟಕ್ಕೆ ಸಂದ ಜಯ. ಇದರಲ್ಲಿ ಇನ್ನೂ ಕೂಡ ದೊಡ್ಡ ತಲೆಗಳು ಉರುಳಲಿವೆ. ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ತಿಳಿಸಿದರು.
ರಾಜ್ಯದ ಪರಿಶಿಷ್ಟ ಸಮುದಾಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ನ್ಯಾಯಕ್ಕೆ ಬಳಕೆಗೆ ಮೀಸಲಿಟ್ಟ 187 ಕೋಟಿ ಹಣವನ್ನು ಪಕ್ಕದ ತೆಲಂಗಾಣದಲ್ಲಿ ಬಳಸಿಕೊಂಡ ವಾಲ್ಮೀಕಿ ನಿಗಮದ ಹಗರಣ ನಡೆದಿತ್ತು. ಸಾವಿರಾರು ಬ್ಯಾಂಕ್ ಖಾತೆಗಳನ್ನು ತೆರೆದು ಬಾರ್, ಜ್ಯುವೆಲ್ಲರಿ ಶಾಪ್, ಲೋಕಸಭಾ ಚುನಾವಣೆಗೆ ಈ ಹಣ ದುರ್ಬಳಕೆ ಆಗಿತ್ತು. ಚಂದ್ರಶೇಖರ್ ಎಂಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟಿನಲ್ಲಿ ಎಲ್ಲವನ್ನೂ ಉಲ್ಲೇಖಿಸಿದ್ದರು ಎಂದು ಆರೋಪಿಸಿದರು.
ಬಿಜೆಪಿ ತೀವ್ರ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿಗಳು ಅನಿವಾರ್ಯವಾಗಿ ಸಚಿವ ನಾಗೇಂದ್ರರನ್ನು ಸಂಪುಟದಿಂದ ಕೈಬಿಡಬೇಕಾಗಿ ಬಂತು. ಈಗ ಹೇಗಾದರೂ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಲು ಮುಖ್ಯಮಂತ್ರಿಗಳು ಪರದಾಡುತ್ತಿದ್ದರು. ಈ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿಗಳು ಭಾಗಿಯಾದುದು ಮಾಧ್ಯಮದವರಿಗೂ ತಿಳಿದಿದೆ ಎಂದ ಅವರು, ಹಣಕಾಸಿನ ಇಲಾಖೆ ಅನುಮತಿ ಇಲ್ಲದೆ ಹಣ ಹೊರರಾಜ್ಯಕ್ಕೆ ಹೋಗಲು ಸಾಧ್ಯವಿರಲಿಲ್ಲ ಎಂದು ದೂರಿದರು.
ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ದಿನೇ ದಿನೇ ಹೆಚ್ಚಳ
ರಾಜ್ಯದಲ್ಲಿ ಪರಿಸ್ಥಿತಿ ದಿನೇದಿನೇ ಕೈಮೀರಿ ಹೋಗುತ್ತಿದೆ. ಆಡಳಿತ ಯಂತ್ರವು ಸಂಪೂರ್ಣವಾಗಿ ಕುಸಿದುಬಿದ್ದಿದೆ. ಆಡಳಿತ ಪಕ್ಷದಲ್ಲಿ ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ದಿನೇದಿನೇ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಅಭಿವೃದ್ಧಿ ಕೆಲಸಕಾರ್ಯಗಳು ಏನೂ ನಡೆಯುತ್ತಿಲ್ಲ. ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರ್ಕಾರವು ದಿನಬಳಕೆ ವಸ್ತುಗಳ ಮೇಲೆ ಸತತ ಬೆಲೆ ಏರಿಸಿದ್ದರಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿದ್ದು, ಅಧಿಕಾರಿಗಳು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿದರು.
ರೈತರ ಆತ್ಮಹತ್ಯೆಗಳು, ಅಧಿಕಾರಿಗಳ ಆತ್ಮಹತ್ಯೆಗಳು, ಜತೆಗೇ ಗುತ್ತಿಗೆದಾರರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ರಾಜ್ಯದಲ್ಲಿ ನಿರಂತರವಾಗಿ ನಡೆದಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಒಪ್ಪಿಕೊಂಡಿದ್ದಾರೆ ಟೀಕಿಸಿದರು.
ಸಿಂಧನೂರಿನಲ್ಲಿ ಹಿಂದೂ ಕಾರ್ಯಕರ್ತರನ್ನು ಬೆದರಿಸಿದ್ದಾರೆ. ಸಂಕೇಶ್ವರದಲ್ಲೂ ಶ್ರೀರಾಮಸೇನೆ ಕಾರ್ಯಕರ್ತರನ್ನು ಥಳಿಸಿದ್ದಾರೆ. ಪದೇ ಪದೇ ರಾಜ್ಯದಲ್ಲಿ ಗೋವುಗಳ ಕೆಚ್ಚಲನ್ನು ಕತ್ತರಿಸಲಾಗುತ್ತಿದೆ. ಇದರ ಬಗ್ಗೆ ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲ ಎಂದು ಟೀಕಿಸಿದ ಅವರು, ಸರ್ಕಾರದ ಪಾಪದ ಕೊಡ ತುಂಬಿದೆ, ಜನರು ನಿಮಗೆ ಶಾಪ ಹಾಕುತ್ತಿದ್ದಾರೆ. ಹಸುವಿನ ಕೆಚ್ಚಲು ಕೊಯ್ಯುವ ಘಟನಾವಳಿ ಪದೇಪದೇ ನಡೆದಿದೆ. ಭಗವಂತನೂ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಒಳ್ಳೆಯದು ಮಾಡಲು ಸಾಧ್ಯವಿಲ್ಲ. ಗೃಹ ಸಚಿವರು ಕಠಿಣ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಈ ಸುದ್ದಿಯನ್ನೂ ಓದಿ | GST Relief: ಜನಸಾಮಾನ್ಯರಿಗೆ ಗುಡ್ನ್ಯೂಸ್- ಶೀಘ್ರದಲ್ಲೇ ಈ ಎಲ್ಲಾ ವಸ್ತುಗಳ ದರ ಅಗ್ಗ!
ಈ ವೇಳೆ ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ, ಶಾಸಕರಾದ ಮಾನಪ್ಪ ಡಿ ವಜ್ಜಲ್, ಡಾ. ಶಿವರಾಜ್ ಪಾಟೀಲ್ ಮತ್ತು ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ಉಪಸ್ಥಿತರಿದ್ದರು.