CM Siddaramaiah: ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿ ನಷ್ಟ: ಸಿದ್ದರಾಮಯ್ಯ
CM Siddaramaiah: 16ನೇ ಹಣಕಾಸಿನ ಆಯೋಗಕ್ಕೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಚರ್ಚಿಸಲು ಪ್ರಧಾನಿ ಹಾಗೂ ಹಣಕಾಸಿನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ರಾಯಚೂರು: 14ನೇ ಹಣಕಾಸಿನ ಆಯೋಗದಿಂದ 15ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿ ರೂ. ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಕೇಂದ್ರದಿಂದ ಬಿಡುಗಡೆಯಾಗಬೇಕಿರುವ ಅನುದಾನದ ಬಗ್ಗೆ ರಾಯಚೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಮಾತನಾಡಿದರು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಪ್ರಧಾನಿ ಮೋದಿಯವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪ್ರಭಾವಿ ಸಚಿವ ಎಂದು ಹೇಳಲಾಗುತ್ತದೆ. 11495 ಕೋಟಿ ರೂ.ಗಳನ್ನು ಹಣಕಾಸಿನ ಆಯೋಗದಲ್ಲಿ ವಿಶೇಷ ಅನುದಾನ ನೀಡಲು ಸಮ್ಮತಿ ನೀಡಲಾಗಿದ್ದರೂ, ಕೇಂದ್ರ ಸರ್ಕಾರ ಈ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲು ಅವರು ಯಾವುದೇ ಸಹಾಯವನ್ನು ಮಾಡಿಲ್ಲ. ಕರ್ನಾಟಕದ ಬಗ್ಗೆ ಮಾತನಾಡಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯಕ್ಕೆ 11495 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ ಎಂದರು.
ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದ ವಿಶೇಷ ಅನುದಾನ ಬಿಡುಗಡೆಗೆ ಒತ್ತಾಯ
ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತಾ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು ವಿಧೇಯಕಗಳ ಬಗ್ಗೆ ವಿವರಣೆ ನೀಡಲು ರಾಷ್ಟ್ರಪತಿಗಳನ್ನು ಭೇಟಿಯಾಗುವ ಸಮಯ ಕೋರಲಾಗಿದೆ. 16ನೇ ಹಣಕಾಸಿನ ಆಯೋಗಕ್ಕೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಚರ್ಚಿಸಲು ಪ್ರಧಾನಿಯವರನ್ನು, ಹಣಕಾಸಿನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯ ಸರ್ಕಾರ 5 ಸಾವಿರ ಕೋಟಿಗಳ ವಿಶೇಷ ಅನುದಾನವನ್ನು ಪ್ರತಿವರ್ಷ ನೀಡುತ್ತಿದ್ದು, ಇದೇ ರೀತಿ, ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಅನುದಾನ ನೀಡಬೇಕೆಂದು ಒತ್ತಾಯಿಸಲಾಗಿದೆ. ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಮಾಡುವ ವಿಚಾರವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಶಿಕ್ಷಕರ ನೇಮಕಾತಿಗೆ ಆದೇಶ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆ ಕಾರಣವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಹೊಸ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆದೇಶ ನೀಡಲಾಗಿದೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಹೊರಬರಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಿದೆ ಎಂದರು.
ಸಚಿವ ಎಚ್.ಕೆ. ಪಾಟೀಲ್ ಪತ್ರ: ಅಕ್ರಮ ಗಣಿಗಾರಿಕೆ ತನಿಖೆಗೆ ವಿಶೇಷ ಕೋರ್ಟ್ ರಚನೆಗೆ ಮನವಿ
ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆಯ ಬಗ್ಗೆ ಸಚಿವ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಿಂದಿನ ಅವಧಿಯಲ್ಲಿ ನಡೆದಿದ್ದು, ಈ ಬಗ್ಗೆ ತ್ವರಿತ ತನಿಖೆ ನಡೆಸಲು ವಿಶೇಷ ಕೋರ್ಟ್ ರಚಿಸಿ, ಗಣಿಗಾರಿಕೆಯಲ್ಲಿರುವ ಬಾಕಿಯ ವಸೂಲಾತಿಗೆ ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಲು ಪತ್ರದಲ್ಲಿ ತಿಳಿಸಿದ್ದಾರೆ. ಸಚಿವ ಸಂಪುಟದಲ್ಲಿ ಸದರಿ ವಿಷಯವನ್ನು ಚರ್ಚಿಸಿ ವಿಶೇಷ ನ್ಯಾಯಾಲಯ ರಚಿಸಬೇಕೆಂಬ ಉದ್ದೇಶದಿಂದ ಸಚಿವರು ಪತ್ರ ಬರೆದಿದ್ದಾರೆ. ಅಂದಿನ ಲೋಕಾಯುಕ್ತ ಸಂತೋಷ್ ಹೆಗಡೆಯವರು ಅಕ್ರಮ ಗಣಿಗಾರಿಕೆ ಬಗ್ಗೆ ವರದಿಯನ್ನೂ ನೀಡಿದ್ದರು. ಈ ವರದಿಯ ಬಗ್ಗೆ ವಿಧಾನಸಭೆಯಲ್ಲಿ ನಾನು ಕೇಳಿದ ಪ್ರಶ್ನೆಗೆ ಸರ್ಕಾರದಿಂದ ಸಮರ್ಪಕ ಉತ್ತರ ಬಂದಿರಲಿಲ್ಲ. ಆಗ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿಯಲ್ಲಿ ಪಾದಯಾತ್ರೆ ನಡೆಸಲಾಗಿತ್ತು ಎಂದರು.
ಕಾಂಗ್ರೆಸ್ ಶಾಸಕ ರಾಜು ಕಾಗೇ ಅವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಾರಂಭವಾಗದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು. ವಿಶೇಷ ಅನುದಾನವನ್ನು ಅಗತ್ಯವಿರುವ ವಿಧಾನಸಭಾ ಕ್ಷೇತ್ರಗಳಿಗೆ ನೀಡಲಾಗುತ್ತದೆ ಎಂದರು.
ಈ ಸುದ್ದಿಯನ್ನೂ ಓದಿ | DK Shivakumar: ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ ಎಂದ ಡಿ.ಕೆ.ಶಿವಕುಮಾರ್
ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ವಸತಿ ಸಚಿವರು ರಾಜಿನಾಮೆ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ವಸತಿ ಇಲಾಖೆಯ ವಿಷಯದ ಕುರಿತು ಚರ್ಚಿಸಲು ಶಾಸಕ ಬಿ.ಆರ್. ಪಾಟೀಲ್ ರವರು ಇದೇ 25 ರಂದು ಭೇಟಿಯಾಗುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.