ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಸಮನ್ವಯದಿಂದ ಕೆಲಸ: ಬಿ.ವೈ. ವಿಜಯೇಂದ್ರ

BY Vijayendra: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶುಕ್ರವಾರ ಭೇಟಿ ಮಾಡಿದ್ದು, ಈ ವೇಳೆ ಮುಂಬರುವ ಹಿರಿಯೂರು ಹಾಗೂ ಧಾರವಾಡ ಉಪ ಚುನಾವಣೆ ಹಾಗೂ ನಾಲ್ಕು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗಳ ಕುರಿತು ಚರ್ಚಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಸಮನ್ವಯದಿಂದ ಕೆಲಸ: ಬಿವೈವಿ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (ಸಂಗ್ರಹ ಚಿತ್ರ) -

Profile
Siddalinga Swamy Jul 10, 2026 6:10 PM

ಬೆಂಗಳೂರು, ಜು.10: ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಜೆಡಿಎಸ್ ಜತೆಗೆ ಸಮನ್ವಯದಿಂದ, ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಶುಕ್ರವಾರ ಭೇಟಿ ಮಾಡಿ ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು ಚರ್ಚಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಮುಂಬರುವ ಹಿರಿಯೂರು ಹಾಗೂ ಧಾರವಾಡ ಉಪ ಚುನಾವಣೆ ಹಾಗೂ ನಾಲ್ಕು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗಳ ಕುರಿತು ಚರ್ಚೆ ನಡೆಸಲಾಯಿತು. ಬಿಜೆಪಿ ಮೂರು ಕಡೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಎಲ್ಲದಕ್ಕೂ ಜೆಡಿಎಸ್ ಸಹಕಾರ ಕೇಳಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ಸಮನ್ವಯ ಸಮಿತಿ ರಚಿಸುವ ಕುರಿತು ಮಾತುಕತೆ ನಡೆಸಲಾಗಿದೆ. ಸಮಿತಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಇರಲಿದ್ದಾರೆ. ಜೆಡಿಎಸ್‍ನಿಂದ ಕುಮಾರಸ್ವಾಮಿ ಇರಲಿದ್ದಾರೆ. ಇದರ ಜತೆಗೆ ಮತ್ತೊಬ್ಬರ ಹೆಸರು ಸೂಚಿಸಿ ಎಂದು ಹೇಳಿರುವುದಾಗಿ ವಿಜಯೇಂದ್ರ ತಿಳಿಸಿದರು.

ನಮ್ಮ ಎಲ್ಲಾ ಮಾತಿಗೆ ಕುಮಾರಸ್ವಾಮಿ ಅವರು ಸಹಮತ ವ್ಯಕ್ತಪಡಿಸಿದ್ದಾರೆ. ಸಮಿತಿಯಲ್ಲಿ ಆದಷ್ಟು ಕಡಿಮೆ ಇರಬೇಕು ಎಂದು ಹೇಳಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರೊಂದಿಗೂ ಚರ್ಚಿಸಲಾಗಿದೆ ಎಂದರು.

ಅಭಿವೃದ್ಧಿಯ ಹಿತದೃಷ್ಟಿಯಿಂದ ತೀರ್ಮಾನ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಹಾಗೂ ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ತೀರ್ಮಾನ ಕೈಗೊಂಡಿದ್ದೇವೆ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅಪೇಕ್ಷೆಯಂತೆ ನಾವೆಲ್ಲ ಒಂದಾಗಿ ಹೋಗಬೇಕು ಎಂದು ತಿಳಿಸಿದರು.

ಗೊಂದಲಕ್ಕೆ ಅವಕಾಶ ಇಲ್ಲ

ಹಿರಿಯೂರು ಕ್ಷೇತ್ರದ ಉಪ ಚುನಾವಣೆ ಸಂಬಂಧ ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಮ್ಮ ಅಭಿಪ್ರಾಯವನ್ನೂ ಹೇಳಿದ್ದೇವೆ. ಕ್ಷೇತ್ರದಲ್ಲಿ ಹಿಂದೆ ಬಿಜೆಪಿ ಗೆಲುವು ಸಾಧಿಸಿದೆ. ಹಿರಿಯೂರು ಮತ್ತು ಧಾರವಾಡ ಉಪ ಚುನಾವಣೆಯಲ್ಲಿ ಗೊಂದಲಕ್ಕೆ ಅವಕಾಶ ನೀಡದೆ ಗೆಲುವಿಗೆ ಕೆಲಸ ಮಾಡುತ್ತೇವೆ. ಹಿಂದೆ ಆದ ತಪ್ಪು ತಿದ್ದಿಕೊಂಡು ಹೋಗಬೇಕು. ಎರಡೂ ಕಡೆ ನಾವು ಗೆಲ್ಲಬೇಕು ಎಂದು ಹೇಳಿದರು. ಕ್ಷೇತ್ರದಲ್ಲಿ ಯಾರು ಸ್ಪರ್ಧಿಸಬೇಕು ಎಂಬ ಬಗ್ಗೆ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಬಿಎ ಚುನಾವಣೆ ನಡೆಸುವ ಮನಸ್ಸಿಲ್ಲ

ರಾಜ್ಯ ಸರ್ಕಾರಕ್ಕೆ ಜಿಬಿಎ, ಜಿಲ್ಲಾ ಪಂಚಾಯಿತಿ ಸೇರಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ಮನಸ್ಸಿಲ್ಲ. ರಾಜ್ಯ ಸರ್ಕಾರ ಈಗ ಎಸ್‍ಐಆರ್ ಇಟ್ಟುಕೊಂಡು ಮತ್ತೆ ಜಿಬಿಎ ಚುನಾವಣೆ ಮುಂದೂಡಲು ನೋಡುತ್ತಿದೆ. ಇದು ದುರ್ದೈವ. ಸಚಿವ ಸಂಪುಟ ವಿಸ್ತರಣೆ ಮಾಡುವ ಮಾನಸಿಕ ಸ್ಥಿತಿಯಲ್ಲೂ ಸರ್ಕಾರ ಇಲ್ಲ ಎಂದು ಆರೋಪಿಸಿದರು.

ಬೀದಿಬದಿ ವ್ಯಾಪಾರಿಗಳ ಬಗ್ಗೆ ಚರ್ಚೆ

ಬೀದಿಬದಿ ವ್ಯಾಪಾರಿಗಳು ಅರ್ಥಿಕ ಶಕ್ತಿ ತುಂಬುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಬಡವರಾದ ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ಎತ್ತಂಗಡಿ ಮಾಡುವ ಬದಲು ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಅವರ ಹಿತಾಸಕ್ತಿ ಕಾಪಾಡುವ ಜವಾಬ್ದಾರಿ ಸಹ ಸರ್ಕಾರದ ಮೇಲಿದೆ ಎಂದು ಹೇಳಿದರು.

ಕಡತ ವಿಲೇವಾರಿ ಆಗಿಲ್ಲ

ಎಂಬತ್ತು ಸಾವಿರ ಕಡತ ವಿಲೇವಾರಿ ಆಗಿಲ್ಲ ಎಂದರೆ ರಾಜ್ಯದ ಆಡಳಿತ ಸ್ಥಿತಿ ಏನಾಗಿದೆ ಎಂದು ತಿಳಿಯುತ್ತದೆ. ಸಿಎಂ ಉತ್ಸಾಹದಿಂದ ಇದ್ದಾರೆ. ಒಂದು ತಿಂಗಳು ಪೂರೈಸಿದ್ದಾರೆ. ಈಗಲಾದರೂ ಮೂರು ವರ್ಷದ ವೈಫಲ್ಯಗಳನ್ನು ಸರಿಪಡಿಸಿಕೊಳ್ಳಲಿ. ಅನ್ನದಾತರ ಕಲ್ಯಾಣಕ್ಕೆ ಆಡಳಿತ ನಡೆಸಲಿ ಎಂದರು. ‌

ಎಚ್ಎಂಟಿ ಜಾಗದ ವಿಚಾರದಲ್ಲಿ ಈಶ್ವರ ಖಂಡ್ರೆ-ಎಚ್.ಡಿ. ಕುಮಾರಸ್ವಾಮಿ ವಾಕ್ಸಮರ; ರಾಜ್ಯ ಸರ್ಕಾರಕ್ಕೆ ಹಕ್ಕಿಲ್ಲ ಎಂದ ಎಚ್‌ಡಿಕೆ

ಕುತಂತ್ರ, ಷಡ್ಯಂತ್ರ ನಡೆಯುತ್ತಿದೆ

ಅಕ್ರಮ ವಲಸಿಗರಿಗೆ ರಕ್ಷಣೆ ನೀಡಲು ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಮೂಲಕ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಅಲ್ಪಸಂಖ್ಯಾತರ ಓಲೈಕೆ ಮತ್ತು ದೇಶದ ಹಿತಕ್ಕೆ ಧಕ್ಕೆ ತರುವ ನಿರ್ಧಾರ ಕೈಬಿಡಿ ಎಂದು ಸಿಎಂಗೆ ಆಗ್ರಹಿಸಿದರು. ಇಂಥ ಪ್ರಮಾಣಪತ್ರಕ್ಕೆ ಬಿಜೆಪಿ ವಿರೋಧವಿದೆ. ಮುಂದಿನ ದಿನಗಳಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.‌