CM-DCM Breakfast Meeting: ನಾನು ಹಾಗೂ ಡಿ.ಕೆ.ಶಿವಕುಮಾರ್ ಸಹೋದರರು, ಭಿನ್ನಾಭಿಪ್ರಾಯಗಳಿಲ್ಲ: ಸಿಎಂ ಸಿದ್ದರಾಮಯ್ಯ
CM Siddaramaiah: ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದ್ದೆ. ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ. -
ಬೆಂಗಳೂರು, ಡಿ. 2: ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಮಂಗಳವಾರ ಬ್ರೇಕ್ಫಾಸ್ಟ್ ಮೀಟಿಂಗ್ (CM-DCM Breakfast Meeting) ನಂತರ ಅವರು ಮಾತನಾಡಿ, ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು.
ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ. ಸಿಎಲ್ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ. ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ. ಉಪಮುಖ್ಯಮಂತ್ರಿಗಳ ಮನೆಯ ಉಪಾಹಾರದಲ್ಲಿ ಮಾಂಸಾಹಾರವಿತ್ತು, ನಮ್ಮ ಮನೆಯಲ್ಲಿ ಸಸ್ಯಾಹಾರದ ಉಪಾಹಾರವಿತ್ತು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಪರಮೇಶ್ವರ್ ಅವರು ಸಿಎಂ ಹಾಗೂ ಡಿಸಿಎಂ ಅವರನ್ನು ಉಪಾಹಾರಕ್ಕೆ ಕರೆಯುವುದಾಗಿ ಹೇಳಿರುವ ಬಗ್ಗೆ ಮಾತನಾಡಿ, ಅದನ್ನು ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತಾರೆ ಎಂದು ಹೇಳಿದರು.
ನಾವು ಒಗ್ಗಟ್ಟಾಗಿದ್ದೇವೆ: ಬ್ರೇಕ್ಫಾಸ್ಟ್ ಬಳಿಕ ಸಿಎಂ ಸಿದ್ದರಾಮಯ್ಯ- ಡಿಕೆಶಿಹೇಳಿಕೆ
ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ. ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನ ನಡೆಯುತ್ತಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ವಿಡಿಯೋ
ಹೈ ಕಮಾಂಡ್ ಭೇಟಿ
ಭೇಟಿಗೆ ಅವಕಾಶ ಸಿಕ್ಕರೆ ಹೈ ಕಮಾಂಡ್ ನಾಯಕರನ್ನು ಭೇಟಿ ಮಾಡಲಾಗುವುದು. ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಬರಲಿದ್ದಾರೆ, ನಾವು ಕೂಡ ಉಪಸ್ಥಿತರಿರುತ್ತೇವೆ ಎಂದು ತಿಳಿಸಿದರು.
ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ
ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು,ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ.ವೆರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು , ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು , ಪಶುಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು.
ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.
ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ: ಸಿಎಂ ಭರವಸೆ
ರಾಜ್ಯ ಸಂಸದರ ಸಭೆ
ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶು ಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷದ ಎಥನಾಲ್ಗಾಗಿ ಬಳಸುತ್ತಾರೆ. ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು. ಎಥನಾಲ್ ಹಾಗೂ ಎಂಎಸ್ಪಿ, ಎಫ್ಆರ್ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು, ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆ ಎಂದರು.