MB Patil: ಎಸ್ಐಟಿ ರಚನೆ ಮಾಡಿದ್ದರಿಂದ ಒಳ್ಳೆಯದೇ ಆಗಿದೆ, ರಾಜ್ಯ ಸರ್ಕಾರ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಎಂ.ಬಿ.ಪಾಟೀಲ್
ಎಸ್ಐಟಿ ರಚನೆ ಮಾಡಿದ್ದರಿಂದ ಧರ್ಮಸ್ಥಳದ ಶಕ್ತಿ ಮತ್ತು ಆ ಕ್ಷೇತ್ರದ ಬಗೆಗಿನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಏಕೆಂದರೆ, ಇದರಿಂದ ವಿನಾ:ಕಾರಣ ಕಳಂಕ ಅಂಟಿಕೊಳ್ಳುವ ಅಪಾಯ ತಪ್ಪಿತು ಎಂದು ತಿಳಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು, ಎಸ್ಐಟಿ ಮಾಡಿದ್ದರಿಂದ ಒಳ್ಳೆಯದೇ ಆಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.


ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿಚಾರದಲ್ಲಿ ಮಿಥ್ಯಾರೋಪಕ್ಕೆ ಪ್ರಚಾರ ಸಿಗುವ ಬದಲು ಸತ್ಯ ದೃಢವಾಗಲಿ ಎನ್ನುವ ಉದ್ದೇಶದಿಂದ ಸರ್ಕಾರ ಎಸ್ಐಟಿ ರಚಿಸಬೇಕಾಗಿ ಬಂತು. ಇದನ್ನು ಬಿಜೆಪಿಯವರೂ ಸ್ವಾಗತಿಸಿದ್ದರು. ಈಗ ಇದನ್ನೇ ಅವರು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil) ಆರೋಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜತೆ ಗುರುವಾರ ಮಾತನಾಡಿದ ಅವರು, ಯಾರೋ ಒಬ್ಬ ಅನಾಮಿಕ ತಾನು ಧರ್ಮಸ್ಥಳದಲ್ಲಿ ಹತ್ತಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಲು ಶುರು ಮಾಡಿದ. ಅದೇನೆಂದು ಸರಿಯಾಗಿ ಕಂಡುಕೊಳ್ಳುವುದು ಸರ್ಕಾರದ ಕರ್ತವ್ಯವಾಗಿತ್ತು. ಎಸ್ಐಟಿ ಮಾಡಿದ್ದರಿಂದ ಧರ್ಮಸ್ಥಳದ ಶಕ್ತಿ ಮತ್ತು ಆ ಕ್ಷೇತ್ರದ ಬಗೆಗಿನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಏಕೆಂದರೆ, ಇದರಿಂದ ವಿನಾ ಕಾರಣ ಕಳಂಕ ಅಂಟಿಕೊಳ್ಳುವ ಅಪಾಯ ತಪ್ಪಿತು ಎಂದು ಅವರು ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಏನೋ ನಡೆಯಬಾರದ್ದು ನಡೆದಿರಬಹುದು ಎನ್ನುವ ಅನುಮಾನ ಬಿಜೆಪಿಯವರಿಗೂ ಇತ್ತು. ಇಲ್ಲದಿದ್ದರೆ ಎಸ್ಐಟಿ ರಚನೆಯನ್ನೇಕೆ ಅವರು ಸ್ವಾಗತಿಸುತ್ತಿದ್ದರು? ಈಗ ಅಲ್ಲಿ ಅಂಥದ್ದೇನೂ ನಡೆದಿಲ್ಲ ಎಂದಾಗಿದೆ. ಹೀಗಾಗಿ ಬಿಜೆಪಿ ಇದನ್ನು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹವಣಿಸುತ್ತಿದೆ. ಎಸ್ಐಟಿ ಮಾಡಿದ್ದರಿಂದ ಒಳ್ಳೆಯದೇ ಆಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಬಳಿ ವಿಚಾರಗಳೇ ಇಲ್ಲ
ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಬಾನು ಮುಷ್ತಾಕ್ ಅವರನ್ನು ಕರೆಯಲು ಸರ್ಕಾರ ತೀರ್ಮಾನಿಸಿದೆ. ಬಿಜೆಪಿ ಇದನ್ನೂ ವಿರೋಧಿಸುತ್ತಿದೆ. ಹಿಂದೆ ಕವಿ ಕೆ.ಎಸ್. ನಿಸಾರ್ ಅಹಮದ್ ಕೂಡ ದಸರಾ ಉದ್ಘಾಟಿಸಿದ್ದರು. ವಿಜಯಪುರದಲ್ಲಿ ನನ್ನನ್ನು ಕೂಡ ಮುಸ್ಲಿಮರು ತಮ್ಮ ಧಾರ್ಮಿಕ ಕೇಂದ್ರಗಳಿಗೆ ಆಹ್ವಾನಿಸುತ್ತಾರೆ. ಇದರಲ್ಲೆಲ್ಲ ತಪ್ಪೇನಿದೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಬಿಜೆಪಿಯವರ ಬತ್ತಳಿಕೆಯಲ್ಲಿ ಗಟ್ಟಿ ವಿಚಾರಗಳೇ ಇಲ್ಲ. ಹೀಗಾಗಿಯೇ ಅವರು ಜಾತಿ ಮತ್ತು ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಅಮೆರಿಕದ ತೆರಿಗೆ ಹೇರಿಕೆ, ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ಬೆಂಗಳೂರು ನಗರಕ್ಕೆ ಬೇಕಾದ ಎರಡನೆಯ ವಿಮಾನ ನಿಲ್ದಾಣ ಮತ್ತು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರದ ಜತೆ ಮಾತನಾಡಲಿ ಎಂದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.