IPL 2025: ಧರ್ಮಶಾಲಾದಲ್ಲಿ ಐಪಿಎಲ್ ಪಂದ್ಯಗಳು ನಡೆಯುವುದು ಅನುಮಾನ!
ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಸೇನಾ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ, ಧರ್ಮಶಾಲಾದಲ್ಲಿ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯಗಳು ನಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ. ಪಂಜಾಬ್ ಕಿಂಗ್ಸ್ ತಂಡಕ್ಕೆ ಎರಡನೇ ತವರು ಅಂಗಣವಾದ ಧರ್ಮಶಾಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎದುರು ಆಡಬೇಕಿದೆ.

ಧರ್ಮಶಾಲಾ ಕ್ರಿಕೆಟ್ ಕ್ರೀಡಾಂಗಣ

ನವದೆಹಲಿ: ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ (Operation Sindoor) ಸೇನಾ ಕಾರ್ಯಾಚರಣೆಯು ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಮೇಲೆಯೂ ಪ್ರಭಾವ ಬೀರಿದೆ. ಪಂಜಾಬ್ ಕಿಂಗ್ಸ್ ತಂಡದ ಎರಡನೇ ತವರು ಅಂಗಣವಾದ ಧರ್ಮಶಾಲಾದಲ್ಲಿ (Dharmashala) ಐಪಿಎಲ್ ಪಂದ್ಯಗಳು ನಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ. ಪಂಜಾಬ್ ಕಿಂಗ್ಸ್ನ ಮುಂದಿನ ಎರಡು ಪಂದ್ಯಗಳನ್ನು ಬೇರೆ ಸ್ಥಳಗಳಲ್ಲಿ ಆಯೋಜಿಸುವ ಸಾಧ್ಯತೆ ಇದೆ. ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ ಭಾರತದ 26 ಮಂದಿ ಪ್ರವಾಸಿಗಳು ಹುತಾತ್ಮರಾಗಿದ್ದರು.
ಭಾರತದ ಸೇನೆಯು ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ಗೆ ಸಂಬಂಧಿಸಿದ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಹೊಡೆದುರುಳಿಸಿತು. ಈ ಹಿನ್ನೆಲೆಯಲ್ಲಿ ಧರ್ಮಶಾಲಾ, ಚಂಡೀಗಢ, ಲೇಹ್, ಜಮ್ಮು, ಶ್ರೀನಗರ ಮತ್ತು ಅಮೃತಸರ ಸೇರಿದಂತೆ ವಾಯುವ್ಯ ಭಾರತದ ಹಲವಾರು ವಿಮಾನ ನಿಲ್ದಾಣಗಳಲ್ಲಿ ವಿಮಾನ ಕಾರ್ಯಾಚರಣೆಯನ್ನು ಮುಂದಿನ ಸೂಚನೆವರೆಗೆ ಸ್ಥಗಿತಗೊಳಿಸಲಾಗಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಯೋತ್ಪಾದಕ ನೆಲೆ ಶಿಬಿರಗಳ ಮೇಲೆ ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ನಂತರ ಈ ಬೆಳವಣಿಗೆಗಳು ನಡೆದಿವೆ.
IPL 2025: 43 ರನ್ ಗಳಿಸಿ ವಿರಾಟ್ ಕೊಹ್ಲಿ ಒಳಗೊಂಡ ಎಲೈಟ್ ಲಿಸ್ಟ್ ಸೇರಿದ ಶುಭಮನ್ ಗಿಲ್!
ಮೇ 8 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯು ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣವನ್ನು ಬಂದ್ ಮಾಡುವುದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಧರ್ಮಶಾಲಾಗೆ ಬಂದಿಳಿದಿತ್ತು. ಆದರೆ, ಈ ಪಂದ್ಯವನ್ನು ವೇಳಾಪಟ್ಟಿಯಂತೆ ನಡೆಸುವ ಬಗ್ಗೆ ಇನ್ನು ಯಾವುದೇ ಸ್ಟಷ್ಟತೆ ಇಲ್ಲ. ಕೇಂದ್ರ ಸರ್ಕಾರದಿಂದ ಆದೇಶ ಬಂದ ಬಳಿಕ ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳಲಿದೆ.
ಮುಂಬೈ ಇಂಡಿಯನ್ಸ್ಗೆ ಪ್ರಯಾಣ ಕಠಿಣ
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದದ ಪಂದ್ಯದ ಬಳಿಕ ಪಂಜಾಬ್ ಕಿಂಗ್ಸ್ ತಂಡ, ಮೇ 11 ರಂದು ಮುಂಬೈ ಇಂಡಿಯನ್ಸ್ ವಿರುದ್ದ ಆಡಲಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ಗುರುವಾರ ಧರ್ಮಶಾಲಾಗೆ ಪ್ರಯಾಣ ಬೆಳೆಸಬೇಕಿದೆ. ಆದರೆ, ವಿಮಾನ ಪ್ರಯಾಣವನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಧರ್ಮಶಾಲಾದ ಪ್ರಯಾಣ ಕಠಿಣವಾಗಿದೆ.
ಧರ್ಮಶಾಲಾ ಗಡಿಗೆ ಹತ್ತಿರವಾಗಿರುವುದರಿಂದ ಪಂದ್ಯ ನಡೆಯುವುದು ಅನುಮಾನ. ಐಪಿಎಲ್ನ ಲೀಗ್ ಹಂತವು ಅಂತ್ಯಗೊಳ್ಳುತ್ತಿರುವುದರಿಂದ ಮತ್ತು ಪ್ರಯಾಣ ನಿರ್ಬಂಧಗಳು ತಂಡದ ಲಾಜಿಸ್ಟಿಕ್ಸ್ ಮತ್ತು ಸಿದ್ಧತೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಬಿಸಿಸಿಐ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.
ಇದರ ಹೊರತಾಗಿಯೂ, ಭೌಗೋಳಿಕ ರಾಜಕೀಯ ಪರಿಸ್ಥಿತಿ ಕಠಿಣವಾಗಿದ್ದರೂ ಐಪಿಎಲ್ ಪಂದ್ಯ ಇದೀಗ ನಿಗದಿಯಂತೆ ಮುಂದುವರಿಯುತ್ತದೆ ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.