KSCA polls: ಕೆಎಸ್ಸಿಎ ಚುನಾವಣೆಗೆ ವೆಂಕಟೇಶ್ ಪ್ರಸಾದ್, ವಿನಯ್ ಮೃತ್ಯುಂಜಯ ಸ್ಪರ್ಧೆ!
ವಿನಯ್ ರಾಜ್ಯ ಕ್ರಿಕೆಟ್ ಸಂಸ್ಥೆಯನ್ನು ಮತ್ತೊಮ್ಮೆ ಉನ್ನತ ಮಟ್ಟಕ್ಕೇರಿಸುವ ವಿಶ್ವಾಸ ಹೊಂದಿದ್ದಾರೆ. ಕ್ರೀಡಾಂಗಣದ ಸಬ್ ಏರ್ ಸಿಸ್ಟಮ್ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳ ಹಿಂದೆ ವಿನಯ್ ಕೊಡುಗೆಯಿದೆ. ಸದ್ಯ ಕಾಲ್ತುಳಿತದಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹಲವು ಮಹತ್ವದ ಟೂರ್ನಿ, ಸರಣಿ ಸ್ಥಳಾಂತರಗೊಂಡಿವೆ.


ಬೆಂಗಳೂರು: ಅಕ್ಟೋಬರ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ) ಚುನಾವಣೆಗೆ(KSCA polls) ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಸ್ಪರ್ಧಿಸಲಿದ್ದಾರೆ. ಅವರ ಜತೆಗೆ ಕೆಎಸ್ಸಿಎ(KSCA) ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ(Vinay) ಕೂಡಾ ಚುನಾವಣಾ ಕಣಕ್ಕಿಳಿಯಲಿದ್ದಾರೆ ಎಂದು ಕೆಎಸ್ಸಿಎ ಉನ್ನತ ಮೂಲಗಳು ತಿಳಿಸಿವೆ.
56 ವರ್ಷದ ವೆಂಕಟೇಶ್ ಈ ಹಿಂದೆ 2010ರಿಂದ 2013ರ ವರೆಗೆ ಕೆಎಸ್ಸಿಎ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆಗ ಅನಿಲ್ ಕುಂಬ್ಳೆ ಅಧ್ಯಕ್ಷರಾಗಿದ್ದರು. ಜಾವಗಲ್ ಶ್ರೀನಾಥ್ ಕಾರ್ಯದರ್ಶಿಯಾಗಿದ್ದರು. 12 ವರ್ಷ ಬಳಿಕ ವೆಂಕಟೇಶ್ ಮತ್ತೆ ಕೆಎಸ್ಸಿಎಗೆ ಆಗಮಿಸುವ ನಿರೀಕ್ಷೆಯಲ್ಲಿದ್ದಾರೆ. ಭಾರತದ ಪರ 33 ಟೆಸ್ಟ್, 161 ಏಕದಿನ ಪಂದ್ಯಗಳನ್ನಾಡಿರುವ ವೆಂಕಟೇಶ್ ಕ್ರಮವಾಗಿ 96 ಮತ್ತು196 ವಿಕೆಟ್ ಕಿತ್ತಿದ್ದಾರೆ.
ಕೆಎಸ್ಸಿಎ ಆಡಳಿತ ಸಮಿತಿ ಸದಸ್ಯ, ವಕ್ತಾರರಾಗಿದ್ದ ವಿನಯ್ ಮೃತ್ಯುಂಜಯ 2019ರಿಂದ 2022ರ ವರೆಗೆ ಖಜಾಂಚಿಯಾಗಿ ಕಾರ್ಯನಿರ್ವಹಿಸಿದ್ದರು. ಅವರು ಬಿಸಿಸಿಐ ಆರ್ಥಿಕ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಸದ್ಯ ಕೆಎಸ್ಸಿಎಗೆ ರಘುರಾಮ್ ಭಟ್ ಅಧ್ಯಕ್ಷರಾಗಿದ್ದಾರೆ. ಕಾರ್ಯದರ್ಶಿಯಾಗಿದ್ದ ಎ.ಶಂಕರ್, ಖಜಾಂಚಿಯಾಗಿದ್ದ ಇ.ಎಸ್. ಜೈರಾಮ್ ಇತ್ತೀಚೆಗೆ ಸಂಭವಿಸಿದ ಭೀಕರ ಕಾಲ್ತುಳಿತದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ ತಿರುವನಂತಪುರಕ್ಕೆ ಮಹಿಳಾ ವಿಶ್ವಕಪ್ ಟೂರ್ನಿ ಸ್ಥಳಾಂತರ?
ವಿನಯ್ ರಾಜ್ಯ ಕ್ರಿಕೆಟ್ ಸಂಸ್ಥೆಯನ್ನು ಮತ್ತೊಮ್ಮೆ ಉನ್ನತ ಮಟ್ಟಕ್ಕೇರಿಸುವ ವಿಶ್ವಾಸ ಹೊಂದಿದ್ದಾರೆ. ಕ್ರೀಡಾಂಗಣದ ಸಬ್ ಏರ್ ಸಿಸ್ಟಮ್ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳ ಹಿಂದೆ ವಿನಯ್ ಕೊಡುಗೆಯಿದೆ. ಸದ್ಯ ಕಾಲ್ತುಳಿತದಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹಲವು ಮಹತ್ವದ ಟೂರ್ನಿ, ಸರಣಿ ಸ್ಥಳಾಂತರಗೊಂಡಿವೆ.